ಅಣ್ಣಿಗೇರಿ, ಜುಲೈ 18: ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸಂಭವಿಸಿದ ಬೆಂಕಿ ಅವಘಡದಲ್ಲಿ ತಾಯಿ ಹಾಗೂ ಇಬ್ಬರು ಪುತ್ರರು ಗಂಭೀರವಾಗಿ ಗಾಯಗೊಂಡಿದ್ದು, ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಉದಯನಗರದಲ್ಲಿ ಶನಿವಾರ ಮುಂಜಾನೆ ನಡೆದಿದೆ.
ಉದಯನಗರ ನಿವಾಸಿ ಅಲ್ಲಾಭಕ್ಷ ಧಾರವಾಡ ಅವರ ಮನೆಯಲ್ಲಿ ಬೆಳಗಿನ ಜಾವ ಸುಮಾರು 5 ಗಂಟೆ ವೇಳೆಗೆ ಗ್ಯಾಸ್ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿದ್ದು, ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕ್ಷಣಾರ್ಧದಲ್ಲೇ ಮನೆಯೊಳಗೆ ವ್ಯಾಪಿಸಿ, ಸಾಹೇರಾಬಾನು ಧಾರವಾಡ (55), ಅವರ ಪುತ್ರರಾದ ಅಬ್ಬಾಸಲಿ ಧಾರವಾಡ (29) ಹಾಗೂ ಹಸನಸಾಬ ಧಾರವಾಡ (26) ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯರ ನೆರವಿನಿಂದ ತಕ್ಷಣ ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಗಾಯಗೊಂಡ ತಾಯಿ ಹಾಗೂ ಇಬ್ಬರು ಪುತ್ರರ ನರಳಾಟ ಕಂಡು ಸ್ಥಳದಲ್ಲಿದ್ದವರ ಮನಕಲಕುವಂತಾಯಿತು.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು, ಮತ್ತಷ್ಟು ಅನಾಹುತ ಸಂಭವಿಸುವುದನ್ನು ತಪ್ಪಿಸಿದರು.
ಸ್ಥಳೀಯ ಪೊಲೀಸ್ ಠಾಣೆಯ ಪಿಎಸ್ಐ ಉಮಾದೇವಿ ನೇತೃತ್ವದ ಪೊಲೀಸ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಪ್ರಾಥಮಿಕ ತನಿಖೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಲೇ ಅವಘಡ ಸಂಭವಿಸಿರುವ ಸಾಧ್ಯತೆ ವ್ಯಕ್ತವಾಗಿದ್ದು, ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ.
ಅವಘಡದಲ್ಲಿ ಮನೆಯಲ್ಲಿದ್ದ ಪೀಠೋಪಕರಣಗಳು, ಗೃಹೋಪಯೋಗಿ ವಸ್ತುಗಳು ಹಾಗೂ ಇತರೆ ಸಾಮಗ್ರಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ. ಘಟನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಶಂಕೆ ವ್ಯಕ್ತವಾಗಿದೆ.