ಬೆಂಗಳೂರು, ಜುಲೈ 31: ಧಾರವಾಡ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ ಮಹತ್ವದ ರಿಲೀಫ್ ನೀಡಿದೆ. ಜೀವಾವಧಿ ಶಿಕ್ಷೆಯ ಜಾರಿಗೆ ತಡೆಯಾಜ್ಞೆ ನೀಡಿರುವ ನ್ಯಾಯಾಲಯ, ವಿನಯ ಕುಲಕರ್ಣಿ ಸೇರಿದಂತೆ ಪ್ರಕರಣದ ಎಲ್ಲಾ 10 ದೋಷಿಗಳಿಗೆ ಜಾಮೀನು ಮಂಜೂರು ಮಾಡಿದೆ.
ಧಾರವಾಡದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇತ್ತೀಚೆಗೆ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ವಿನಯ್ ಕುಲಕರ್ಣಿ ಹಾಗೂ ಇತರ ದೋಷಿಗಳು ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಮೇಲ್ಮನವಿಯ ಜೊತೆಗೆ ಜೀವಾವಧಿ ಶಿಕ್ಷೆಯ ಜಾರಿಗೆ ತಡೆ ನೀಡಬೇಕು ಹಾಗೂ ಮೇಲ್ಮನವಿ ಇತ್ಯರ್ಥವಾಗುವವರೆಗೆ ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳ ಪೀಠವು ಶುಕ್ರವಾರ ಮಹತ್ವದ ಆದೇಶ ನೀಡಿದೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಮೇಲ್ಮನವಿ ಇತ್ಯರ್ಥವಾಗುವವರೆಗೆ ಜೀವಾವಧಿ ಶಿಕ್ಷೆಯ ಜಾರಿಗೆ ತಡೆಯಾಜ್ಞೆ ನೀಡಿದೆ. ಅಲ್ಲದೆ, ವಿಶೇಷ ನ್ಯಾಯಾಲಯ ನೀಡಿದ್ದ ದೋಷಿ ಎಂಬ ತೀರ್ಪಿನ ಅನುಷ್ಠಾನಕ್ಕೂ ತಡೆ ನೀಡಿದೆ.
ಇದೇ ವೇಳೆ, ವಿನಯ ಕುಲಕರ್ಣಿ ಸೇರಿದಂತೆ ಪ್ರಕರಣದ ಎಲ್ಲಾ 10 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ದೇಶ ತೊರೆಯಬಾರದು, ತನಿಖೆ ಅಥವಾ ವಿಚಾರಣೆಗೆ ಸಂಬಂಧಿಸಿದ ಸಾಕ್ಷ್ಯಾಧಾರಗಳ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವ ಪ್ರಯತ್ನ ಮಾಡಬಾರದು ಹಾಗೂ ನ್ಯಾಯಾಲಯ ವಿಧಿಸಿರುವ ಇತರೆ ಷರತ್ತುಗಳನ್ನು ಪಾಲಿಸಬೇಕು ಎಂದು ಸೂಚಿಸಲಾಗಿದೆ.
2016ರ ಜೂನ್ 15ರಂದು ಧಾರವಾಡದಲ್ಲಿ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು. ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಈ ಪ್ರಕರಣದ ತನಿಖೆಯನ್ನು ಬಳಿಕ ಸಿಬಿಐಗೆ ವಹಿಸಲಾಗಿತ್ತು. ಸುದೀರ್ಘ ವಿಚಾರಣೆಯ ಬಳಿಕ ವಿಶೇಷ ನ್ಯಾಯಾಲಯ ವಿನಯ ಕುಲಕರ್ಣಿ ಸೇರಿದಂತೆ 10 ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಈಗ ಹೈಕೋರ್ಟ್ ನೀಡಿರುವ ಆದೇಶದಿಂದ ವಿನಯ ಕುಲಕರ್ಣಿ ಹಾಗೂ ಇತರ ದೋಷಿಗಳಿಗೆ ತಾತ್ಕಾಲಿಕ ನಿರಾಳತೆ ದೊರೆತಿದ್ದು, ಪ್ರಕರಣದ ಅಂತಿಮ ತೀರ್ಪು ಮೇಲ್ಮನವಿ ವಿಚಾರಣೆ ಪೂರ್ಣಗೊಂಡ ಬಳಿಕ ಹೊರಬೀಳಲಿದೆ.
