ಬೆಂಗಳೂರು, ಜುಲೈ 20: ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಭಾರೀ ಶಾಕ್ ನೀಡಿದ್ದು, ಒಟ್ಟು 160 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ವರ್ಗಾವಣೆಗೊಂಡವರಲ್ಲಿ 131 ಭೂವಿಜ್ಞಾನಿಗಳು, 23 ಹಿರಿಯ ಭೂವಿಜ್ಞಾನಿಗಳು ಹಾಗೂ 6 ಉಪ ನಿರ್ದೇಶಕರು ಸೇರಿದ್ದಾರೆ. ಇಲಾಖೆಯ ಸುಮಾರು ಶೇ.80ರಷ್ಟು ಸಿಬ್ಬಂದಿಯನ್ನು ಒಂದೇ ಆದೇಶದಲ್ಲಿ ವರ್ಗಾವಣೆ ಮಾಡಲಾಗಿದೆ.
ದೀರ್ಘಕಾಲದಿಂದ ಸ್ವಂತ ಜಿಲ್ಲೆ ಅಥವಾ ನೆರೆಯ ಜಿಲ್ಲೆಗಳಲ್ಲೇ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಸ್ಥಳಾಂತರಿಸಲಾಗಿದೆ. ಸ್ಥಳೀಯ ಮಟ್ಟದ ಏಕಸ್ವಾಮ್ಯಕ್ಕೆ ಕಡಿವಾಣ ಹಾಕುವುದು, ಪಾರದರ್ಶಕತೆ ಹೆಚ್ಚಿಸುವುದು ಹಾಗೂ ಆಡಳಿತಾತ್ಮಕ ಸುಧಾರಣೆ ತರಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ.
ವರ್ಗಾವಣೆಯಾದ ಅಧಿಕಾರಿಗಳು ಕೂಡಲೇ ಹೊಸ ಕರ್ತವ್ಯ ಸ್ಥಳಕ್ಕೆ ಹಾಜರಾಗಿ ಕೇಂದ್ರ ಕಚೇರಿಗೆ ಮಾಹಿತಿ ನೀಡುವಂತೆ ಆದೇಶಿಸಲಾಗಿದೆ.
ಜುಲೈ 1ರಂದು ನಡೆದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇಲಾಖಾ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು. ಅನಧಿಕೃತ ಗಣಿಗಾರಿಕೆಗೆ ಕಡಿವಾಣ ಹಾಕುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸೂಚನೆಯ ಮೇರೆಗೆ ಈ ಆಡಳಿತಾತ್ಮಕ ಬದಲಾವಣೆ ಜಾರಿಗೆ ಬಂದಿದೆ.