ಬೆಂಗಳೂರು, ಮಾ.31- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವರಾಗಿರುವ ಕೆ.ಎಸ್.ಈಶ್ವರಪ್ಪ, ತಮ್ಮ ಇಲಾಖೆಯ ಕೆಲಸಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾನೂನು ಮೀರಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಸೇರಿದಂತೆ ದೆಹಲಿಯ ವರಿಷ್ಠರಿಗೆ ದೂರು ನೀಡಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಚಿವನಾಗಿ ಕೆಲಸ ಮಾಡುತ್ತಿರುವ ತಮ್ಮ ಗಮನಕ್ಕೆ ಬಾರದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಇಲಾಖೆಯ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಪಕ್ಷದ ಹಿರಿಯ ಸಚಿವನಾಗಿರುವ ತಮಗೆ ಇದು ನೋವಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾಗಿರುವ 1200 ಕೋಟಿ ರೂ.ಗೆ ಸಂಬಂಧಿಸಿದಂತೆ ಕಾನೂನು ಮೀರಿ ಸುಖಾಸುಮ್ಮನೆ ತಮ್ಮ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಆರ್ಡಿಪಿಆರ್ ಇಲಾಖೆಯ ಅನುದಾನವನ್ನು ನೇರವಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಂಚಿದ್ದಾರೆ ಎಂದು ರಾಜ್ಯಪಾಲ ವಜುಭಾಯಿವಾಲಾ ಅವರನ್ನು ಭೇಟಿ ಮಾಡಿ ಲಿಖಿತ ದೂರು ಈಶ್ವರಪ್ಪ ದೂರು ನೀಡಿದ್ದಾರೆ.