ಹೊಸದಿಲ್ಲಿ, ಮೇ 9 : ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯವು ಶನಿವಾರ ಪಂಜಾಬ್ ಕೈಗಾರಿಕಾ ಸಚಿವ ಸಂಜೀವ್ ಅರೋರಾ ಹಾಗೂ ಅವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾದ ಕೆಲವರ ನಿವಾಸ ಮತ್ತು ಕಚೇರಿಗಳ ಮೇಲೆ ಮತ್ತೆ ದಾಳಿ ನಡೆಸಿದೆ.
ಚಂಡೀಗಢದಲ್ಲಿರುವ ಅರೋರಾ ಅವರ ಅಧಿಕೃತ ನಿವಾಸ ಸೇರಿದಂತೆ ಒಟ್ಟು 5 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ ಹಾಗೂ ಹರಿಯಾಣದ ಗುರುಗ್ರಾಮ್ನಲ್ಲಿರುವ ಹ್ಯಾಂಪ್ಟನ್ ಸ್ಕೈ ರಿಯಾಲ್ಟಿ ಲಿಮಿಟೆಡ್ ಕಂಪನಿಯ ಕಚೇರಿಯ ಮೇಲೂ ದಾಳಿ ನಡೆದಿದೆ.
ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಹೊಸ ಪ್ರಕರಣ ದಾಖಲಿಸಿದ ಬಳಿಕ ಈ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಏಪ್ರಿಲ್ನಲ್ಲಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ ನಾಗರಿಕ ವಿಧಿಗಳ ಅಡಿಯಲ್ಲಿ ಅರೋರಾ ಹಾಗೂ ಅವರಿಗೆ ಸಂಬಂಧಿಸಿದ ಘಟಕಗಳ ಮೇಲೂ ಇಡಿ ದಾಳಿ ನಡೆಸಿತ್ತು. 62 ವರ್ಷದ ಸಂಜೀವ್ ಅರೋರಾ ಅವರು ಲುಧಿಯಾನ ಪಶ್ಚಿಮ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕರಾಗಿದ್ದಾರೆ.
ಇತ್ತೀಚಿನ ತನಿಖೆ 100 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಮೊಬೈಲ್ ಫೋನ್ಗಳ ನಕಲಿ ಜಿಎಸ್ಟಿ ಖರೀದಿ ಹಾಗೂ ದುಬೈನಿಂದ ಭಾರತಕ್ಕೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದೆ ಎಂದು ಇಡಿ ಹೇಳಿದೆ.
ನಕಲಿ ಇನ್ಪುಟ್ ತೆರಿಗೆ ಕ್ರೆಡಿಟ್ ಪಡೆಯಲು ದೆಹಲಿಯಲ್ಲಿರುವ ಅಸ್ತಿತ್ವದಲ್ಲೇ ಇಲ್ಲದ ಸಂಸ್ಥೆಗಳಿಂದ ನಕಲಿ ಜಿಎಸ್ಟಿ ಬಿಲ್ಗಳನ್ನು ಪಡೆದಿರುವ ಆರೋಪ ಕೇಳಿಬಂದಿದೆ.
ಈ ಕ್ರಮಕ್ಕೆ ಪ್ರತಿಕ್ರಿಯಿಸಿರುವ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಪಂಜಾಬ್ ಮೋದಿ ಸರ್ಕಾರದ ತಂತ್ರಗಳಿಗೆ ತಲೆಬಾಗುವುದಿಲ್ಲ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಇಡಿ ಮತ್ತು ಬಿಜೆಪಿ ನಡುವಿನ ಅನೈತಿಕ ಮೈತ್ರಿಗೆ ಪಂಜಾಬ್ನಲ್ಲೇ ಅಂತ್ಯವಾಗಲಿದೆ ಎಂದು ಅವರು ಆರೋಪಿಸಿದ್ದಾರೆ.
ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್ನಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ನಿರ್ದೇಶನದ ಮೇರೆಗೆ ರಾಜಕೀಯ ಪ್ರತೀಕಾರದ ಭಾಗವಾಗಿ ದಾಳಿ ನಡೆಸಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ.
2024 ರಲ್ಲಿಯೂ ವಸತಿ ಯೋಜನೆಗಳಿಗಾಗಿ ಕೈಗಾರಿಕಾ ಭೂಮಿಯನ್ನು ದುರುಪಯೋಗಪಡಿಸಿಕೊಂಡ ಆರೋಪದ ಪ್ರಕರಣದಲ್ಲಿ ಅರೋರಾ ವಿರುದ್ಧ ಇಡಿ ತನಿಖೆ ನಡೆಸಿತ್ತು. ಆ ಸಂದರ್ಭದಲ್ಲಿ ಅವರು ರಾಜ್ಯಸಭಾ ಸದಸ್ಯರಾಗಿದ್ದರು.
2027 ರ ಆರಂಭದಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆ ರಾಜ್ಯದ ರಾಜಕೀಯವಾಗಿ ಪ್ರಭಾವಿ ವ್ಯಕ್ತಿಗಳ ವಿರುದ್ಧ ಇಡಿ ಕಳೆದ ಕೆಲವು ವಾರಗಳಿಂದ ನಿರಂತರ ಕ್ರಮ ಕೈಗೊಳ್ಳುತ್ತಿದೆ.