ಹೊಸದಿಲ್ಲಿ, ಮೇ 29 : ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ನೀಟ್-ಪದವಿ 2026 ಪರೀಕ್ಷೆ ರದ್ದಾಗಿರುವುದು ಅತ್ಯಂತ ಆಘಾತಕಾರಿ ಬೆಳವಣಿಗೆ ಎಂದು ಸುಪ್ರೀಮ ಕೋರ್ಟ ಶುಕ್ರವಾರ ಅಭಿಪ್ರಾಯಪಟ್ಟಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯ ಉತ್ತರದಾಯಿತ್ವದ ಕೊರತೆ ಹಾಗೂ ಪರೀಕ್ಷಾ ವ್ಯವಸ್ಥೆಯ ಸಮಗ್ರತೆ ಕುರಿತೂ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
2024 ಮತ್ತು 2026ರಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿರುವುದು ಪರೀಕ್ಷಾ ವ್ಯವಸ್ಥೆಯಲ್ಲಿನ ಗಂಭೀರ ವೈಫಲ್ಯವನ್ನು ತೋರಿಸುತ್ತದೆ. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಮ ಕೋರ್ಟ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅಲೋಕ್ ಆರಾಧೆ ಅವರಿದ್ದ ಪೀಠ, ಕಳೆದ ವರ್ಷ ಹಲವು ಸುಧಾರಣೆಗಳನ್ನು ಜಾರಿಗೊಳಿಸಿದ್ದರೂ ಸೋರಿಕೆ ಪ್ರಕರಣಗಳು ಪುನರಾವರ್ತನೆಯಾಗಿರುವುದು ಕಳವಳಕಾರಿ ಸಂಗತಿ ಎಂದು ಹೇಳಿತು.
ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿರುವುದು ಅತ್ಯಂತ ದುರದೃಷ್ಟಕರ. ವಿದ್ಯಾರ್ಥಿಗಳು ನಿರಾಶರಾಗುವಂತಹ ಪರಿಸ್ಥಿತಿಯನ್ನು ಸೃಷ್ಟಿಸಬಾರದು. ಅವರ ಕನಸುಗಳು, ಕುಟುಂಬಗಳ ನಿರೀಕ್ಷೆಗಳು, ವರ್ಷಗಳ ಪರಿಶ್ರಮ ಮತ್ತು ಭಾವನೆಗಳು ಇದರೊಂದಿಗೆ ಬೆಸೆದುಕೊಂಡಿವೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.
2024ರ ನೀಟ್-ಪದವಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಜಾರಿಗೊಳಿಸಲಾದ ಸುಧಾರಣೆಗಳ ಅನುಷ್ಠಾನ ಕುರಿತು ಎನ್ಟಿಎ ಹಾಗೂ ಇಸ್ರೊ ಮಾಜಿ ಅಧ್ಯಕ್ಷ ಕೆ. ರಾಧಾಕೃಷ್ಣನ್ ನೇತೃತ್ವದ ಉನ್ನತಾಧಿಕಾರದ ಸಮಿತಿ ಸಲ್ಲಿಸಿದ್ದ ಅಫಿದಾವಿತ್ಗಳ ಪರಿಶೀಲನೆ ವೇಳೆ ನ್ಯಾಯಾಲಯ ಈ ಅಭಿಪ್ರಾಯ ವ್ಯಕ್ತಪಡಿಸಿತು.
ನೀಟ್-ಪದವಿ 2026 ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮೇ 12ರಂದು ಎನ್ಟಿಎ ಪರೀಕ್ಷೆಯನ್ನು ರದ್ದುಪಡಿಸಿತ್ತು. ಈ ಕುರಿತು ಅಖಿಲ ಭಾರತ ವೈದ್ಯಕೀಯ ಸಂಘಗಳ ಒಕ್ಕೂಟ ಮತ್ತು ಯುನೈಟೆಡ್ ಡಾಕ್ಟರ್ಸ್ ಫ್ರಂಟ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಮ ಕೋರ್ಟ ನಡೆಸುತ್ತಿದೆ.
ಪರಿಣತ ಸಮಿತಿಯ ಬಹುತೇಕ ಶಿಫಾರಸುಗಳನ್ನು ನೀಟ್-ಪದವಿ 2026 ಪರೀಕ್ಷೆಗೆ ಮುನ್ನವೇ ಜಾರಿಗೊಳಿಸಲಾಗಿತ್ತು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು. ಮರುಪರೀಕ್ಷೆಗಾಗಿ ಹೆಚ್ಚುವರಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದೂ ಅವರು ಹೇಳಿದರು.
ಆದರೆ ನಿಗಾ ಸಮಿತಿ ಕಾರ್ಯನಿರ್ವಹಿಸುತ್ತಿದ್ದರೂ ಹಾಗೂ ಶಿಫಾರಸುಗಳು ಜಾರಿಯಲ್ಲಿದ್ದರೂ ಪ್ರಶ್ನೆಪತ್ರಿಕೆ ಸೋರಿಕೆ ಹೇಗೆ ನಡೆಯಿತು ಎಂದು ನ್ಯಾಯಾಲಯ ಪದೇ ಪದೇ ಪ್ರಶ್ನಿಸಿತು.