ಬೆಂಗಳೂರು, ಮೇ 13 : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ಮಾಪಕರಾದ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಕನ್ನಡ ಚಿತ್ರರಂಗದಲ್ಲಿ ತೀವ್ರ ಶೋಕದ ವಾತಾವರಣ ನಿರ್ಮಾಣವಾಗಿದೆ.
ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಅಭಿನಯ ಶೈಲಿಯಿಂದ ಗುರುತಿಸಿಕೊಂಡಿದ್ದ ದಿಲೀಪ ರಾಜ್ ಅವರು 2005ರಲ್ಲಿ ಬಿಡುಗಡೆಯಾದ ಬಾಯ್ ಫ್ರೆಂಡ್ ಚಿತ್ರದ ಮೂಲಕ ನಾಯಕನಾಗಿ ಸಿನಿರಂಗ ಪ್ರವೇಶಿಸಿದ್ದರು. ಮೊದಲ ಚಿತ್ರದಲ್ಲಿಯೇ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಗಮನ ಸೆಳೆದ ಅವರು ಬಳಿಕ ವಿಭಿನ್ನ ಪಾತ್ರಗಳಲ್ಲಿ ನಟಿಸಿ ಜನಮನ ಗೆದ್ದಿದ್ದರು.
ಮುಖ್ಯವಾಗಿ ಮಿಲನ್ ಸಿನಿಮಾದಲ್ಲಿನ ಖಳನಾಯಕನ ಪಾತ್ರ ಅವರಿಗೆ ದೊಡ್ಡ ಮಟ್ಟದ ಹೆಸರು ತಂದುಕೊಟ್ಟಿತ್ತು. ಆ ಚಿತ್ರದ ಯಶಸ್ಸಿನ ಬಳಿಕ ಅವರು ಸುಗ್ರೀವ, ಗೆಳೆಯ, ಯು ಟರ್ನ್ ಸೇರಿದಂತೆ ಸುಮಾರು 28ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡ ಸಿನಿರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಇತ್ತೀಚಿನ ವರ್ಷಗಳಲ್ಲಿ ಲವ್ ಮಾಕ್ಟೇಲ್ 3 ಚಿತ್ರದಲ್ಲಿ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ಅಂಬಿ ನಿಂಗ್ ವಯಸ್ಸಾಯ್ತೋ ಹಾಗೂ ಗಾನಬಜಾನ ಸೇರಿದಂತೆ ಹಲವು ಸಿನಿಮಾಗಳಲ್ಲಿಯೂ ಅವರು ನಟಿಸಿದ್ದರು. ನಾಯಕ, ಖಳನಾಯಕ ಹಾಗೂ ಪೋಷಕ ನಟನ ಪಾತ್ರಗಳಲ್ಲಿ ಸಮಾನವಾಗಿ ಮೆಚ್ಚುಗೆ ಪಡೆದಿದ್ದರು.
ಸಿನಿಮಾಗಳ ಜೊತೆಗೆ ಕಿರುತೆರೆಯಲ್ಲಿಯೂ ದಿಲೀಪ್ ರಾಜ್ ಸಕ್ರಿಯರಾಗಿದ್ದರು. ಮನೆಯೊಂದು ಮೂರು ಬಾಗಿಲು, ರಥಸಪ್ತಮಿ ಹಾಗೂ ಪ್ರೀತಿಗಾಗಿ ಧಾರಾವಾಹಿಗಳ ಮೂಲಕ ಮನೆಮಾತಾಗಿದ್ದರು. ಜೊತೆಗೆ ಪಾರು ಹಾಗೂ ಹಿಟ್ಲರ್ ಕಲ್ಯಾಣ ಧಾರಾವಾಹಿಗಳ ನಿರ್ಮಾಪಕರಾಗಿಯೂ ಅವರು ಹೆಸರು ಮಾಡಿದ್ದರು. ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲಿಯೂ ಅವರು ಅಪಾರ ಅಭಿಮಾನಿ ಬಳಗ ಹೊಂದಿದ್ದರು.
ದಿಲೀಪ ರಾಜ್ ಅವರ ಅಕಾಲಿಕ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು, ನಟರು, ನಿರ್ದೇಶಕರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಭಾವುಕ ಸಂದೇಶಗಳ ಮೂಲಕ ಅಭಿಮಾನಿಗಳು ದುಃಖ ವ್ಯಕ್ತಪಡಿಸುತ್ತಿದ್ದಾರೆ. ಕನ್ನಡ ಚಿತ್ರರಂಗ ಒಬ್ಬ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.