ಹೊಸದಿಲ್ಲಿ, ಮೇ 14 : ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಸಂಘರ್ಷ ಮತ್ತು ಜಾಗತಿಕ ಇಂಧನ ಪೂರೈಕೆಯ ಮೇಲಿನ ಪರಿಣಾಮ ದೀರ್ಘಕಾಲ ಮುಂದುವರಿದರೆ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಹೆಚ್ಚಿಸುವ ಅನಿವಾರ್ಯತೆ ಎದುರಾಗಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೋತ್ರಾ ಎಚ್ಚರಿಕೆ ನೀಡಿದ್ದಾರೆ.
ಸ್ವಿಟ್ಜರ್ಲ್ಯಾಂಡ್ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಭಾರತವು ಇಂಧನ ಹಾಗೂ ರಸಗೊಬ್ಬರಗಳ ಆಮದುಗಳ ಮೇಲೆ ಬಹಳ ಪ್ರಮಾಣದಲ್ಲಿ ಅವಲಂಬಿತವಾಗಿದ್ದು, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ಮತ್ತು ಹಾರ್ಮುಝ್ ಜಲಸಂಧಿಯ ದಿಗ್ಬಂಧನದಿಂದ ಜಾಗತಿಕ ತೈಲ ಮತ್ತು ಅನಿಲ ಪೂರೈಕೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ ಎಂದು ಹೇಳಿದರು.
ಈ ಬೆಳವಣಿಗೆಗಳಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಅದರ ಪರಿಣಾಮ ಭಾರತ ಸೇರಿದಂತೆ ಅನೇಕ ದೇಶಗಳ ಆರ್ಥಿಕತೆಯ ಮೇಲೂ ಕಾಣಿಸಿಕೊಳ್ಳತೊಡಗಿದೆ. ಪ್ರಸ್ತುತ ಜಾಗತಿಕ ಮಟ್ಟದಲ್ಲಿ ಉಂಟಾಗುತ್ತಿರುವ ಅಡಚಣೆಗಳು ಭಾರತಕ್ಕೂ ಪರಿಣಾಮ ಬೀರುತ್ತಿವೆ ಎಂದು ಅವರು ತಿಳಿಸಿದ್ದಾರೆ.
ಭಾರತ ಸರಕಾರ ಹಣಕಾಸು ಶಿಸ್ತು ಪಾಲಿಸಿಕೊಂಡು ಆರ್ಥಿಕ ಬಲವರ್ಧನೆಯ ದಾರಿಯಲ್ಲಿ ಸಾಗುತ್ತಿದೆ. ಆದಾಗ್ಯೂ ಜಾಗತಿಕ ಪರಿಸ್ಥಿತಿ ಮತ್ತಷ್ಟು ಹದಗೆಟ್ಟು ಇಂಧನ ಪೂರೈಕೆಯಲ್ಲಿ ದೀರ್ಘಕಾಲದ ವ್ಯತ್ಯಯ ಉಂಟಾದರೆ, ಸರಕಾರ ಕೆಲವು ಬೆಲೆ ಏರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗಬಹುದು ಎಂದು ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ.
ಪಶ್ಚಿಮ ಏಷ್ಯಾದ ಸಂಘರ್ಷದ ಪರಿಣಾಮವಾಗಿ ಹಾರ್ಮುಝ್ ಜಲಸಂಧಿಯ ಮೂಲಕ ಸಾಗುವ ತೈಲ ಮತ್ತು ಅನಿಲ ಸಾಗಣೆಯಲ್ಲಿ ಅಡಚಣೆ ಉಂಟಾಗಿದ್ದು, ಇದರಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚಿದೆ. ಜಾಗತಿಕ ಸರಕು ಸಾಗಣೆ ಮತ್ತು ಇಂಧನ ಪೂರೈಕೆ ವ್ಯವಸ್ಥೆಯ ಮೇಲೆ ಇದರ ಪರಿಣಾಮ ಗಂಭೀರವಾಗಿರಬಹುದು ಎಂದು ಅವರು ಎಚ್ಚರಿಸಿದರು.
ಭಾರತದಂತಹ ಆಮದು ಆಧಾರಿತ ದೇಶಗಳಿಗೆ ಇಂಧನ ದರ ಏರಿಕೆ ನೇರವಾಗಿ ದುಬಾರಿ ಜೀವನ, ಸಾರಿಗೆ ವೆಚ್ಚ ಹಾಗೂ ಕೈಗಾರಿಕಾ ಉತ್ಪಾದನಾ ವೆಚ್ಚಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.