ಬೆಳಗಾವಿ, ಸೆ. 18 : (ಸಮದರ್ಶಿ ಸುದ್ದಿ) - ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ‘ನಿರುದ್ಯೋಗ ದಿನ’ ಎಂದು ಆಚರಿಸಿದ ಕಾಂಗ್ರೆಸ್ ಕಾರ್ಯಕರ್ತರು, ನಗರದಲ್ಲಿ ಪಕೋಡಾ ಹಾಗೂ ತರಕಾರಿ ಮಾರಾಟ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಿನೂತನ ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಪ್ರತಿಭಟನಕಾರರು, ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಹಾಗೂ ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಒತ್ತಾಯಿಸಿದರು.
ಬೆಳಗಾವಿ ಗ್ರಾಮೀಣ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರ್ತಿಕ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಭವನದಿಂದ ರಾಣಿ ಚನ್ನಮ್ಮ ವೃತ್ತದವರೆಗೆ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಬಳಿಕ ಪಕೋಡಾ ಮತ್ತು ತರಕಾರಿ ಮಾರಾಟ ಮಾಡುವ ಮೂಲಕ ನಿರುದ್ಯೋಗ ಸಮಸ್ಯೆಯತ್ತ ಗಮನ ಸೆಳೆಯಲು ಪ್ರಯತ್ನಿಸಿದರು.
“ನಿರುದ್ಯೋಗ ಸಮಸ್ಯೆ ನಿವಾರಿಸಿ ಯುವಕರಿಗೆ ಉದ್ಯೋಗ ಕಲ್ಪಿಸಲು ಕೇಂದ್ರ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಹುದ್ದೆಗಳ ನೇಮಕಾತಿಗೆ ವೇಗ ನೀಡುವುದರ ಜೊತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಉತ್ತೇಜನ ನೀಡಿ ಯುವಜನರಿಗೆ ಕೌಶಲ ಅಭಿವೃದ್ಧಿ ತರಬೇತಿ ಒದಗಿಸಬೇಕು” ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಇದೇ ವೇಳೆ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆಯನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು. ಸಚಿವ ಸತೀಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ನಡೆದ ಇಡಿ ದಾಳಿಯೂ ರಾಜಕೀಯ ಪ್ರೇರಿತವಾಗಿದೆ ಎಂದು ಅವರು ದೂರಿದರು.
ಪ್ರತಿಭಟನೆಯಲ್ಲಿ ಉದಯ ಗೌಡರ, ಯಲ್ಲಪ್ಪ ಶಿಂಗೆ, ಸದಾಕತ್ ಮಕಾನದಾರ, ಅಸ್ತಾಫ್ ಕಮತನೂರ, ಶಿವು ಪಾಟೀಲ, ವಿಷ್ಣು ಕಾರಬಾರಿ, ರಾಯಪ್ಪ ಬಾಗತನವರ, ಪ್ರವೀಣ ತುಕ್ಕಾನಟ್ಟಿ, ದಾದಾಪೀರ ಜಮಾದಾರ, ಸಲೀಮ್ ಮಕಾನದಾರ, ಪ್ರಕಾಶ ಹಟ್ಟಿಹೊಳಿ, ವಿನಾಯಕ ಕಲಾದಗಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.