LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸಿ ಜೋಸೆಫ್ ವಿಜಯ ಪ್ರಮಾಣವಚನ

ಚೆನ್ನೈ, ಮೇ 10 : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಅಧ್ಯಕ್ಷ ಹಾಗೂ ಚಿತ್ರನಟ ಸಿ. ಜೋಸೆಫ ವಿಜಯ ಅವರು ರವಿವಾರ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇದರೊಂದಿಗೆ ರಾಜ್ಯ ರಾಜಕೀಯದಲ್ಲಿ ಹಲವು ದಶಕಗಳಿಂದ ಪ್ರಭಾವ ಬೀರಿದ್ದ ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷಗಳ ಸುಮಾರು 60 ವರ್ಷದ ಆಡಳಿತಕ್ಕೆ ತೆರೆ ಬಿದ್ದಂತಾಗಿದೆ.

ಚೆನ್ನೈನ ನೆಹರೂ ಕ್ರೀಡಾಂಗಣದಲ್ಲಿ ಭಾರಿ ಜನಸ್ತೋಮದ ನಡುವೆ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ ಅವರು ವಿಜಯ ಅವರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಬೋಧಿಸಿದರು. ಬೆಳಿಗ್ಗೆ 10 ಗಂಟೆಗೆ ಆರಂಭವಾದ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಡಪಕ್ಷಗಳ ಮುಖಂಡರು, ವಿಸಿಕೆ ನಾಯಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆದ್ದಿದೆ. ಸರ್ಕಾರ ರಚನೆಗೆ ಅಗತ್ಯವಾಗಿದ್ದ 118 ಸದಸ್ಯರ ಬೆಂಬಲಕ್ಕಾಗಿ ಕಾಂಗ್ರೆಸ್‌, ವಿಸಿಕೆ, ಎಡಪಕ್ಷಗಳು ಹಾಗೂ ಐಯುಎಂಎಲ್ ಪಕ್ಷಗಳು ವಿಜಯ ಅವರಿಗೆ ಬೆಂಬಲ ಘೋಷಿಸಿದ್ದವು. ಇದರೊಂದಿಗೆ ವಿಜಯ್ ನೇತೃತ್ವದ ಮೈತ್ರಿಕೂಟಕ್ಕೆ ಒಟ್ಟು 120ಕ್ಕೂ ಹೆಚ್ಚು ಶಾಸಕರ ಬೆಂಬಲ ದೊರೆತಿದೆ.

ಸಂಖ್ಯಾಬಲ ಸಾಬೀತುಪಡಿಸಲು ವಿಜಯ್ ಅವರು ಕಳೆದ ಕೆಲವು ದಿನಗಳಲ್ಲಿ ನಾಲ್ಕು ಬಾರಿ ರಾಜ್ಯಪಾಲರನ್ನು ಭೇಟಿಯಾಗಿದ್ದರು. ಬಳಿಕ ರಾಜ್ಯಪಾಲರು ಈ ತಿಂಗಳ 13ರೊಳಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿ ಸರ್ಕಾರ ರಚನೆಗೆ ಆಹ್ವಾನ ನೀಡಿದ್ದರು.

ತಮಿಳುನಾಡಿನ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭಿಸಿದ ವಿಜಯ ನೇತೃತ್ವದ ಟಿವಿಕೆ ಪಕ್ಷಕ್ಕೆ ಯುವ ಸಮುದಾಯದಿಂದ ಭಾರೀ ಬೆಂಬಲ ವ್ಯಕ್ತವಾಗಿದೆ. ಟಿವಿಕೆ ಶಾಸಕರಲ್ಲಿ ಬಹುತೇಕರು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದು, ಪಕ್ಷದ ಶಾಸಕರ ಸರಾಸರಿ ವಯಸ್ಸು 45 ಆಗಿದೆ. 41 ಮಂದಿ ಶಾಸಕರು 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದರೆ, ಕೇವಲ 10 ಮಂದಿ ಮಾತ್ರ 60 ವರ್ಷ ಮೇಲ್ಪಟ್ಟವರಾಗಿದ್ದಾರೆ.

ವಿಜಯ್ ಸೇರಿದಂತೆ 93 ಮಂದಿ ಟಿವಿಕೆ ಶಾಸಕರು ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆರು ಮಂದಿ ಮಾತ್ರ ವಿವಿಧ ರಾಜಕೀಯ ಪಕ್ಷಗಳಲ್ಲಿ ಈ ಹಿಂದೆ ಸಕ್ರಿಯರಾಗಿದ್ದ ಅನುಭವ ಹೊಂದಿದ್ದಾರೆ. ಪಕ್ಷದ 67 ಮಂದಿ ಶಾಸಕರು ಪದವಿ ಶಿಕ್ಷಣ ಪಡೆದಿದ್ದು, 15 ಮಂದಿ 12ನೇ ತರಗತಿ ಪೂರ್ಣಗೊಳಿಸಿದ್ದಾರೆ. 24 ಮಂದಿ 10ನೇ ತರಗತಿ ಅಥವಾ ಅದಕ್ಕಿಂತ ಕಡಿಮೆ ಶಿಕ್ಷಣ ಪಡೆದಿದ್ದಾರೆ.

ಚುನಾವಣಾ ಪ್ರಮಾಣಪತ್ರಗಳ ಪ್ರಕಾರ, ಪಕ್ಷದ 67 ಶಾಸಕರ ವಿರುದ್ಧ ಯಾವುದೇ ಅಪರಾಧ ಪ್ರಕರಣಗಳಿಲ್ಲ. ಉಳಿದ 40 ಮಂದಿ ಕನಿಷ್ಠ ಒಂದು ಪ್ರಕರಣವನ್ನು ಎದುರಿಸುತ್ತಿದ್ದಾರೆ.

ಚಿತ್ರರಂಗದಿಂದ ರಾಜಕೀಯಕ್ಕೆ ಕಾಲಿಟ್ಟ ವಿಜಯ್ ಅವರು ಅಲ್ಪಾವಧಿಯಲ್ಲೇ ರಾಜ್ಯ ರಾಜಕೀಯದಲ್ಲಿ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮಿರುವುದು ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST