ಹೊಸದಿಲ್ಲಿ, ಮೇ 30 : ಭಾರತೀಯ ಸ್ಪರ್ಧಾತ್ಮಕ ಆಯೋಗದ (ಸಿಸಿಐ) ಮೊದಲ ಅಧ್ಯಕ್ಷ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಧನೇಂದ್ರ ಕುಮಾರ (80) ಅವರು ಹೊಸದಿಲ್ಲಿಯ ಹೌಸಖಾಸ್ ಪ್ರದೇಶದಲ್ಲಿರುವ ತಮ್ಮ ನಿವಾಸದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದಾರೆ. ಹವಾನಿಯಂತ್ರಣ ಯಂತ್ರ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಗುರುವಾರ ರಾತ್ರಿ ಸುಮಾರು 11.18 ಗಂಟೆ ವೇಳೆಗೆ ಹೌಜ್ ಖಾಸ್ ಎನ್ಕ್ಲೇವ್ನಲ್ಲಿರುವ ಧನೇಂದ್ರ ಕುಮಾರ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಸಂಭವಿಸಿದ ವೇಳೆ ಧನೇಂದ್ರ ಕುಮಾರ, ಅವರ ಪತ್ನಿ ಮಂಜು ಗರ್ಗ್, ಪುತ್ರ ಗೌರವ್ ಹಾಗೂ ಇಬ್ಬರು ಮನೆಕೆಲಸಗಾರರು ಸೇರಿದಂತೆ ಒಟ್ಟು ಐವರು ಮನೆಯೊಳಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ಎರಡು ಅಗ್ನಿಶಾಮಕ ವಾಹನಗಳ ಸಹಾಯದಿಂದ ಸುಮಾರು 1 ಗಂಟೆ 40 ನಿಮಿಷಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಸ್ಥಳೀಯರ ನೆರವಿನಿಂದ ಮನೆಯೊಳಗಿದ್ದವರನ್ನು ಹೊರಗೆ ಕರೆತಂದು ಆಸ್ಪತ್ರೆಗೆ ದಾಖಲಿಸಲಾಯಿತು.
ಪ್ರಾಥಮಿಕ ತನಿಖೆಯ ಪ್ರಕಾರ, ಪುತ್ರ ಗೌರವ್ ಅವರ ಕೊಠಡಿಯಲ್ಲಿ ಅಳವಡಿಸಲಾಗಿದ್ದ ಹವಾನಿಯಂತ್ರಣ ಯಂತ್ರದ ಒಳ ಘಟಕ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕ್ಷಣಾರ್ಧದಲ್ಲಿ ಕೊಠಡಿ ಹಾಗೂ ಮನೆಯ ಇತರೆ ಭಾಗಗಳಿಗೆ ವ್ಯಾಪಿಸಿ ದಟ್ಟ ಹೊಗೆ ಆವರಿಸಿದೆ.
ಹೊಗೆಯಿಂದ ಅಸ್ವಸ್ಥಗೊಂಡಿದ್ದ ಧನೇಂದ್ರ ಕುಮಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅವರ ಪುತ್ರ ಗೌರವ್ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಟುಂಬದ ಮೂಲಗಳ ಪ್ರಕಾರ, ವೀಲ್ಚೇರ್ ಬಳಸುತ್ತಿದ್ದ ತಾಯಿಯನ್ನು ಸುರಕ್ಷಿತವಾಗಿ ಹೊರಗೆ ಕರೆತಂದ ಬಳಿಕ ಗೌರವ ಅವರು ತಂದೆಯನ್ನು ರಕ್ಷಿಸಲು ಮತ್ತೆ ಮನೆಯೊಳಗೆ ತೆರಳಿದ್ದರು. ಈ ವೇಳೆ ಹೊಗೆಯಿಂದ ತೊಂದರೆ ಉಂಟಾಗಿ ಅವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
1968ರ ಹರಿಯಾಣ ಕೇಡರ್ನ ಐಎಎಸ್ ಅಧಿಕಾರಿಯಾಗಿದ್ದ ಧನೇಂದ್ರ ಕುಮಾರ ಅವರು ಹರಿಯಾಣದ ಮುಖ್ಯ ಕಾರ್ಯದರ್ಶಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧ್ಯಕ್ಷ, ದೂರಸಂಪರ್ಕ ಕಾರ್ಯದರ್ಶಿ ಸೇರಿದಂತೆ ಹಲವು ಮಹತ್ವದ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಬಳಿಕ ವಿಶ್ವಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. 2009ರಿಂದ 2011ರವರೆಗೆ ಭಾರತೀಯ ಸ್ಪರ್ಧಾತ್ಮಕ ಆಯೋಗದ ಮೊದಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಘಟನೆಯಿಂದ ಮನೆಗೆ ವ್ಯಾಪಕ ಹಾನಿಯಾಗಿದ್ದು, ಅಗ್ನಿ ಅವಘಡದ ನಿಖರ ಕಾರಣ ಕುರಿತು ಪೊಲೀಸರು ಹಾಗೂ ತಾಂತ್ರಿಕ ತಜ್ಞರು ತನಿಖೆ ಮುಂದುವರಿಸಿದ್ದಾರೆ.