LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಉಪವಾಸ: ಹದಗೆಟ್ಟ ಸೋನಮ್ ವಾಂಗ್‌ಚುಕ್ ಆರೋಗ್ಯ

ನವದೆಹಲಿ, ಜೂ. 30: ದೇಶದಾದ್ಯಂತ ಪ್ರಶ್ನೆಪತ್ರಿಕೆ ಸೋರಿಕೆ, ನೀಟ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್‌ಮಂತರ್‌ನಲ್ಲಿ ಆರಂಭಿಸಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಂಗಳವಾರ 11ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟನೆಯ ನೇತೃತ್ವ ವಹಿಸಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ 66ಕ್ಕೆ ಇಳಿದಿದೆ ಎಂದು ಸಂಘಟನೆ ತಿಳಿಸಿದೆ.

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಮಾತನಾಡಿ, ದೇಶದ ಶಿಕ್ಷಣ ವ್ಯವಸ್ಥೆ ನಿರಂತರವಾಗಿ ಕುಸಿಯುತ್ತಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳು ವಿದ್ಯಾರ್ಥಿಗಳ ಭವಿಷ್ಯವನ್ನು ಹಾಳು ಮಾಡುತ್ತಿವೆ. ಈ ವೈಫಲ್ಯಕ್ಕೆ ರಾಜಕೀಯ ಹೊಣೆಗಾರಿಕೆ ವಹಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಕೂಡಲೇ ರಾಜೀನಾಮೆ ನೀಡಬೇಕು ಎಂಬುದು ಪ್ರತಿಭಟನೆಯ ಪ್ರಮುಖ ಬೇಡಿಕೆಯಾಗಿದೆ ಎಂದು ಸ್ಪಷ್ಟಪಡಿಸಿದರು.

ಜಂತರ್‌ಮಂತರ್‌ಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಬೆಂಬಲಿಗರನ್ನು ಪೊಲೀಸರು ತಡೆಹಿಡಿಯುತ್ತಿದ್ದಾರೆ ಎಂದು ಆರೋಪಿಸಿದ ಅವರು, ಶಾಂತಿಯುತ ಹೋರಾಟಕ್ಕೂ ಅಡ್ಡಿಪಡಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇತ್ತೀಚೆಗೆ ಬೆಳಕಿಗೆ ಬಂದ ರಾಜಸ್ಥಾನ ಪ್ಯಾರಾಮೆಡಿಕಲ್ ಕೌನ್ಸಿಲ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಉಲ್ಲೇಖಿಸಿದ ದೀಪ್ಕೆ, ನೀಟ್ ಸೇರಿದಂತೆ ವಿವಿಧ ರಾಷ್ಟ್ರೀಯ ಪರೀಕ್ಷೆಗಳಲ್ಲಿ ಪದೇಪದೇ ಅಕ್ರಮಗಳು ನಡೆಯುತ್ತಿರುವುದು ಕೇಂದ್ರ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು. ಪರೀಕ್ಷೆಗಳ ವಿಶ್ವಾಸಾರ್ಹತೆ ಸಂಪೂರ್ಣ ಕುಸಿದಿದ್ದು, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿದೆ ಎಂದು ಅವರು ಹೇಳಿದರು.

ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯದಲ್ಲಿ ಗಂಭೀರ ಕುಸಿತ ಕಂಡುಬಂದಿದ್ದು, ರಕ್ತದಲ್ಲಿನ ಸಕ್ಕರೆ ಪ್ರಮಾಣ 66ಕ್ಕೆ ಇಳಿದಿದೆ ಎಂದು ಸಿಜೆಪಿ ತಿಳಿಸಿದೆ. ಅವರ ಆರೋಗ್ಯದಲ್ಲಿ ಯಾವುದೇ ಅನಾಹುತ ಸಂಭವಿಸಿದರೆ ಅದರ ಸಂಪೂರ್ಣ ಹೊಣೆಯನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಹಾಗೂ ಕೇಂದ್ರ ಸರ್ಕಾರವೇ ಹೊರಬೇಕಾಗುತ್ತದೆ ಎಂದು ಸಂಘಟನೆ ಎಚ್ಚರಿಕೆ ನೀಡಿದೆ.

ಇದೇ ವೇಳೆ ಅಖಿಲ ಭಾರತ ವಿದ್ಯಾರ್ಥಿಗಳ ಸಂಘ (ಎಐಎಸ್‌ಎ)ದ ಆರು ವಿದ್ಯಾರ್ಥಿಗಳು ಪ್ರತ್ಯೇಕ ವೇದಿಕೆಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಅವರ ಉಪವಾಸ ಎರಡನೇ ದಿನಕ್ಕೆ ಕಾಲಿಟ್ಟಿದೆ. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವುದು, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಬೇಕು ಹಾಗೂ ಶಿಕ್ಷಣ ಸಚಿವರ ರಾಜೀನಾಮೆ ಪಡೆಯಬೇಕು ಎಂಬ ಬೇಡಿಕೆಗೆ ಅವರು ಬೆಂಬಲ ಸೂಚಿಸಿದ್ದಾರೆ.

