ಬಾಗಲಕೋಟ : ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ರೈತ ಸಂಘಟನೆಗಳು ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು ಇದೀಗ ಚಳವಳಿ ತೀವ್ರಗೊಂಡಿದೆ. ಮುಧೋಳ ನಗರದ ಬಹುತೇಕ ಅಂಗಡಿ ಮುಂಗಟ್ಟುಗಳನ್ನು ಇಂದು ಬಂದ್ ಮಾಡಲಾಗಿತ್ತು. ಬಸ್ ನಿಲ್ದಾಣಗಳು ಬಿಕೋ ಎನ್ನುತ್ತಿದ್ದವು.
ನಾಳೆ ಗುರುವಾರವೂ ಕೂಡ ಮುಧೋಳ ಪಟ್ಟಣದಲ್ಲಿ ಬಂದ್ ಮುಂದುವರೆಯಲಿದೆ ಎಂದು ಪ್ರತಿಭಟನಾ ನಿರತ ರೈತರು ಹೇಳಿದ್ದಾರೆ.
ಸಚಿವರು ಭರವಸೆ ಈಡೇರಿಸದ ಹಿನ್ನೆಲೆ ನಾಳೆ ಮತ್ತೆ ಪ್ರತಿಭಟನೆ ಮುಂದುವರೆಸಲಿದ್ದೇವೆ, ಬಂದ್ ಮಾಡಲಿದ್ದೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ. ನಾಳೆಯೂ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ, ಅಂಗಡಿ ಮುಂಗಟ್ಟುಗಳು ಬಂದ್ ಆಗಲಿವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
ಈ ಹಿನ್ನೆಲೆ ಬಾಗಲಕೋಟ ಜಿಲ್ಲಾದ್ಯಂತ ಇಂದಿನಿಂದ ನವೆಂಬರ್ 19 ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿದೆ.
ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ಮುಧೋಳ ತಾಲೂಕಿನ ಅನೇಕ ಭಾಗಗಳಲ್ಲಿ ರೈತರು ರಾಜ್ಯ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.