LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮೇ 16ರಂದು ‘ಕರ್ನಾಟಕ ಮುಸ್ಲಿಂ ಸಮಾವೇಶ’

ಬೆಂಗಳೂರು, ಮೇ 8 : ರಾಜ್ಯದ ಪ್ರಮುಖ ಮುಸ್ಲಿಂ ಸಂಘಟನೆಗಳು, ಜಮಾತಗಳು ಹಾಗೂ ಒಕ್ಕೂಟಗಳ ವತಿಯಿಂದ ಮೇ 16ರಂದು ಬೆಂಗಳೂರಿನ ಟೌನ್‌ ಹಾಲ್‌ನಲ್ಲಿ ‘ಕರ್ನಾಟಕ ಮುಸ್ಲಿಂ ಸಮಾವೇಶ’ ಆಯೋಜಿಸಲು ತೀರ್ಮಾನಿಸಲಾಗಿದೆ.

ಈ ಬೃಹತ್‌ ಸಾರ್ವಜನಿಕ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ಮೂರು ವರ್ಷದ ಆಡಳಿತ ಕಾರ್ಯವೈಖರಿಯನ್ನು ವಿಶ್ಲೇಷಿಸುವ ಸಮಗ್ರ ವರದಿಯನ್ನು ಬಿಡುಗಡೆ ಮಾಡಲಾಗುತ್ತದೆ. ಕಾಂಗ್ರೆಸ್‌ ಸರ್ಕಾರ ಹೇಳಿದ್ದೇನು, ಮಾಡಿದ್ದೇನು, ಮುಂದೇನು ಎಂಬ ಶೀರ್ಷಿಕೆಯಡಿ ವರದಿ ಸಿದ್ಧಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ಸಮಾವೇಶಕ್ಕೆ ಯಾವುದೇ ರಾಜಕಾರಣಿಗಳಿಗೆ ಆಹ್ವಾನ ಇರುವುದಿಲ್ಲ. ಸಮಾವೇಶದ ಬಳಿಕ ವರದಿಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಹಾಗೂ ಎಲ್ಲ ಶಾಸಕರಿಗೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಲಾಗಿದೆ.

ಕಾಂಗ್ರೆಸ್‌ ಸರ್ಕಾರಕ್ಕೆ ಮೇ 20ರಂದು ಮೂರು ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲೇ ಈ ಸಮಾವೇಶ ನಡೆಯುತ್ತಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ. ಕಾಂಗ್ರೆಸ್‌ಗೆ ಸಂಪೂರ್ಣ ಬೆಂಬಲ ನೀಡಿ ಅಧಿಕಾರಕ್ಕೆ ತರುವಲ್ಲಿ ಮುಸ್ಲಿಂ ಸಮುದಾಯ ನಿರ್ಣಾಯಕ ಪಾತ್ರ ವಹಿಸಿದ್ದರೂ, ಸರ್ಕಾರ ಸಮುದಾಯವನ್ನು ನಿರ್ಲಕ್ಷಿಸುತ್ತಿದೆ ಎಂಬ ಅಸಮಾಧಾನ ವ್ಯಕ್ತವಾಗುತ್ತಿದೆ ಎಂದು ಸಂಘಟನೆಗಳ ಮುಖಂಡರು ಹೇಳಿದ್ದಾರೆ.

ರಾಜ್ಯದಲ್ಲಿ ಮುಸ್ಲಿಮರಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ. ಸಮುದಾಯದ ಬೇಡಿಕೆಗಳನ್ನು ಕಡೆಗಣಿಸಲಾಗುತ್ತಿದೆ. ದಶಕಗಳಿಂದ ಪಕ್ಷಕ್ಕಾಗಿ ದುಡಿದ ಹಿರಿಯ ಮುಸ್ಲಿಂ ನಾಯಕರನ್ನು ಅಮಾನತು ಮಾಡಿರುವ ಬೆಳವಣಿಗೆಯೂ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಮೇ 6ರಂದು ಬೆಂಗಳೂರಿನ ಶಿವಾಜಿನಗರದ ಎಜೆ ಇಂಟರ್‌ನ್ಯಾಷನಲ್‌ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ವಿವಿಧ ಮುಸ್ಲಿಂ ಸಂಘಟನೆಗಳು, ಉಲೇಮಾ ಸಂಘಟನೆಗಳು, ಸಂಘ ಸಂಸ್ಥೆಗಳು ಹಾಗೂ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟದ ಅಡ್‌ ಹಾಕ್‌ ಸಮಿತಿಯ ಪ್ರತಿನಿಧಿಗಳು ಭಾಗವಹಿಸಿದ್ದರು.

