ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಆಹಾರ ಇಲಾಖೆ ಸಚಿವ ಉಮೇಶ ಕತ್ತಿ ಅವರ ಮನೆಗೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಬಳಿಕ ಮಾತನಾಡಿದ ಅವರು, ಉಮೇಶ ಕತ್ತಿ ಅವರ ರಾಜಕೀಯ ಜೀವನ ಪುಸ್ತಕವಾಗಬೇಕು. ಸಚಿವ ಉಮೇಶ ಕತ್ತಿ ನನ್ನ ಆತ್ಮೀಯ ಮಿತ್ರ. ಹೀಗಾಗಿ ನಾವು ಬೆಂಗಳೂರು ದೆಹಲಿಯಲ್ಲಿ ಅನೇಕ ಬಾರಿ ಮಾತುಕತೆ ನಡೆಸಿದ್ದೇನೆ. ಪಕ್ಷ ಕಟ್ಟುವ ಬಗ್ಗೆ ಅನೇಕ ಸಲಹೆ ನೀಡುತ್ತಿದ್ದರು. ಉಮೇಶ ಕತ್ತಿ ಬಿಂದಾಸ್ ವ್ಯಕ್ತಿಯಾಗಿದ್ದರು. ಅವರ ಅಗಲಿಕೆಯಿಂದಾಗಿ ಪಕ್ಷ ಹಾಗೂ ರಾಜ್ಯಕ್ಕೆ ನಷ್ಟ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
40 ವರ್ಷಗಳ ಕಾಲದಿಂದ ಜನ ಅವರಿಗೆ ಆಶೀರ್ವಾದ ಮಾಡಿದ್ದಾರೆ. ಅವರ ರಾಜಕೀಯ ಜೀವನವು ಪುಸ್ತಕದ ರೂಪದಲ್ಲಿ ಹೊರ ಬರಬೇಕು. ಒಬ್ಬ ರಾಜಕೀಯ ನಾಯಕ 40 ವರ್ಷಗಳ ಶಾಸಕನಾಗಿ ಮಾಡಿದ ಕೆಲಸ, ಅವರ ದೂರದೃಷ್ಟಿ, ಅವರ ಆಲೋಚನೆಗಳು ಎಲ್ಲರಿಗೂ ಗೊತ್ತಾಗಬೇಕಿದೆ ಎಂದರು.