ಕೋಲ್ಕತ್ತಾ, ಮೇ 4 : ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿರುವ ವೇಳೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದ ಹೊರಗೆ ಬಿಜೆಪಿ ಬೆಂಬಲಿಗರು ಜಮಾಯಿಸಿ ಘೋಷಣೆ ಕೂಗಿದ ಘಟನೆ ಸೋಮವಾರ ಉದ್ವಿಗ್ನತೆಗೆ ಕಾರಣವಾಯಿತು.
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ದೃಶ್ಯಗಳಲ್ಲಿ, ಕೋಲ್ಕತ್ತಾದ ಕಾಲಿಘಾಟ್ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರು ಮತ್ತು ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಸೇರಿ, ಆರಂಭಿಕ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಪಡೆದ ಹಿನ್ನೆಲೆ ಜೈ ಶ್ರೀ ರಾಮ್, ಬಿಜೆಪಿ ಝಿಂದಾಬಾದ್ ಮತ್ತು ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳನ್ನು ಕೂಗುತ್ತಿರುವುದು ಕಾಣಿಸಿಕೊಂಡಿತು. ಪರಿಸ್ಥಿತಿ ಹದಗೆಡದಂತೆ ಪೊಲೀಸರು ಮಧ್ಯಪ್ರವೇಶಿಸಿ ಗುಂಪನ್ನು ಚದುರಿಸಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿದರು.
ಈ ಘಟನೆಯ ಮೊದಲು, ವಿಜಯೋತ್ಸವದ ಸಂದರ್ಭ ಸಂಯಮ ಕಾಪಾಡಿಕೊಳ್ಳುವಂತೆ ಬಿಜೆಪಿ ತನ್ನ ಕಾರ್ಯಕರ್ತರಿಗೆ ಸೂಚನೆ ನೀಡಿತ್ತು. ತೃಣಮೂಲ ಕಾಂಗ್ರೆಸ್ ನಾಯಕರ ಮನೆಗಳ ಮುಂದೆ ಸೇರುವುದನ್ನು ತಪ್ಪಿಸಲು, ವಸತಿ ಪ್ರದೇಶಗಳಲ್ಲಿ ಘೋಷಣೆಗಳನ್ನು ಕೂಗಬಾರದು ಹಾಗೂ ಸಂಭ್ರಮಾಚರಣೆಗಳನ್ನು ಪಕ್ಷದ ಕಚೇರಿಗಳಿಗೆ ಮಾತ್ರ ಸೀಮಿತಗೊಳಿಸಬೇಕು ಎಂದು ನಿರ್ದೇಶನ ನೀಡಲಾಗಿತ್ತು. ಆದರೂ ಕೆಲ ಬೆಂಬಲಿಗರು ಮುಖ್ಯಮಂತ್ರಿಯವರ ನಿವಾಸದ ಹೊರಗೆ ಸೇರಿದ್ದರು.
ಮತ ಎಣಿಕೆಯ ಪ್ರಗತಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಬಲಿಷ್ಠ ಪ್ರದರ್ಶನವನ್ನು ಸೂಚಿಸುತ್ತಿದ್ದು, ಸ್ವಾತಂತ್ರ್ಯಾನಂತರ ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸುವ ಸಾಧ್ಯತೆ ಕುರಿತು ಪಕ್ಷದೊಳಗೆ ಚರ್ಚೆಗಳು ಹೆಚ್ಚಾಗಿವೆ. ಈ ಫಲಿತಾಂಶವು ಕಳೆದ 15 ವರ್ಷಗಳಿಂದ ಆಡಳಿತ ನಡೆಸುತ್ತಿರುವ ತೃಣಮೂಲ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ರಾಜಕೀಯ ಸವಾಲಾಗಬಹುದು ಎಂದು ವಿಶ್ಲೇಷಣೆಗಳು ಹೇಳುತ್ತಿವೆ.
ಈ ನಡುವೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮಗಳ ಸಾಧ್ಯತೆ ಕುರಿತು ಆತಂಕ ವ್ಯಕ್ತಪಡಿಸಿ, ಪಕ್ಷದ ಕಾರ್ಯಕರ್ತರು ಹಾಗೂ ಎಣಿಕೆ ಪ್ರತಿನಿಧಿಗಳು ಕೇಂದ್ರಗಳಲ್ಲಿ ಹಾಜರಿದ್ದು ಕೊನೆಯವರೆಗೂ ಪ್ರಕ್ರಿಯೆಯನ್ನು ಗಮನಿಸುವಂತೆ ಸೂಚಿಸಿದ್ದಾರೆ. ಕೆಲ ಪ್ರದೇಶಗಳಲ್ಲಿ ಕೆಲವೇ ಸುತ್ತುಗಳ ನಂತರ ಎಣಿಕೆ ನಿಲ್ಲಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಕಲ್ಯಾಣಿ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಇವಿಎಂ ಯಂತ್ರಗಳಲ್ಲಿ ವ್ಯತ್ಯಾಸಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದು, ಕೇಂದ್ರ ಪಡೆಗಳು ಪಕ್ಷಪಾತದಿಂದ ವರ್ತಿಸುತ್ತಿವೆ ಹಾಗೂ ರಾಜ್ಯದ ಕೆಲವು ಭಾಗಗಳಲ್ಲಿ ತೃಣಮೂಲ ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.