ಹಿರಿಯ ಉಲೇಮಾಗಳು, ಜಮಾಅತ್‌ ಮುಖಂಡರು, ವಕೀಲರು, ನಿವೃತ್ತ ಅಧಿಕಾರಿಗಳು, ಪತ್ರಕರ್ತರು ಸೇರಿದಂತೆ 75ಕ್ಕೂ ಹೆಚ್ಚು ಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟದ ವರದಿ ತಯಾರಿ ತಂಡ ಹಾಗೂ ವಿವಿಧ ಕ್ಷೇತ್ರಗಳ ಪರಿಣತರು ಸಿದ್ಧಪಡಿಸಿದ ವರದಿಯಲ್ಲಿ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರಿಗೆ ನೀಡಿದ್ದ ಭರವಸೆಗಳು, ಅವುಗಳಲ್ಲಿ ಈಡೇರಿದವು ಹಾಗೂ ಈಡೇರದ ಭರವಸೆಗಳ ಕುರಿತು ವಿವರಿಸಲಾಗಿದೆ.

ಹಿಜಾಬ್‌ ನಿರ್ಬಂಧ, ಮೀಸಲಾತಿ ರದ್ದತಿ, ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ, ಬಜೆಟ್‌ ಹಂಚಿಕೆ, ರಾಜಕೀಯ ಪ್ರಾತಿನಿಧ್ಯ, ವಕ್ಫ್‌ ವಿಷಯ, ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿರ್ಬಂಧ ಕಾಯ್ದೆ, ವಿದ್ಯಾರ್ಥಿ ವೇತನ ಹಾಗೂ ಶಿಕ್ಷಣ ಕ್ಷೇತ್ರದ ಅನುದಾನ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಬಂದ ಸಲಹೆ ಮತ್ತು ಸೂಚನೆಗಳನ್ನು ಪರಿಗಣಿಸಿ ವರದಿಯಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಸಭೆಯಲ್ಲಿ ಕಾಂಗ್ರೆಸ್‌ ಸರ್ಕಾರ ಮುಸ್ಲಿಂ ಸಮುದಾಯವನ್ನು ನಡೆಸಿಕೊಂಡಿರುವ ರೀತಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಯಿತು. ಸರ್ಕಾರ ಮತ್ತು ಕಾಂಗ್ರೆಸ್‌ ಪಕ್ಷ ಇದೇ ಧೋರಣೆಯನ್ನು ಮುಂದುವರಿಸಿದರೆ ಸಮುದಾಯ ತನ್ನ ರಾಜಕೀಯ ಆಯ್ಕೆಗಳನ್ನು ಮುಕ್ತವಾಗಿಡಬೇಕಾದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.

ಮೇ 16ರಂದು ನಡೆಯಲಿರುವ ಸಮಾವೇಶಕ್ಕೆ ರಾಜ್ಯದ ಎಲ್ಲ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಸರ್ಕಾರ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ಬಲವಾದ ಸಂದೇಶ ರವಾನಿಸಬೇಕು ಎಂದು ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೆಹಲಿಯಲ್ಲಿ ಬೆಚ್ಚಿಬೀಳಿಸುವ ಘಟನೆ! : 3 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಾಲಾ ಸಿಬ್ಬಂದಿಗೆ ಜಾಮೀನುಮೇ 16ರಂದು ‘ಕರ್ನಾಟಕ ಮುಸ್ಲಿಂ ಸಮಾವೇಶ’ರೈತರ ಮಾರಣಹೋಮ ಪ್ರಕರಣ ವಿಚಾರಣೆ ವಿಳಂಬಕ್ಕೆ ಸುಪ್ರೀಮ ಅಸಮಾಧಾನMadhya Pradesh | ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದವನೊಂದಿಗೆ ಮಹಿಳಾ ಜೇಲರ್‌ ಅಂತರಧರ್ಮೀಯ ವಿವಾಹ!ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿ ಆಗಲಿರುವ ಸುವೇಂದು ಅಧಿಕಾರಿತಮಿಳುನಾಡಿನಲ್ಲಿ ಟಿವಿಕೆ ಸರ್ಕಾರ ರಚನೆಗೆ ದಾರಿ ಸುಗಮಲೋಕಸಭೆಯಲ್ಲಿ ಡಿಎಂಕೆಗೆ ಪ್ರತ್ಯೇಕ ಆಸನ ಬೇಡಿಕೆಹುಬ್ಬಳ್ಳಿ-ಧಾರವಾಡ ಮಹಾನಗರಪಾಲಿಕೆ ವಲಯ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿಐಪಿಎಲ್‌ ಫೈನಲ್‌ ಮತ್ತೆ ಗುಜರಾತಿಗೆ : ಪರಮೇಶ್ವರ ಆಕ್ರೋಶಸೂರ್ಯಕಾಂತಿ ಖರೀದಿಗೆ ಬೆಂಬಲ ಬೆಲೆ ಘೋಷಣೆ