ಹೊಸದಿಲ್ಲಿ, ಜೂ. 12 : ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ–2ರ ತೀರ್ಪನ್ನು ತಕ್ಷಣ ಗೆಜೆಟ್ ಅಧಿಸೂಚನೆ ಮೂಲಕ ಜಾರಿಗೆ ತರಬೇಕು ಹಾಗೂ ಮಹದಾಯಿ ಕಣಿವೆಯ ಕಳಸಾ–ಬಂಡೂರಿ ನಾಲಾ ಯೋಜನೆಗಳಿಗೆ ಬಾಕಿ ಇರುವ ಅರಣ್ಯ ಮತ್ತು ವನ್ಯಜೀವಿ ಅನುಮತಿಗಳನ್ನು ಶೀಘ್ರ ಮಂಜೂರು ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಬಳಿಕ ಜಲಶಕ್ತಿ ಸಚಿವರನ್ನು ಭೇಟಿಯಾದ ಅವರು, ರಾಜ್ಯದ ಪ್ರಮುಖ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳಿಗೆ ಅಗತ್ಯ ಸಹಕಾರ ನೀಡುವಂತೆ ಕೋರಿದರು.
ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದ ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣ–2ರ ತೀರ್ಪು ಪ್ರಕಟವಾಗಿ ಒಂದು ದಶಕಕ್ಕೂ ಹೆಚ್ಚು ಕಾಲ ಕಳೆದಿದ್ದರೂ ಕೇಂದ್ರ ಸರಕಾರ ಇನ್ನೂ ಗೆಜೆಟ್ ಅಧಿಸೂಚನೆ ಹೊರಡಿಸಿಲ್ಲ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ–3ರ ಅನುಷ್ಠಾನಕ್ಕೆ ರಾಜ್ಯ ಈಗಾಗಲೇ ಭಾರಿ ಪ್ರಮಾಣದ ಹೂಡಿಕೆ ಮಾಡಿದ್ದು, ಯೋಜನೆ ಮುಂದುವರಿಸಲು ಹಾಗೂ ರಾಜ್ಯಕ್ಕೆ ಹಂಚಿಕೆಯಾದ ನೀರನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಕೇಂದ್ರದ ಬೆಂಬಲ ಅಗತ್ಯವಾಗಿದೆ ಎಂದು ಅವರು ತಿಳಿಸಿದರು.
ಮಹದಾಯಿ ಕಣಿವೆಯ ಕಳಸಾ ಮತ್ತು ಬಂಡೂರಿ ನಾಲಾ ಯೋಜನೆಗಳಿಗೆ 2022ರಲ್ಲೇ ಕೇಂದ್ರ ಜಲ ಆಯೋಗ ಹಾಗೂ ಜಲಶಕ್ತಿ ಸಚಿವಾಲಯದ ಅನುಮೋದನೆ ದೊರೆತಿದೆ. ಆದರೂ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದಿಂದ ಅರಣ್ಯ ಹಾಗೂ ವನ್ಯಜೀವಿ ಅನುಮತಿ ಇನ್ನೂ ಸಿಕ್ಕಿಲ್ಲ. ಇದರಿಂದ ಹುಬ್ಬಳ್ಳಿ–ಧಾರವಾಡ ಪ್ರದೇಶದ ಕುಡಿಯುವ ನೀರಿನ ಅಗತ್ಯಗಳಿಗೆ ಹಂಚಿಕೆಯಾದ ನೀರನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಾಕಿ ಇರುವ ಎಲ್ಲ ಅನುಮತಿಗಳನ್ನು ತ್ವರಿತವಾಗಿ ನೀಡಬೇಕು ಎಂದು ಒತ್ತಾಯಿಸಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಮ ಕೋರ್ಟ ಈಗಾಗಲೇ ತಮಿಳುನಾಡಿನ ವಿವಿಧ ಅರ್ಜಿಗಳನ್ನು ವಜಾಗೊಳಿಸಿದ್ದು, ಯೋಜನೆಯ ಕುರಿತು ತೀರ್ಮಾನ ಕೈಗೊಳ್ಳುವ ಜವಾಬ್ದಾರಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗ ಮೇಲೆಯೇ ಇದೆ. ಹೀಗಾಗಿ ಯೋಜನೆಗೆ ಶೀಘ್ರ ಅನುಮೋದನೆ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಭದ್ರಾ ಮೇಲ್ದಂಡೆ ಯೋಜನೆಗೆ 2023–24ರ ಕೇಂದ್ರ ಬಜೆಟಿನಲ್ಲಿ ಘೋಷಿಸಲಾಗಿದ್ದ 5,300 ಕೋಟಿ ರೂಪಾಯಿ ನೆರವನ್ನು ಇನ್ನೂ ಬಿಡುಗಡೆ ಮಾಡಿಲ್ಲ. ಯೋಜನೆಯ ಪರಿಷ್ಕೃತ ವೆಚ್ಚ 21,167.93 ಕೋಟಿ ರೂಪಾಯಿಗೆ ಏರಿಕೆಯಾಗಿದ್ದು, ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರದ ನೆರವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಕೋರಿದರು.
ಇದೇ ವೇಳೆ ಸೊಂತಿ ಏತ ನೀರಾವರಿ ಯೋಜನೆ, ಇಂಡಿ ಶಾಖಾ ಕಾಲುವೆ, ಮಲಪ್ರಭಾ ಕಾಲುವೆ ಬಾಕಿ ಕಾಮಗಾರಿ, ಘಟಪ್ರಭಾ ಬಲದಂಡೆ ಕಾಲುವೆ ಮತ್ತು ಚಿಕ್ಕೋಡಿ ಶಾಖಾ ಕಾಲುವೆ, ತುಂಗಭದ್ರಾ ಎಡದಂಡೆ ಕಾಲುವೆ ಕಾಮಗಾರಿ ಹಾಗೂ ಬೆಣ್ಣಿಹಳ್ಳ ಪ್ರವಾಹ ನಿಯಂತ್ರಣ ಯೋಜನೆಗಳಿಗೆ ಕೇಂದ್ರದ ಆರ್ಥಿಕ ನೆರವು ನೀಡುವಂತೆಯೂ ಮನವಿ ಸಲ್ಲಿಸಿದರು.
ದೇಶದ ನದಿ ಜೋಡಣೆ ಯೋಜನೆಗಳಡಿ ಕರ್ನಾಟಕಕ್ಕೆ ಸಮಾನತೆ ಹಾಗೂ ನ್ಯಾಯಯುತ ಹಂಚಿಕೆ ತತ್ವದ ಆಧಾರದಲ್ಲಿ ನೀರಿನ ಪಾಲು ನೀಡಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದರು.