ದಾವಣಗೆರೆ, ಜೂ. 9 : ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಸಮೀಪ 41 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿ ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಒಬ್ಬ ಬಾಲಕ ಸೇರಿದಂತೆ 10 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜೂನ್ 3ರ ರಾತ್ರಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯ ಚಿತ್ರಗಳು ಹಾಗೂ ವಿಡಿಯೊಗಳನ್ನು ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ವಿಷಯ ಕುಟುಂಬದವರಿಗೆ ತಿಳಿದ ನಂತರ ಮಹಿಳೆ ದೂರು ನೀಡಿದ್ದು, ಪೊಲೀಸರು ತಕ್ಷಣ ತನಿಖೆ ಆರಂಭಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಮದ್ಯಪಾನ ಮಾಡಿದ್ದ ಪತಿಯೊಂದಿಗೆ ಜಗಳವಾಡಿದ ಮಹಿಳೆ ರಾತ್ರಿ ವೇಳೆ ಸಮೀಪದ ತವರೂರಿನತ್ತ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು. ಈ ವೇಳೆ ಯುವಕರ ಗುಂಪೊಂದು ಸಹಾಯ ಮಾಡುವ ನೆಪದಲ್ಲಿ ಆಕೆಯನ್ನು ಸಂಪರ್ಕಿಸಿ ಮಾತನಾಡಿದೆ. ಬಳಿಕ ಕುಡಿಯಲು ತಂಪು ಪಾನೀಯ ನೀಡಿದ್ದು, ಅದನ್ನು ಸೇವಿಸಿದ ಬಳಿಕ ಮಹಿಳೆ ಅಸ್ವಸ್ಥಗೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ನಂತರ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದೌರ್ಜನ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಘಟನೆಯ ವಿಡಿಯೊ ಚಿತ್ರೀಕರಣ ನಡೆಸಿ, ಅದನ್ನು ಹರಿಬಿಟ್ಟ ಆರೋಪವೂ ಕೇಳಿಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಚಟಾಕಿ ನಾಗರಾಜ, ಇಸ್ತ್ರೀ ನಾಗರಾಜ, ಮಧು, ಅರ್ಜುನ, ಬಸವಂತ, ಕುಂದೂರ ಮಾರುತಿ, ಮನು, ಜೋಗಿ ಸುನೀಲ ಹಾಗೂ ಪ್ರದೀಪ ಸೇರಿದಂತೆ 20ರಿಂದ 30 ವರ್ಷದೊಳಗಿನ ಆರೋಪಿಗಳನ್ನು ಬಸವಾಪಟ್ಟಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಒಬ್ಬ ಬಾಲಕನನ್ನೂ ವಶಕ್ಕೆ ಪಡೆಯಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ ಹಾಗೂ ಡಿವೈಎಸ್ಪಿ ರುದ್ರಪ್ಪ ಉಜ್ಜಿನಿಕೊಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.