ನವದೆಹಲಿ, ಜ 25- ಕೃಷಿ ವಲಯ ಸುಧಾರಣೆಗೆ ಕೇಂದ್ರ ಸರ್ಕಾರ ತಂದಿರುವ ಹೊಸ ಕೃಷಿ ಕಾಯ್ದೆಗಳ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ಕಳೆದ ಎರಡು ತಿಂಗಳುಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಗಳು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿವೆ.
ಗಣರಾಜ್ಯೋತ್ಸವ ದಿನದಂದು ಒಂದು ಕಡೆ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ಸಿದ್ಧತೆ ನಡೆಸುತ್ತಿರುವ ಜತೆಗೆ ಫೆಬ್ರವರಿ 1 ರಂದು ಸಂಸತ್ ಭವನಕ್ಕೆ ವಿವಿಧ ಪ್ರದೇಶಗಳಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದು ಸೋಮವಾರ ಪ್ರಕಟಿಸಿವೆ. ಕ್ರಾಂತಿಕಾರಿ ಕಿಸಾನ್ ಯೂನಿಯನ್ ನಾಯಕ ದರ್ಶನ್ ಪಾಲ್ ಸೋಮವಾರ ಮಾಧ್ಯಮಗಳಿಗೆ ಈ ವಿಷಯ ತಿಳಿಸಿದ್ದಾರೆ.
ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಕಳೆದ ವರ್ಷ ನವೆಂಬರ್ 26 ರಿಂದ ದೆಹಲಿಯ ಹಲವು ಗಡಿ ಪ್ರದೇಶಗಳಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ. ಆದರೆ, ತಿಂಗಳ ಅಂತ್ಯದ ವೇಳೆಗೆ ತಮ್ಮ ಬೇಡಿಕೆಗಳು ಈಡೇರದಿದ್ದರೆ, ಫೆಬ್ರವರಿ 1 ರಂದು ವಿವಿಧ ಪ್ರದೇಶಗಳಿಂದ ದೆಹಲಿಯ ಸಂಸತ್ ಭವನದವರೆಗೆ ಪಾದಯಾತ್ರೆ ನಡೆಸಲಿದ್ದೇವೆ ಎಂದು ದರ್ಶನ್ ಪಾಲ್ ಹೇಳಿದ್ದಾರೆ. ಕೇಂದ್ರ ಸರ್ಕಾರ 2021-22ನೇ ಹಣಕಾಸು ವರ್ಷದ ಬಜೆಟ್ ಅನ್ನು ಅದೇ ದಿನ ಸಂಸತ್ತಿನಲ್ಲಿ ಮಂಡಿಸಲಿದೆ.