ಬೆಳಗಾವಿ, ಮೇ 28 : ₹4,500 ಕೋಟಿ ವಂಚನೆ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಾನಂದ ನೀಲಣ್ಣವರ ಅವರನ್ನು ಜೂನ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ. ಸಿಐಡಿ ಅಧಿಕಾರಿಗಳ 10 ದಿನಗಳ ಪೊಲೀಸ್ ವಶ ಗುರುವಾರ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಬಕ್ರೀದ್ ಹಬ್ಬದ ಪ್ರಯುಕ್ತ ಗುರುವಾರ ನ್ಯಾಯಾಲಯಕ್ಕೆ ರಜೆ ಇದ್ದ ಕಾರಣ ಬುಧವಾರ ಸಂಜೆಲೇ ಶಿವಾನಂದ ನೀಲಣ್ಣವರ ಅವರನ್ನು ಬೆಳಗಾವಿಯ 2ನೇ ಹೆಚ್ಚುವರಿ ಸತ್ರ ನ್ಯಾಯಾಲಯದ ಮುಂದೆ ಸಿಐಡಿ ಅಧಿಕಾರಿಗಳು ಹಾಜರುಪಡಿಸಿದರು.
ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಮೂಲಕ ಸಾರ್ವಜನಿಕರಿಂದ ಕಾನೂನುಬಾಹಿರವಾಗಿ ₹4,500 ಕೋಟಿ ಸಂಗ್ರಹಿಸಿರುವ ಆರೋಪವನ್ನು ಶಿವಾನಂದ ನೀಲಣ್ಣವರ ಎದುರಿಸುತ್ತಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿರುವ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದರು.
ಸಿಐಡಿ ಡಿವೈಎಸ್ಪಿ ಕೋದಂಡರಾಮ್ ನೇತೃತ್ವದ ತಂಡ ಮೊದಲು ಶಿವಾನಂದ ನೀಲಣ್ಣವರ ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಬಳಿಕ ನ್ಯಾಯಾಲಯಕ್ಕೆ ಕರೆತಂದಿತ್ತು.
ಮನವಿಯನ್ನು ಪರಿಶೀಲಿಸಿದ ನ್ಯಾಯಾಧೀಶ ಗಂಗಾಧರ್ ಕೆ ಅವರು ಶಿವಾನಂದ ನೀಲಣ್ಣವರ ಅವರನ್ನು ಜೂನ್ 9ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.
ಪ್ರಕರಣದ ವಿಚಾರಣೆಗೆ ಸಂಬಂಧಿಸಿ ಸಿಐಡಿ ಈಗಾಗಲೇ ಅವರನ್ನು 10 ದಿನಗಳ ಕಾಲ ತನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ನ್ಯಾಯಾಂಗ ಬಂಧನ ವಿಧಿಸಿದ ಬಳಿಕ ಅವರನ್ನು ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ.