ಬೆಂಗಳೂರು, 15: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ 'ಉಪ್ಪಿದಾದ ಎಂ.ಬಿ.ಬಿ.ಎಸ್' ಚಿತ್ರದ ಮೂಲಕ ಜನಪ್ರಿಯತೆ ಗಳಿಸಿದ್ದ ನಟಿ ಉಮಾ ಶಂಕರಿ ಅವರಿಗೆ ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಈ ವಿಷಯವನ್ನು ಸ್ವತಃ ಅವರು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದು, ಅಭಿಮಾನಿಗಳು ಹಾಗೂ ಚಿತ್ರರಂಗದಲ್ಲಿ ಕಳವಳ ಮೂಡಿಸಿದೆ.
ಕನ್ನಡ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ನಟಿಸಿದ್ದ ಉಮಾ ಶಂಕರಿ, ಮದುವೆಯ ಬಳಿಕ ಚಿತ್ರರಂಗದಿಂದ ದೂರ ಉಳಿದಿದ್ದರು. ಇದೀಗ ತಮಗೆ ಸ್ತನ ಕ್ಯಾನ್ಸರ್ ಇರುವುದು ದೃಢಪಟ್ಟಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ. ಸದ್ಯ ಎರಡನೇ ಸುತ್ತಿನ ಕಿಮೊಥೆರಪಿ ಹಾಗೂ ಇಮ್ಯುನೊಥೆರಪಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿರುವ ಉಮಾ ಶಂಕರಿ, "ಪ್ರಸ್ತುತ ಎರಡನೇ ಸುತ್ತಿನ ಕಿಮೊಥೆರಪಿ ಮತ್ತು ಇಮ್ಯುನೊಥೆರಪಿ ಚಿಕಿತ್ಸೆಗೆ ಒಳಗಾಗಿದ್ದೇನೆ. ಪ್ರತಿಯೊಂದು ದಿನವನ್ನೂ ಧೈರ್ಯದಿಂದ ಎದುರಿಸುತ್ತಿದ್ದೇನೆ. ನೋವಿನಿಂದ ಕೂಡಿದ ದಿನಗಳನ್ನು ಹೇಗೆ ನಿಭಾಯಿಸಬೇಕು ಎಂಬುದನ್ನು ಕಲಿಯುತ್ತಿದ್ದೇನೆ" ಎಂದು ತಿಳಿಸಿದ್ದಾರೆ.
ಈ ಕಠಿಣ ಸಂದರ್ಭದಲ್ಲಿ ತಮ್ಮ ಬೆಂಬಲಕ್ಕೆ ನಿಂತಿರುವ ಕುಟುಂಬದ ಸದಸ್ಯರು ಹಾಗೂ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿರುವ ಅವರು, ಎಲ್ಲರ ಪ್ರೀತಿ, ಪ್ರಾರ್ಥನೆ ಮತ್ತು ಶುಭಹಾರೈಕೆಗಳು ತಮ್ಮಲ್ಲಿ ಧೈರ್ಯ ತುಂಬಿವೆ ಎಂದು ಹೇಳಿದ್ದಾರೆ. ಚಿಕಿತ್ಸೆ ಉತ್ತಮವಾಗಿ ಸ್ಪಂದಿಸುತ್ತಿದ್ದು, ಸಂಪೂರ್ಣ ಗುಣಮುಖರಾಗುವತ್ತ ಗಮನ ಹರಿಸಿರುವುದಾಗಿ ಉಮಾ ಶಂಕರಿ ತಿಳಿಸಿದ್ದಾರೆ.