ಕಲಬುರಗಿ, ಮೇ 9 : ಪ್ರಸಕ್ತ ಕ್ಯಾಲೆಂಡರ್ ವರ್ಷದ ಅಂತ್ಯದೊಳಗೆ ಗ್ರಾಮ ಪಂಚಾಯತ್ ಚುನಾವಣೆ ನಡೆಸಿ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಕಲಬುರಗಿಯ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯತ್ ಗಡಿ ಗುರುತಿಸುವ ಕಾರ್ಯಕ್ಕೆ ಆಕ್ಷೇಪಣೆ ಸಲ್ಲಿಸುವ ಅವಧಿ ಮುಗಿದಿದ್ದು, ಶೀಘ್ರದಲ್ಲೇ ಚುನಾವಣೆ ಘೋಷಣೆ ಆಗಲಿದೆ ಎಂದರು.
ಗ್ರಾಮ ಪಂಚಾಯತ್ ಚುನಾವಣೆ ಬಳಿಕ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನೂ ನಡೆಸಲಾಗುವುದು ಎಂದು ತಿಳಿಸಿದರು.
ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಅವರು, ಕುಡಿಯುವ ನೀರಿನ ಕಾಮಗಾರಿಗಳಿಗೆ ಅನುದಾನದ ಕೊರತೆ ಇಲ್ಲ ಎಂದರು. ನೀರಿನ ಸಮಸ್ಯೆ ಎದುರಿಸುತ್ತಿರುವ 21 ಗ್ರಾಮಗಳಲ್ಲಿ ಹೊಸ ಬೋರ್ವೆಲ್ಗಳನ್ನು ಕೊರೆಸಲಾಗಿದೆ. 4 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪ್ರತಿ ಜಿಲ್ಲೆಗೆ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಅಗತ್ಯವಿದ್ದರೆ ಹೆಚ್ಚುವರಿ ಅನುದಾನವೂ ನೀಡಲಾಗುವುದು. ಕೆಕೆಆರ್ಡಿಬಿಯಿಂದ 17.30 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದರು.
ಶಾಸಕರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಸ್ಥಳೀಯ ಅಗತ್ಯಕ್ಕೆ ಅನುಗುಣವಾಗಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
ಬೇಸಿಗೆ ಹಿನ್ನೆಲೆಯಲ್ಲಿ ಜಿಲ್ಲೆಯ ನೀರಿನ ಸಮಸ್ಯೆ ಕುರಿತು ಎಂ.ವೈ. ಪಾಟೀಲ ಹಾಗೂ ಬಿ.ಆರ್. ಪಾಟೀಲ ಅವರೊಂದಿಗೆ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರನ್ನು ಭೇಟಿಯಾಗಿ ಮಹಾರಾಷ್ಟ್ರದಿಂದ ಭೀಮಾ ನದಿಯ ನೀರು ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷೆ ಚಂದ್ರಿಕಾ ಪರಮೇಶ್ವರ ಹಾಗೂ ಭೀಮರಾಯನಗುಡಿ ಕಾಡಾ ಅಧ್ಯಕ್ಷ ಬಾಬು ಹೊನ್ನನಾಯಕ ಉಪಸ್ಥಿತರಿದ್ದರು.