ಠಾಣೆ, ಜೂ. 11 : ಕಾನೂನು, ಪೊಲೀಸ್ ಹಾಗೂ ನ್ಯಾಯಾಂಗದ ಭಯವೇ ಇಲ್ಲದಂತಾಗಿದೆಯೇ ಎಂಬ ಪ್ರಶ್ನೆ ಮೂಡುವಂತೆ ಮಹಾರಾಷ್ಟ್ರದ ಠಾಣೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಸಾರ್ವಜನಿಕ ಸ್ಥಳದಲ್ಲಿ ಉಗುಳಬೇಡಿ ಎಂದು ಹೇಳಿದ 70 ವರ್ಷದ ವೃದ್ಧನಿಗೆ ಆಟೋ ಚಾಲಕನೊಬ್ಬ ಅಶ್ಲೀಲ ಪದಗಳಿಂದ ನಿಂದಿಸಿ ಹಿಗ್ಗಾಮುಗ್ಗ ಹಲ್ಲೆ ನಡೆಸಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ನಗರದ ವಿವಿಯಾನಾ ಮಾಲ್ ಸಮೀಪದ ಜುಪಿಟರ್ ಆಸ್ಪತ್ರೆ ಹೊರಭಾಗದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಘಟನೆಯ ವಿಡಿಯೊ ನೋಡಿದ ಸಾರ್ವಜನಿಕರು ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಮಾಹಿತಿಯ ಪ್ರಕಾರ, ಸರೋಷ ದಸ್ತೂರ ಎಂಬ ವೃದ್ಧರು ತಮ್ಮ ಪತ್ನಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಟೋ ಚಾಲಕನೊಬ್ಬ ರಸ್ತೆಯಲ್ಲೇ ಉಗುಳುತ್ತಿರುವುದನ್ನು ಗಮನಿಸಿದ್ದಾರೆ. ಸಾರ್ವಜನಿಕ ಸ್ವಚ್ಛತೆಯ ದೃಷ್ಟಿಯಿಂದ ರಸ್ತೆಯಲ್ಲಿ ಉಗುಳಬೇಡಿ ಎಂದು ಅವರು ಸಲಹೆ ನೀಡಿದ್ದಾರೆ.
ಇದರಿಂದ ಆಕ್ರೋಶಗೊಂಡ ನಿಶಾಂತ ಧರ್ ಶುಕ್ಲಾ ಎಂಬ ಆಟೋ ಚಾಲಕ ಮೊದಲು ವೃದ್ಧರನ್ನು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಳಿಕ ವಾಗ್ವಾದ ತೀವ್ರಗೊಂಡು ವೃದ್ಧರ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಬಲವಾಗಿ ತಳ್ಳಿದ ಪರಿಣಾಮ ವೃದ್ಧರು ಕೆಳಗೆ ಬಿದ್ದು ಕಾಲಿನ ಮೂಳೆ ಮುರಿದುಕೊಂಡಿದ್ದಾರೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಆರೋಪಿಯ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸುವಂತೆ ನಿರ್ದೇಶನ ನೀಡಿದ್ದಾರೆ.
ಸಾರ್ವಜನಿಕ ಹಿತದ ಮಾತು ಹೇಳಿದ ಹಿರಿಯ ನಾಗರಿಕರ ಮೇಲೆಯೇ ಅಶ್ಲೀಲ ನಿಂದನೆ ಹಾಗೂ ಹಲ್ಲೆ ನಡೆದಿರುವುದು ವ್ಯಾಪಕ ಖಂಡನೆಗೆ ಕಾರಣವಾಗಿದ್ದು, ಸಮಾಜದಲ್ಲಿ ಕಾನೂನಿನ ಭಯ ಕಡಿಮೆಯಾಗುತ್ತಿರುವ ಬಗ್ಗೆ ಚರ್ಚೆಗೆ ಎಡೆಮಾಡಿಕೊಟ್ಟಿದೆ.