ಹೊಸದಿಲ್ಲಿ, ಮೇ 19 : ಕಳೆದ ವಾರ ನ್ಯಾ. ಸ್ವರಣ ಕಾಂತ ಶರ್ಮ ಅವರು ಸ್ವಯಂಪ್ರೇರಿತವಾಗಿ ದಾಖಲಿಸಿದ್ದ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ಹೈಕೋರ್ಟಿನ ವಿಭಾಗೀಯ ನ್ಯಾಯಪೀಠವು ಮಂಗಳವಾರ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಇನ್ನೂ ಆರು ಮಂದಿ ಆಪ್ ನಾಯಕರಿಗೆ ನೋಟಿಸ್ ಜಾರಿಗೊಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ವಿಷಯಗಳನ್ನು ಪ್ರಸಾರ ಮಾಡಿ ತಮ್ಮ ಹಾಗೂ ನ್ಯಾಯಾಂಗದ ಘನತೆಗೆ ಧಕ್ಕೆ ಉಂಟುಮಾಡಲಾಗಿದೆ ಎಂದು ಆರೋಪಿಸಿರುವ ನ್ಯಾ. ಸ್ವರಣ ಕಾಂತ ಶರ್ಮ ಅವರು, ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಶಾಸಕರಾದ ದುರ್ಗೇಶ್ ಪಾಠಕ್ ಹಾಗೂ ವಿನಯ್ ಮಿಶ್ರಾ, ದಿಲ್ಲಿ ಆಪ್ ಘಟಕದ ಅಧ್ಯಕ್ಷ ಸೌರಭ್ ಭಾರದ್ವಾಜ್, ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಮತ್ತು ಸಾಮಾಜಿಕ ಜಾಲತಾಣ ಅಭಿಯಾನದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ದೇವೇಶ್ ವಿಶ್ವಕರ್ಮ ವಿರುದ್ಧ 68 ಪುಟಗಳ ಆದೇಶ ಹೊರಡಿಸಿದ್ದರು.
ಈ ಏಳು ಮಂದಿಗೆ ಮಂಗಳವಾರ ನೋಟಿಸ್ ಜಾರಿಗೊಳಿಸಿದ ನ್ಯಾ. ನವೀನ್ ಚಾವ್ಲಾ ಮತ್ತು ನ್ಯಾ. ರವೀಂದ್ರ ದುಡೇಜಾ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, ನಿಂದನಾತ್ಮಕ ಸಾಮಾಜಿಕ ಜಾಲತಾಣ ಪೋಸ್ಟ್ಗಳು ಹಾಗೂ ಇತರೆ ಇಲೆಕ್ಟ್ರಾನಿಕ್ ದಾಖಲೆಗಳನ್ನು ನ್ಯಾಯಾಲಯದ ದಾಖಲಾತಿಗಾಗಿ ಸಂರಕ್ಷಿಸಿಡುವಂತೆ ರಿಜಿಸ್ಟ್ರಿಗೆ ಸೂಚನೆ ನೀಡಿತು.
ಈ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ನೆರವಾಗಲು ಅಮಿಕಸ್ ಕ್ಯೂರಿಯನ್ನು ನೇಮಿಸಲಾಗುವುದು ಎಂದೂ ನ್ಯಾಯಪೀಠ ತಿಳಿಸಿದೆ.