ಬೆಂಗಳೂರು, 28- ವೇತನ ಪರಿಷ್ಕರಣೆಗೆ ಆಗ್ರಹಿಸಿ ಮತ್ತು 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆ ಮಾರ್ಚ 1ರಿಂದ ಅನಿರ್ದಿಷ್ಟಾವಧಿಗೆ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಸಲಿದ್ದು, ಬಹುತೇಕ ಸೇವೆಗಳು ವ್ಯತ್ಯಯವಾಗಲಿದೆ.
ಶಾಲೆ-ಕಾಲೇಜು, ತ್ಯಾಜ್ಯ ವಿಲೇವಾರಿ, ಕಂದಾಯ ಮತ್ತು ಆರೋಗ್ಯ ಸೇವೆಗಳಲ್ಲಿ ವ್ಯತ್ಯಯವುಂಟಾಗಲಿದೆ. ನೌಕರರ ಸಂಘ ಕರೆ ನೀಡಿರುವ ಮುಷ್ಕರಕ್ಕೆ ಗ್ರಾಮ ಪಂಚಾಯತಿ ಸಿಬ್ಭಂದಿ, ನಗರ ಸ್ಥಳೀಯ ಸಂಸ್ಥೆಗಳು, ಬಿಬಿಎಂಪಿ ಕಾಯಂ ಪೌರ ಕಾರ್ಮಿಕರು, ಉಪ ನೋಂದಣಾಧಿಕಾರಿ ಕಚೇರಿ ಸಿಬ್ಬಂದಿ ಬೆಂಬಲ ಸೂಚಿಸಿದ್ದಾರೆ. ಗ್ರಾಮ ಲೆಕ್ಕಿಗರಿಂದ ಹೆಚ್ಚುವರಿ ಜಿಲ್ಲಾಧಿಕಾರಿಗಳ ವರೆಗೆ ಸಿಬ್ಬಂದಿ ಕರ್ತವ್ಯಕ್ಕೆ ಗೈರು ಹಾಜರಾಗುತ್ತಿದ್ದು ಬಹುತೇಕ ಸೇವೆಗಳಿಗೆ ತೊಂದರೆಯಾಗಲಿದೆ.
ಈ ಬಾರಿ ಮಂಡಿಸಿದ ಮುಂಗಡಪತ್ರದಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಪ್ರಸ್ತಾಪ ಮಾಡಿಲ್ಲದ ಕಾರಣ ಮತ್ತು ಹೊಸ ಪಿಂಚಣಿ ನೀತಿ ರದ್ಧತಿಗೆ ಆಗ್ರಹಿಸಿ 5.11 ಲಕ್ಷ ನೌಕರರು ನಾಳೆಯಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರ ನಡೆಸಲಿದ್ದಾರೆ.
ಮುಷ್ಕರ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದಂತೆ, ನೌಕರರು ಪ್ರತಿಭಟನೆ, ಉಪವಾಸ ಸತ್ಯಾಗ್ರಹ, ಧರಣಿ, ಸರ್ಕಾರದ ವಿರುದ್ಧ ಘೋಷಣೆ ಕೂಗುವಂತಿಲ್ಲ ಎಂದು ನೌಕರರ ಸಂಘ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ, ಒಳರೋಗಿಗಳ ಆರೈಕೆ ಸೇವೆಗಳು ದೊರಕುತ್ತವೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ಮುಷ್ಕರ ನಡೆಸಲಿದ್ದಾರೆ. ಬಸ್ ಗಳ ಸಂಚಾರ ಎಂದಿನಂತಿರುತ್ತದೆ. ವಿವಿಗಳಲ್ಲಿ ತರಗತಿಗಳು ಎಂದಿನಂತೆ ನಡೆಯಲಿವೆ.