LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಯುವಕನ ಮೇಲೆ ಹಲ್ಲೆ ; 30 ಮಂದಿ ವಿರುದ್ಧ ಪ್ರಕರಣ

ಕೊಪ್ಪಳ, ಮೇ 8 : ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಆರೋಪದಲ್ಲಿ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ಕೊಪ್ಪಳ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿ ನಗರ ಠಾಣೆ ಪೊಲೀಸರು 30ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಮೂವರನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

ಮೊಬೈಲ್‌ ಏಜೆನ್ಸಿಯೊಂದರಲ್ಲಿ ಕೆಲಸ ಮಾಡುತ್ತಿರುವ ಸಮೀರ್‌ ಅಹ್ಮದ್‌ ಮೂಲಿಮನಿ (22) ಮೇ 6ರಂದು ರಾತ್ರಿ 8:30ರ ಸುಮಾರಿಗೆ ತಾನು ಪ್ರೀತಿಸುತ್ತಿದ್ದ ಯುವತಿಯೊಂದಿಗೆ ನಗರದ ಹೋಟೆಲ್‌ನಲ್ಲಿ ಕುಳಿತಿದ್ದ ವೇಳೆ ಕೆಲ ಯುವಕರು ಅಲ್ಲಿಗೆ ಬಂದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ವೇಳೆ ಇಬ್ಬರ ಹೆಸರು ಕೇಳಿದ ಯುವಕರು, ಪ್ರೀತಿಸುತ್ತಿರುವ ವಿಷಯ ತಿಳಿದ ಬಳಿಕ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಸಮೀರ್‌ನ ಕಣ್ಣಿಗೆ ಬಟ್ಟೆ ಕಟ್ಟಿ ಬೈಕ್‌ನಲ್ಲಿ ಹೊಸಪೇಟೆ ಕಡೆ ರಾಷ್ಟ್ರೀಯ ಹೆದ್ದಾರಿ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮುಂದುವರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಹಿಂದೂ ಹುಡುಗಿಯನ್ನು ಪ್ರೀತಿಸುತ್ತೀಯಾ ಎಂದು ನಿಂದಿಸಿ, ಕಬ್ಬಿಣದ ರಾಡ್‌ ಹಾಗೂ ಕೈಗಳಿಂದ ಹಲ್ಲೆ ನಡೆಸಿದ್ದಾರೆ. ಇನ್ನು ಮುಂದೆ ಆಕೆಯೊಂದಿಗೆ ಕಾಣಿಸಿಕೊಂಡರೆ ಜೀವಂತವಾಗಿ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ಸಮೀರ್‌ ಆರೋಪಿಸಿದ್ದಾರೆ.

ಹಲ್ಲೆ ಬಳಿಕ ಕಣ್ಣಿಗೆ ಬಟ್ಟೆ ಕಟ್ಟಿದ ಸ್ಥಿತಿಯಲ್ಲೇ ಜಿಲ್ಲಾಸ್ಪತ್ರೆ ಸಮೀಪ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಯುವತಿಯ ಸಹೋದರರಾದ ಆಶಿಷ್‌, ನೀಲೇಶ್‌ ಸೇರಿದಂತೆ 30ಕ್ಕೂ ಹೆಚ್ಚು ಮಂದಿಯ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST