ಹುಬ್ಬಳ್ಳಿ : ನವೆಂಬರ್ 23ರಂದು ಸರ್ವೋಚ್ಛ ನ್ಯಾಯಾಲಯದಲ್ಲಿ ಬರುವ ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಚಾರಣೆಗೆ ಬರಲಿದ್ದು ರಾಜ್ಯದ ಪರವಾಗಿ ವಾದ ಮಂಡಿಸಲು ಅನುಭವಿ ಹಾಗೂ ಹಿರಿಯ ಕಾನೂನು ತಜ್ಞರ ತಂಡ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿವಿವಾದ ಕುರಿತು ಅಡ್ವೋಕೇಟ್ ಜನರಲ್ ಅವರೊಂದಿಗೆ ಚರ್ಚಿಸಿ , ಸಾಕಷ್ಟು ಅಧ್ಯಯನ ಸಹ ನಡೆಸಲಾಗಿದೆ. ವಾದ ಮಂಡನೆಗೆ ಹಿರಿಯ, ಅನುಭವಿ ವಕೀಲರನ್ನು ನೇಮಿಸಲು ಸೂಚಿಸಲಾಗಿದೆ ಎಂದರು.
ಪೊಲೀಸ್ ಇಲಾಖೆಗೆ ಸಂಬಂಧಿಸಿದ ಮಾತನಾಡಿದ ಅವರು, ರಾಘವೇಂದ್ರ ಔರಾದಕರ ವರದಿ ಅನುಷ್ಠಾನಗೊಳ್ಳುತ್ತಿದೆ. ಸಿಬ್ಬಂದಿಯೂ ಹೆಚ್ಚಿನ ಕೌಶಲ್ಯ ಬೆಳೆಸಿಕೊಳ್ಳಬೇಕು. ಕಂಪ್ಯೂಟರ್ ಶಿಕ್ಷಣ ಕಡ್ಡಾಯಗೊಳಿಸಲಾಗಿದೆ. ಎಲ್ಲ ಇಲಾಖೆಯ ಸಿಬ್ಬಂದಿಗೂ ಇದು ಕಡ್ಡಾಯವಾಗಿದೆ ಎಂದರು.