ಜೂನ್ 20ರಂದು ಆರಂಭವಾದ ಈ ಪ್ರತಿಭಟನೆ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಸುಧಾರಣೆ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ಎಂಬ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡಿದೆ. ಸರ್ಕಾರ ಈ ಬೇಡಿಕೆಗಳಿಗೆ ಸ್ಪಂದಿಸುವವರೆಗೆ ಉಪವಾಸ ಸತ್ಯಾಗ್ರಹವನ್ನು ಹಿಂಪಡೆಯುವುದಿಲ್ಲ ಎಂದು ಸಿಜೆಪಿ ಸ್ಪಷ್ಟಪಡಿಸಿದೆ.

ಗೋದಿ ಮಾಧ್ಯಮ ಮೌನ

ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ಪರೀಕ್ಷಾ ಅಕ್ರಮಗಳು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿ 11 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಉಪವಾಸ ಆರಂಭಿಸಿರುವ ಖ್ಯಾತ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಗಂಭೀರವಾಗಿ ಹದಗೆಟ್ಟಿದ್ದರೂ, ಈ ಹೋರಾಟಕ್ಕೆ ದೇಶದ ಪ್ರಮುಖ ಗೋದಿ ಮಾಧ್ಯಮಗಳಲ್ಲಿ ನಿರೀಕ್ಷಿತ ಮಟ್ಟದ ಪ್ರಾಮುಖ್ಯತೆ ದೊರೆಯದಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ.

ಪ್ರಜಾಪ್ರಭುತ್ವದಲ್ಲಿ ಜನಪರ ಹೋರಾಟಗಳು ಮತ್ತು ಸಾರ್ವಜನಿಕ ಹಿತಾಸಕ್ತಿಯ ಪ್ರಶ್ನೆಗಳಿಗೆ ಆದ್ಯತೆ ನೀಡುವುದು ಮಾಧ್ಯಮಗಳ ಮೂಲ ಜವಾಬ್ದಾರಿಯಾಗಿದ್ದು, ಇಂತಹ ಮಹತ್ವದ ಪ್ರತಿಭಟನೆಯ ಕುರಿತು ಕಂಡುಬಂದ ಮೌನ ಮತ್ತು ಸೀಮಿತ ಪ್ರಸಾರವು ಮಾಧ್ಯಮಗಳ ಆದ್ಯತೆಗಳು, ಸಂಪಾದಕೀಯ ಸ್ವಾತಂತ್ರ್ಯ ಹಾಗೂ ಅಧಿಕಾರವನ್ನು ಪ್ರಶ್ನಿಸುವ ಪತ್ರಿಕೋದ್ಯಮದ ಬದ್ಧತೆಯ ಬಗ್ಗೆ ಗಂಭೀರ ಚರ್ಚೆಗೆ ಎಡೆಮಾಡಿಕೊಟ್ಟಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ ಫಲಿತಾಂಶ: ಹೊಸ ದಾಖಲೆ ಬರೆದ ವಿಟಿಯುಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಉಪವಾಸ: ಹದಗೆಟ್ಟ ಸೋನಮ್ ವಾಂಗ್‌ಚುಕ್ ಆರೋಗ್ಯ ಭಾರತದ 31ನೇ ಸೇನಾ ಮುಖ್ಯಸ್ಥರಾಗಿ ಜನರಲ್ ಧೀರಜ ಸೇಠ ಅಧಿಕಾರ ಸ್ವೀಕಾರಪಿಎಂ-ಕಿಸಾನ್ ಕಂತು: 1 ಪೈಸೆ ಜಮೆ!ಸೈನಿಕರ ಸಾವಿನ ಬಗ್ಗೆ ಸಂಸತ್ ಗೆ ತಪ್ಪು ಮಾಹಿತಿ : ರಕ್ಷಣಾ ಸಚಿವ ರಾಜನಾಥ ಸಿಂಗ್ ವಿರುದ್ಧ ಹಕ್ಕುಚ್ಯುತಿ ನೋಟಿಸ್126 ವರ್ಷಗಳಲ್ಲೇ ಮೂರನೇ ಅತಿ ಕಳಪೆ ಮುಂಗಾರು!3 ವರ್ಷದ ಕಂದಮ್ಮನ ಮೇಲೆ ಲೈಂಗಿಕ ಕೃತ್ಯ, ಕೊಲೆ: 65 ವರ್ಷದ ಅಪರಾಧಿಗೆ ಗಲ್ಲುಶಿಕ್ಷೆರಾಜ್ಯದಲ್ಲೆಡೆ ಶಾಶ್ವತ ನಿವಾಸ ಪ್ರಮಾಣಪತ್ರ ವಿತರಣೆಗೆ ಹೊಸ ವ್ಯವಸ್ಥೆವಿವಾಹಿತೆಯೊಂದಿಗೆ ಪರಾರಿ: ಮನೆ ಧ್ವಂಸ ಪ್ರಕರಣದಲ್ಲಿ 3 ಪ್ರಮುಖ ಆರೋಪಿಗಳ ಬಂಧನವಿವಾಹಿತೆಯೊಂದಿಗೆ ಪರಾರಿಯಾದ ಯುವಕನ ಮನೆ ಮೇಲೆ ದಾಳಿ; ಮನೆ ಧ್ವಂಸ, ಚಿನ್ನಾಭರಣ, 25 ಕುರಿ ದೋಚಿದ ಆರೋಪ