ಬೆಂಗಳೂರು, ಮೇ 27 : ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್)-2026 ಪ್ರಕ್ರಿಯೆಯಲ್ಲಿ ಉದ್ದೇಶಪೂರ್ವಕ ನಿರ್ಲಕ್ಷ್ಯ ಅಥವಾ ಅರ್ಹ ಮತದಾರರ ಹೆಸರನ್ನು ಕೈಬಿಡುವ ಘಟನೆ ಕಂಡುಬಂದರೆ ಬೂತ್ ಮಟ್ಟದ ಅಧಿಕಾರಿ(ಬಿಎಲ್ಒ) ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಎಚ್ಚರಿಕೆ ನೀಡಿದ್ದಾರೆ.
ನಗರದ ವಾರ್ತಾ ಸೌಧದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಬುಧವಾರ ರಾಜ್ಯ ಚುನಾವಣಾ ಆಯೋಗ ಆಯೋಜಿಸಿದ್ದ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ರಾಜ್ಯದ ಯಾವುದೇ ಅರ್ಹ ನಾಗರಿಕ ಮತದಾರರ ಪಟ್ಟಿಯಿಂದ ವಂಚಿತರಾಗಬಾರದು. ಅದೇ ವೇಳೆ ಅನರ್ಹ ಮತದಾರರು ಪಟ್ಟಿಯಲ್ಲಿ ಉಳಿಯಬಾರದು ಎಂಬ ಉದ್ದೇಶದಿಂದ ಲೋಪದೋಷರಹಿತ ಸಮಗ್ರ ಮತದಾರರ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದರು.
ಪ್ರತಿಯೊಬ್ಬ ಮತದಾರರಿಂದ ಅವರ ಸಹಿಯೊಂದಿಗೆ ಸಮಗ್ರ ಮಾಹಿತಿ ಪಡೆದು ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುವುದು. ಉದ್ದೇಶಪೂರ್ವಕವಾಗಿ ಅರ್ಹ ಮತದಾರರ ಹೆಸರು ಕೈಬಿಟ್ಟರೆ ಅಥವಾ ನಿರ್ಲಕ್ಷ್ಯ ವಹಿಸಿದರೆ ಸಂಬಂಧಪಟ್ಟ ಬಿಎಲ್ಒ ವಿರುದ್ಧ ಕಾನೂನು ಕ್ರಮ ಕೈಗೊಂಡು ಎಫ್ಐಆರ್ ದಾಖಲಿಸಲಾಗುವುದು ಎಂದು ತಿಳಿಸಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದಲ್ಲಿ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ನಡೆಯುತ್ತಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸುವ ಹೊಣೆ ಪ್ರತಿಯೊಬ್ಬ ಭಾರತೀಯನದ್ದಾಗಿದೆ. ಇದು ಕೇವಲ ಚುನಾವಣಾ ಆಯೋಗದ ಜವಾಬ್ದಾರಿಯಲ್ಲ ಎಂದು ಹೇಳಿದರು.
ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಬಿಎಲ್ಒಗಳು ಮನೆ ಮನೆಗೆ ಭೇಟಿ ನೀಡಿ ಎಣಿಕೆ ನಮೂನೆಗಳೊಂದಿಗೆ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ ಎಂದು ವಿವರಿಸಿದರು.
ಈ ಪ್ರಕ್ರಿಯೆಯಲ್ಲಿ ಉದ್ಭವಿಸುವ ಸಮಸ್ಯೆಗಳು ಹಾಗೂ ಪ್ರಶ್ನೆಗಳ ನಿವಾರಣೆಗೆ ಪ್ರತಿ ಪಂಚಾಯಿತಿಯಲ್ಲೂ ಸಹಾಯ ಕೇಂದ್ರಗಳನ್ನು ತೆರೆಯಲಾಗುವುದು. ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಲು ಮತದಾರರ ಪಟ್ಟಿಯ ವಿಶ್ವಾಸಾರ್ಹತೆ ಅತ್ಯಂತ ಮುಖ್ಯವಾಗಿದ್ದು, ನಿಗದಿತ ಮಾರ್ಗಸೂಚಿ ಹಾಗೂ ವೇಳಾಪಟ್ಟಿಯಂತೆ ಸಮಗ್ರ ಪರಿಷ್ಕರಣೆ ಕಾರ್ಯ ನಡೆಯಲಿದೆ ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ, ಉಪ ಮುಖ್ಯ ಚುನಾವಣಾಧಿಕಾರಿ ವಂದನಾ, ಸಹಾಯಕ ಮುಖ್ಯ ಚುನಾವಣಾಧಿಕಾರಿ ಮಹೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೂತ್ ಮಟ್ಟದ ಏಜೆಂಟರಲ್ಲಿ ಕಾಂಗ್ರೆಸ್ಗೆ ಮೇಲುಗೈ
ಮತದಾರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಏಜೆಂಟರು(ಬಿಎಲ್ಎ) ಕೂಡ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಒಟ್ಟು 69,977 ಬಿಎಲ್ಎಗಳು ನೋಂದಣಿ ಮಾಡಿಕೊಂಡಿದ್ದಾರೆ.
ಇದರಲ್ಲೂ ಕಾಂಗ್ರೆಸ್ ಪಕ್ಷದ 36,213, ಬಿಜೆಪಿ ಪಕ್ಷದ 31,115 ಹಾಗೂ ಜೆಡಿಎಸ್ ಪಕ್ಷದ 2,316 ಬಿಎಲ್ಎಗಳು ಸೇರಿದ್ದಾರೆ ಎಂದು ಅನ್ಬುಕುಮಾರ್ ಮಾಹಿತಿ ನೀಡಿದರು.