ಬೆಳಗಾವಿ: ಫೆ.13: ಜಾಂಬೋಟಿ ರಸ್ತೆ ಬಳಿಯ ಅಣೆಕಟ್ಟು ಡ್ಯಾಂ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಮತ್ತೊಮ್ಮೆ ತಾಂತ್ರಿಕವಾಗಿ ಪರಿಶೀಲಿಸಿದ ಬಳಿಕ ನಡೆಸಿ ಜೂನ್ ತಿಂಗಳಲ್ಲಿ ಅಣೆಕಟ್ಟು ಉದ್ಘಾಟಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ತಿಳಿಸಿದರು.
ಜಾಂಬೋಟಿ ರಸ್ತೆಯ ಬಳಿಯಲ್ಲಿರುವ ಕಿಣೆ ಅಣೆಕಟ್ಟು ನಿರ್ಮಾಣ ಸ್ಥಳದಲ್ಲಿ ಶನಿವಾರ ನಿರ್ಮಾಣ ಕಾಮಗಾರಿ ಪರಿಶೀಲನೆ ಸಂದರ್ಭದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
ಹಲವು ವರ್ಷಗಳಿಂದ ನಡೆಯುತ್ತಿರುವ ಕಿಣೆ ಡ್ಯಾಂ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.
ಜಲಾಶಯದಲ್ಲಿ ನೀರು ಸಂಗ್ರಹಿಸುವುದರಿಂದ ಅನೇಕ ರೈತರಿಗೆ ಹಾಗೂ ಸ್ಥಳೀಯ ಗ್ರಾಮಗಳಿಗೆ ನೀರಿನ ಸೌಲಭ್ಯ ಲಭಿಸಲಿದೆ. ಇದರಿಂದ ಕೃಷಿ ಚಟವಟಿಕೆಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಡ್ಯಾಂ ಬಳಿ ಬೃಂದಾವನ ಮಾದರಿ ಉದ್ಯಾನ ನಿರ್ಮಾಣ ಮಾಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಹೊರಗುತ್ತಿಗೆದಾರರ ನೇಮಕ ಮಾಡಿ ಸದ್ಯದಲ್ಲೇ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಸಚಿವ ರಮೇಶ ಜಾರಕಿಹೊಳಿ ಅವರು ಸುದ್ದಿಗಾರರಿಗೆ ತಿಳಿಸಿದರು.
ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಸಂಜಯ ಪಾಟೀಲ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.