ಬೀದರ್, ಮೇ 9 : ರಾಜ್ಯದಲ್ಲಿ ಬೀದಿನಾಯಿಗಳ ಹಾವಳಿ ಮುಂದುವರಿದಿರುವ ನಡುವೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದಲ್ಲಿ ಬೀದಿನಾಯಿ ದಾಳಿಗೆ 5 ತಿಂಗಳ ಹಸುಗೂಸು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಶಿವಾನಿ ಮೃತಪಟ್ಟ ಮಗು. ಸುಧಾ ಮತ್ತು ಸಿದ್ದಪ್ಪ ದಂಪತಿಯ ಪುತ್ರಿಯಾಗಿದ್ದಾಳೆ.
ಮಗುವನ್ನು ಮನೆಯ ಪಡಸಾಲೆಯಲ್ಲಿ ಮಲಗಿಸಿ ತಾಯಿ ಕೆಲಸ ಮಾಡುತ್ತಿದ್ದ ವೇಳೆ ಬೀದಿನಾಯಿ ಮನೆಯೊಳಗೆ ನುಗ್ಗಿ ಮಗುವಿನ ಮೇಲೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.
ನಾಯಿ ಮಗುವನ್ನು ಮನಬಂದಂತೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿದೆ. ತಕ್ಷಣ ಮಗುವನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಬೀದಿನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.