ಜೈಪುರ, ಆಗಸ್ಟ್ 21: ದೇಶದಲ್ಲಿರುವ ಸರ್ಕಾರಿ ಶಾಲೆಗಳೆಲ್ಲ ಸರಿಯಾಗಬೇಕೆಂಬ ಧ್ಯೇಯದೊಂದಿಗೆ ಆರಂಭಿಸಿರುವ ಕಾಕ್ರೋಚ್ ಜನತಾ ಪಾರ್ಟಿಯ ಅಭಿಯಾನಕ್ಕೆ ಕೆಲವು ಘಾತಕ ಶಕ್ತಿಗಳು ತೊಡಕು ಉಂಟು ಮಾಡುವ ಘಟನೆ ಬಿಜೆಪಿ ಆಡಳಿತದ ರಾಜ್ಯದಲ್ಲಿ ಇಂದು ನಡೆದಿದೆ ಎಂದು ಆರೋಪಿಸಲಾಗಿದೆ.
ರಾಜಸ್ಥಾನದ ಜೈಪುರ ಜಿಲ್ಲೆಯ ಬಾಗ್ರು ವಿಧಾನಸಭಾ ಕ್ಷೇತ್ರದ ರಾಂಪುರ-ಕನ್ವರ್ಪುರ ಗ್ರಾಮದಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಸಿಜೆಪಿ ಹಮ್ಮಿಕೊಂಡಿದ್ದ ‘ಸ್ಕೂಲ್ ಠೀಕ್ ಕರೋ’ (ಶಾಲೆಗಳನ್ನು ಸರಿ ಮಾಡಿ) ಅಭಿಯಾನದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ರಾಂಪುರ-ಕನ್ವರಪುರದಲ್ಲಿರುವ ಸರ್ಕಾರಿ ಶಾಲೆಯೊಂದು ಹಲವು ವರ್ಷಗಳಿಂದ ದನಗಳ ಕೊಟ್ಟಿಗೆಯಲ್ಲೇ ನಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಜೆಪಿ ತಂಡವು ಶಾಲೆಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಹಾಗೂ ದಾಖಲೆಗಳನ್ನು ಪರಿಶೀಲಿಸಲು ಗ್ರಾಮಕ್ಕೆ ತೆರಳಿತ್ತು. ಸಿಜೆಪಿ ಸಹ-ಸಂಚಾಲಕ ಹಾಗೂ ವಕ್ತಾರ ಅಶುತೋಷ ರಾಂಕಾ ನೇತೃತ್ವದ ತಂಡ ಗ್ರಾಮ ಪ್ರವೇಶಿಸಲು ಮುಂದಾದಾಗ ಕೆಲವು ಗೂಂಡಾಗಳು ಅವರನ್ನು ತಡೆದಿದ್ದಾರೆ ಎಂದು ಹೇಳಲಾಗಿದೆ.
ಈ ಸಂದರ್ಭದಲ್ಲಿ ‘ನಮ್ಮ ಮಕ್ಕಳು ಎಲ್ಲೇ ಓದಿದರೂ ನಮಗೆ ತೊಂದರೆಯಿಲ್ಲ. ಹೊರಗಿನಿಂದ ಬಂದು ಗ್ರಾಮದಲ್ಲಿ ರಾಜಕೀಯ ಮಾಡುವುದು ಬೇಡ’ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಅಭಿವೃದ್ಧಿಗೆ ಈಗಾಗಲೇ ಸುಮಾರು 12 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದೆ ಎಂಬುದನ್ನೂ ಅವರು ತಿಳಿಸಿದ್ದಾರೆ ಎನ್ನಲಾಗಿದೆ.
ಇದೇ ವಿಚಾರವಾಗಿ ಸಿಜೆಪಿ ಕಾರ್ಯಕರ್ತರು ಮತ್ತು ಗೂಂಡಾಗಳ ನಡುವೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಬಳಿಕ ಪರಿಸ್ಥಿತಿ ಕೈಮೀರಿದೆ. ಗ್ರಾಮಸ್ಥರು ಸಿಜೆಪಿ ಕಾರ್ಯಕರ್ತರನ್ನು ಅಟ್ಟಾಡಿಸಿ, ತಳ್ಳಿ ಕೆಡವಿ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಅಶುತೋಷ ರಾಂಕಾ ಸೇರಿದಂತೆ ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಸಿಜೆಪಿ ತಂಡದವರು ಪ್ರಯಾಣಿಸುತ್ತಿದ್ದ ಕಾರಿನ ಕಿಟಕಿ ಗಾಜುಗಳ ಮೇಲೂ ಕಲ್ಲು ತೂರಾಟ ನಡೆದಿದ್ದು, ಗಾಜುಗಳು ಒಡೆದಿವೆ ಎಂದು ತಿಳಿದುಬಂದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ವ್ಯಾಪಕ ಚರ್ಚೆಗೆ ಕಾರಣವಾಗಿದೆ.
ಘಟನೆ ಬಳಿಕ ಸಿಜೆಪಿ ಸಂಸ್ಥಾಪಕ ಅಭಿಜೀತ ದಿಪ್ಕೆ ಹಾಗೂ ಅಶುತೋಷ ರಾಂಕಾ ಅವರು ಬಿಜೆಪಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಿಜೆಪಿ ಬೆಂಬಲಿಗರು ತಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ಗ್ರಾಮದಲ್ಲಿನ ಶಾಲೆಯ ಸಮಸ್ಯೆಯನ್ನು ಮುಚ್ಚಿಹಾಕಲು ರಾಜಕೀಯ ಒತ್ತಡ ಸೃಷ್ಟಿಸಲಾಗುತ್ತಿದೆ ಎಂದು ದೂರಿದ್ದಾರೆ. ಬಡವರ ಜಮೀನು ಒತ್ತುವರಿ ಸೇರಿದಂತೆ ಹಲವು ಅಕ್ರಮಗಳ ಕುರಿತು ಪ್ರಶ್ನಿಸಿದ ಕಾರಣಕ್ಕೆ ತಮ್ಮ ತಂಡದ ಮೇಲೆ ದಾಳಿ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.