ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಚುನಾವಣಾ ಪ್ರಮಾಣ ಪತ್ರದಲ್ಲಿ ಮಾಹಿತಿ ಮರೆಮಾಚಿದ ಬಿಜೆಪಿ ಶಾಸಕರಿಗೆ ಜೈಲುಶಿಕ್ಷೆ

ಬೆಂಗಳೂರು, ೧೪- ಚುನಾವಣೆಗೆ ಸ್ಪರ್ಧಿಸುವ ಸಂದರ್ಭದಲ್ಲಿ ಸಲ್ಲಿಸಿದ್ದ ಪ್ರಮಾಣ ಪತ್ರದಲ್ಲಿ ಮಾಹಿತಿ ಮರೆಮಾಚಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರೊಬ್ಬರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎರಡು ತಿಂಗಳ ಜೈಲು ಶಿಕ್ಷೆ ಹಾಗೂ 10,000 ರೂಪಾಯಿ ದಂಡ ವಿಧಿಸಿ ಆದೇಶಿಸಿದೆ.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಉದಯ ಬಿ. ಗರುಡಾಚಾರ ಶಿಕ್ಷೆಗೊಳಗಾದವರಾಗಿದ್ದು, 2018ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ನಾಮಪತ್ರ ಸಲ್ಲಿಸುವ ವೇಳೆ ನೀಡಿದ್ದ ಪ್ರಮಾಣ ಪತ್ರದಲ್ಲಿ ಅವರು, ತಮ್ಮ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ, ಕಂಪನಿಯೊಂದರಲ್ಲಿ ತಾವು ವ್ಯವಸ್ಥಾಪಕ ನಿರ್ದೇಶಕನಾಗಿರುವುದು ಹಾಗೂ ಪತ್ನಿಯ ಬ್ಯಾಂಕ್ ಖಾತೆಯ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಬನಶಂಕರಿ ಮೂರನೇ ಹಂತದ ನಿವಾಸಿ ಎಚ್.ಜಿ. ಪ್ರಶಾಂತ ಎಂಬವರು ಖಾಸಗಿ ದೂರು ಸಲ್ಲಿಸಿದ್ದು, ಇದರ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತ್ತು. ಇದೀಗ ತೀರ್ಪು ಹೊರ ಬಿದ್ದಿದ್ದು, ಶಾಸಕರ ವಿರುದ್ಧದ ಆರೋಪ ದೃಢಪಟ್ಟಿರುವ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ಪ್ರೀತ್ ಜೆ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ. ಇದರ ಜೊತೆಗೆ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದ್ದು, ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.