LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಎಬೋಲಾ ಹೆಚ್ಚಳ: 3 ದೇಶಗಳಿಗೆ ಪ್ರಯಾಣಿಸದಂತೆ ಭಾರತದ ಎಚ್ಚರಿಕೆ

ಹೊಸದಿಲ್ಲಿ, ಮೇ 24 : ಆಫ್ರಿಕಾದ ಕೆಲವು ಭಾಗಗಳಲ್ಲಿ ಎಬೋಲಾ ಸಾಂಕ್ರಾಮಿಕ ರೋಗದ ಹರಡುವಿಕೆ ತೀವ್ರಗೊಂಡಿರುವ ಹಿನ್ನೆಲೆ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೊ, ಉಗಾಂಡ ಹಾಗೂ ದಕ್ಷಿಣ ಸುಡಾನ್‌ಗೆ ಅನಗತ್ಯ ಪ್ರಯಾಣ ಕೈಗೊಳ್ಳದಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ರವಿವಾರ ಭಾರತೀಯ ನಾಗರಿಕರಿಗೆ ಅಧಿಕೃತ ಸಲಹೆ ನೀಡಿದೆ.

ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೊ ಮತ್ತು ಉಗಾಂಡದಲ್ಲಿ ಎಬೋಲಾ ಸೋಂಕಿನ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಬಗ್ಗೆ ವರದಿಗಳು ಬಂದ ಹಿನ್ನೆಲೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) 2026ರ ಮೇ 17ರಂದು ಅಂತಾರಾಷ್ಟ್ರೀಯ ಆರೋಗ್ಯ ನಿಯಮಾವಳಿ (ಐಎಚ್ಆರ್)-2005ರ ಅಡಿಯಲ್ಲಿ ಈ ಪರಿಸ್ಥಿತಿಯನ್ನು ಅಂತರ ರಾಷ್ಟ್ರೀಯ ಕಳವಳದ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ಘೋಷಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಘೋಷಣೆಯ ಬೆನ್ನಲ್ಲೇ ಭಾರತ ಸರಕಾರ ಮುನ್ನೆಚ್ಚರಿಕಾ ಕ್ರಮವಾಗಿ ಪ್ರಯಾಣ ಸಲಹೆ ಹೊರಡಿಸಿದೆ. ಜೊತೆಗೆ ಆಫ್ರಿಕಾ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರ ಕೂಡ ಕಾಂಗೊ ಮತ್ತು ಉಗಾಂಡದಲ್ಲಿನ ಸೋಂಕು ಹರಡುವಿಕೆಯನ್ನು ಖಂಡಾಂತರ ಭದ್ರತೆಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವರ್ಗೀಕರಿಸಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ಎಬೋಲಾ ಅತ್ಯಂತ ಗಂಭೀರ ಹಾಗೂ ಜೀವಕ್ಕೆ ಅಪಾಯಕಾರಿಯಾದ ವೈರಲ್ ಸೋಂಕು. ಸೋಂಕಿತ ವ್ಯಕ್ತಿಯ ರಕ್ತ, ದೇಹದ ದ್ರವಗಳು ಅಥವಾ ಸೋಂಕಿತ ವಸ್ತುಗಳ ಸಂಪರ್ಕದಿಂದ ಈ ರೋಗ ಹರಡುತ್ತದೆ. ಹೆಚ್ಚಿನ ಜ್ವರ, ತೀವ್ರ ದೌರ್ಬಲ್ಯ, ತಲೆನೋವು, ವಾಂತಿ, ಅತಿಸಾರ ಮತ್ತು ಕೆಲ ಸಂದರ್ಭಗಳಲ್ಲಿ ರಕ್ತಸ್ರಾವವೂ ಕಾಣಿಸಿಕೊಳ್ಳಬಹುದು.

ಆಫ್ರಿಕಾ ದೇಶಗಳಲ್ಲಿ ವಾಸಿಸುತ್ತಿರುವ ಅಥವಾ ಅಲ್ಲಿಗೆ ಪ್ರಯಾಣಿಸುತ್ತಿರುವ ಭಾರತೀಯ ನಾಗರಿಕರು ಸ್ಥಳೀಯ ಆರೋಗ್ಯ ಇಲಾಖೆಗಳ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ನೈರ್ಮಲ್ಯ ಕಾಪಾಡಿಕೊಳ್ಳಬೇಕು. ರೋಗ ಲಕ್ಷಣ ಇರುವವರ ಸಂಪರ್ಕ ತಪ್ಪಿಸಬೇಕು. ಆಸ್ಪತ್ರೆ ಅಥವಾ ಸೋಂಕು ಪೀಡಿತ ಪ್ರದೇಶಗಳಿಗೆ ಅನಗತ್ಯ ಭೇಟಿ ನೀಡಬಾರದು ಎಂದು ಸಲಹೆ ನೀಡಲಾಗಿದೆ.

ಜ್ವರ, ವಾಂತಿ, ದೇಹ ನೋವು ಅಥವಾ ಇತರೆ ಅನುಮಾನಾಸ್ಪದ ಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕು. ಪ್ರಯಾಣದಿಂದ ಹಿಂದಿರುಗಿದ ಬಳಿಕವೂ ಕೆಲವು ವಾರಗಳ ಕಾಲ ಆರೋಗ್ಯದ ಮೇಲೆ ನಿಗಾ ಇರಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಭಾರತದಲ್ಲಿ ಇದುವರೆಗೆ ಯಾವುದೇ ಎಬೋಲಾ ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ. ಆದರೆ ವಿಶ್ವ ಆರೋಗ್ಯ ಸಂಸ್ಥೆಯ ಶಿಫಾರಸುಗಳಿಗೆ ಅನುಗುಣವಾಗಿ ವಿಮಾನ ನಿಲ್ದಾಣಗಳು ಸೇರಿದಂತೆ ವಿವಿಧ ಪ್ರವೇಶ ಕೇಂದ್ರಗಳಲ್ಲಿ ನಿಗಾವಹಿಸಲಾಗುತ್ತಿದೆ. ಆರೋಗ್ಯ ಇಲಾಖೆಗಳು ಪರಿಸ್ಥಿತಿಯನ್ನು ನಿರಂತರವಾಗಿ ಅವಲೋಕಿಸುತ್ತಿವೆ ಎಂದು ಪ್ರಕಟಣೆ ತಿಳಿಸಿದೆ.

 

 

 

 

 

 

 

 

 

 

 

 

 

 

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST