ಮಂಗಳೂರು, ಸೆ. 18 : (ಸಮದರ್ಶಿ ಸುದ್ದಿ) - ವಿಶೇಷ ಸಚಿವ ಸಂಪುಟ ಸಭೆಗಾಗಿ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಸಚಿವರಿಗೆ ಶುಕ್ರವಾರ ಕರಾವಳಿಯ ಸಾಂಪ್ರದಾಯಿಕ ಕಲಾತಂಡಗಳೊಂದಿಗೆ ಅದ್ದೂರಿ ಸ್ವಾಗತ ನೀಡಲಾಯಿತು. ತೆರೆದ ‘ಅಂಬಾರಿ’ ಬಸ್ನಲ್ಲಿ ಮುಖ್ಯಮಂತ್ರಿ ಹಾಗೂ ಸಚಿವರು ಮೆರವಣಿಗೆಯಲ್ಲಿ ಸಾಗುತ್ತಿದ್ದಂತೆ ರಸ್ತೆಯುದ್ದಕ್ಕೂ ನೆರೆದಿದ್ದ ಜನರು ಕೈಬೀಸಿ ಸ್ವಾಗತಿಸಿದರು.
ಸಚಿವ ಸಂಪುಟ ಸಭೆಗೆ ಮುನ್ನ ಮುಖ್ಯಮಂತ್ರಿ ಹಾಗೂ ಸಚಿವರು ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಬಳಿಕ ಐರಾವತ ಕ್ಲಬ್ ಕ್ಲಾಸ್ ಬಸ್ನಲ್ಲಿ ಸರ್ಕ್ಯೂಟ್ ಹೌಸ್ಗೆ ತೆರಳಿದರು.
ಅಲ್ಲಿಂದ ವಿಶೇಷವಾಗಿ ಸಿದ್ಧಪಡಿಸಿದ್ದ ತೆರೆದ ‘ಅಂಬಾರಿ’ ಬಸ್ ಏರಿದ ಮುಖ್ಯಮಂತ್ರಿ ಮತ್ತು ಸಚಿವರನ್ನು ಪಂಪ್ವೆಲ್ನ ಮಹಾವೀರ ವೃತ್ತದಿಂದ ಪಡೀಲ್ ಪ್ರಜಾಸೌಧದವರೆಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ಬಿಸಿಲಿನ ನಡುವೆಯೂ ಮುಖ್ಯಮಂತ್ರಿ ಶಿವಕುಮಾರ ತೆರೆದ ಬಸ್ನಿಂದ ರಸ್ತೆಯ ಎರಡೂ ಬದಿಗಳಲ್ಲಿ ನೆರೆದಿದ್ದ ಜನರತ್ತ ಕೈಬೀಸುತ್ತ ಸಾಗಿದರು.
ಮೆರವಣಿಗೆಯುದ್ದಕ್ಕೂ ಕರಾವಳಿಯ ಸಾಂಸ್ಕೃತಿಕ ವೈಭವ ಗಮನ ಸೆಳೆಯಿತು. ಚಂಡೆ ವಾದನ, ಹುಲಿವೇಷ, ಗಾರುಡಿಗೊಂಬೆ, ಕೊರಗರ ಕೊಳಲು ವಾದನ ಹಾಗೂ ಬ್ಯಾಂಡ್ ವಾದ್ಯ ತಂಡಗಳು ಪ್ರದರ್ಶನ ನೀಡುವ ಮೂಲಕ ಮುಖ್ಯಮಂತ್ರಿ ಮತ್ತು ಸಚಿವರನ್ನು ಸ್ವಾಗತಿಸಿದವು. ಅಲ್ಲಲ್ಲಿ ಸಂಗೀತ ರಸಮಂಜರಿ ಹಾಗೂ ಭಜನೆ ಕಾರ್ಯಕ್ರಮಗಳನ್ನೂ ಆಯೋಜಿಸಲಾಗಿತ್ತು.
ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ರುದ್ರಪ್ಪ ಲಮಾಣಿ ಸೇರಿದಂತೆ ಸಚಿವ ಸಂಪುಟದ ಸದಸ್ಯರು ತೆರೆದ ಬಸ್ನಲ್ಲಿ ಸಾಗಿದರು. ದಾರಿಯುದ್ದಕ್ಕೂ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮುಖ್ಯಮಂತ್ರಿ ಮತ್ತು ಸಚಿವರತ್ತ ಕೈಬೀಸಿ ಸ್ವಾಗತಿಸಿದರು.
ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಕರಾವಳಿಯ ವಿವಿಧ ಜಾನಪದ ಮತ್ತು ಸಾಂಸ್ಕೃತಿಕ ಕಲಾಪ್ರಕಾರಗಳ ಮೂಲಕ ಅತಿಥಿಗಳನ್ನು ಬರಮಾಡಿಕೊಂಡದ್ದು ಮೆರವಣಿಗೆಯ ಪ್ರಮುಖ ಆಕರ್ಷಣೆಯಾಗಿತ್ತು.