ಹೊಸದಿಲ್ಲಿ, ಜುಲೈ 24: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡುವವರೆಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದ ಯಾವುದೇ ಚರ್ಚೆಯಲ್ಲಿ ಭಾಗವಹಿಸುವುದಿಲ್ಲ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.
ಸಂಸತ್ ಭವನದ ಸಂಕೀರ್ಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಮ್ಮ ಹೆಸರನ್ನು ಪ್ರಸ್ತಾಪಿಸಿದ ನಂತರ ಉತ್ತರಿಸಲು ತಾವು ಎದ್ದು ನಿಂತರೂ ಮಾತನಾಡಲು ಅವಕಾಶ ನೀಡಲಿಲ್ಲ. ತಮ್ಮ ಮೈಕ್ನ್ನೂ ಸ್ಥಗಿತಗೊಳಿಸಲಾಯಿತು ಎಂದು ಆರೋಪಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆ, ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಬಲಪ್ರಯೋಗದ ವಿಚಾರದಲ್ಲಿ ವಿರೋಧ ಪಕ್ಷದ ನಿಲುವನ್ನು ಸದನದಲ್ಲಿ ಸ್ಪಷ್ಟಪಡಿಸಲು ಬಯಸಿದ್ದೆ. ಆದರೆ ಸರ್ಕಾರ ಅದಕ್ಕೂ ಅವಕಾಶ ನೀಡಲಿಲ್ಲ ಎಂದು ಅವರು ದೂರಿದರು.
ವಿದ್ಯಾರ್ಥಿಗಳ ಪರವಾಗಿ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿರುವುದಾಗಿ ತಿಳಿಸಿದ ರಾಹುಲ್ ಗಾಂಧಿ, ಪ್ರಶ್ನೆಪತ್ರಿಕೆ ಸೋರಿಕೆಗೆ ರಾಜಕೀಯ ಮತ್ತು ಆಡಳಿತಾತ್ಮಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಹಾಗೂ ಪೆಲೆಟ್ ಗನ್ ಬಳಕೆ ನಡೆಸಿದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದ ಬಲಪ್ರಯೋಗಕ್ಕೆ ಪ್ರಧಾನಿ ನರೇಂದ್ರ ಮೋದಿ ದೇಶದ ವಿದ್ಯಾರ್ಥಿಗಳಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಅವರು ಒತ್ತಾಯಿಸಿದರು.
ಈ ಮೂರು ಪ್ರಮುಖ ಬೇಡಿಕೆಗಳು ಈಡೇರುವವರೆಗೆ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ವಿಷಯದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ವಿರೋಧ ಪಕ್ಷ ಸಮ್ಮತಿಸುವುದಿಲ್ಲ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.