ಹೊಸದಿಲ್ಲಿ, ಮೇ 7 : ಲೋಕಸಭೆಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷದ ಸಂಸದರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸುವಂತೆ ಡಿಎಂಕೆ ಸಂಸದೆ ಕನಿಮೋಳಿ ಕರುಣಾನಿಧಿ ಲೋಕಸಭೆ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಕಾಂಗ್ರೆಸ್ನೊಂದಿಗಿನ ಡಿಎಂಕೆಯ ಮೈತ್ರಿ ಅಂತ್ಯಗೊಂಡಿರುವ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಸದಸ್ಯರೊಂದಿಗೆ ಡಿಎಂಕೆ ಸದಸ್ಯರು ಅಕ್ಕಪಕ್ಕ ಕುಳಿತುಕೊಳ್ಳುತ್ತಿರುವ ಪ್ರಸ್ತುತ ಆಸನ ವ್ಯವಸ್ಥೆಯನ್ನು ಬದಲಾಯಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಬದಲಾದ ರಾಜಕೀಯ ಪರಿಸ್ಥಿತಿ ಹಾಗೂ ಕಾಂಗ್ರೆಸ್ನೊಂದಿಗಿನ ಮೈತ್ರಿ ಕೊನೆಗೊಂಡಿರುವುದರಿಂದ, ಸದನದಲ್ಲಿ ಕಾಂಗ್ರೆಸ್ ಸದಸ್ಯರೊಂದಿಗೆ ಈಗಿನ ರೀತಿಯ ಆಸನ ವ್ಯವಸ್ಥೆ ಮುಂದುವರಿಸುವುದು ಸೂಕ್ತವಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಲೋಕಸಭೆಯಲ್ಲಿ ಡಿಎಂಕೆ ಸದಸ್ಯರು ತಮ್ಮ ಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುಕೂಲವಾಗುವಂತೆ ಪ್ರತ್ಯೇಕ ಆಸನಗಳನ್ನು ಹಂಚಿಕೆ ಮಾಡಬೇಕು ಎಂದು ಕನಿಮೋಳಿ ಕೋರಿದ್ದಾರೆ.
ಈ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸಭಾಧ್ಯಕ್ಷರನ್ನು ವಿನಂತಿಸಿದ್ದಾರೆ.