ಬೆಂಗಳೂರು: ಮಾ 5- ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳೆರಡರಲ್ಲಿಯೂ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವ್ಯವಸ್ಥೆ ಕಲ್ಪಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕೋವಿಡ್ ಚಿಕಿತ್ಸೆ, ಲಸಿಕೆ ಅಭಿವೃದ್ದಿ ಹಾಗೂ ಸಾಂಕ್ರಾಮಿಕ ನಿಯಂತ್ರಣಕ್ಕಾಗಿಯೇ ಪಿ.ಎಂ ಕೇರ್ಸ್ ನಿಧಿಯಡಿ ಕೇಂದ್ರ ಸರ್ಕಾರ ಹಣ ಸಂಗ್ರಹಿಸಿದೆ. ಆ ನಿಧಿಯನ್ನು ಕೋವಿಡ್ ಲಸಿಕೆಯ ಉಚಿತ ವಿತರಣೆಗೆ ಬಳಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಕ್ರವಾರ ಬರೆದಿರುವ ಪತ್ರದಲ್ಲಿ ಕೋರಿದ್ದಾರೆ.
ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಕೋವಿಡ್ ಲಸಿಕೆಗೆ 250 ರೂ ಶುಲ್ಕ ನಿಗದಿಪಡಿಸಿರುವುದರಿಂದ ಶೇ. 70 ರಷ್ಟಿರುವ ಬಡವರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ. ಇದರಿಂದಾಗಿಕೋವಿಡ್ ವಿರುದ್ಧದ ಸಮರಕ್ಕೆ ಹಿನ್ನಡೆಯಾಗಿದೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.
ಈಗಾಗಲೇ ಭಾರತ ಎರಡು ಬಗೆಯ ಕೋವಿಡ್ ಲಸಿಕೆಗಳನ್ನು ಕಂಡು ಹಿಡಿದಿದ್ದರೂ ನಿರೀಕ್ಷಿತ ಯಶಸ್ಸು ಸಿಕ್ಕಿಲ್ಲ. ದೇಶದಲ್ಲಿ ಈವರೆಗೆ ಶೇ 0.5 ರಷ್ಟು ಜನಸಂಖ್ಯೆಗಷ್ಟೆ ಲಸಿಕೆ ನೀಡಿರುವುದು ವಿಷಾದನೀಯ ಬೆಳವಣಿಗೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಕೊರೊನಾ ಸೋಂಕು ಉಲ್ಭಣಗೊಳ್ಳುತ್ತಿರುವುದು ಕಳವಳಕಾರಿ ಬೆಳವಣಿಗೆ. ಈ ಪರಿಸ್ಥಿತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ವಹಿಸಿದರೆ ಅನಾಹುತವಾಗಬಹುದು ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.