ಧಾರವಾಡ, ಜುಲೈ 23: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸದ ಎದುರು ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದೆ ಎಂದು ಆರೋಪಿಸಿ, ಅದನ್ನು ಖಂಡಿಸಿ ಬಿಜೆಪಿ ಹುಬ್ಬಳ್ಳಿ–ಧಾರವಾಡ ಮಹಾನಗರ ಜಿಲ್ಲಾ ಘಟಕದ ವತಿಯಿಂದ ಗುರುವಾರ ಧಾರವಾಡದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.
ಜಿಲ್ಲಾ ಬಿಜೆಪಿ ಕಚೇರಿಯಿಂದ ಆರಂಭವಾದ ಮೆರವಣಿಗೆಯಲ್ಲಿ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಹಕ್ಕಾಗಿದ್ದರೂ, ಹಿಂಸಾಚಾರ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಉಂಟುಮಾಡುವುದು ಖಂಡನೀಯ ಎಂದು ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ ಹೇಳಿದರು.
ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹಿಂಸೆಯ ಮೂಲಕ ವ್ಯಕ್ತಪಡಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಶಾಂತಿಯುತ ಹಾಗೂ ಸಂವಿಧಾನಬದ್ಧ ಹೋರಾಟವೇ ಪ್ರಜಾಪ್ರಭುತ್ವದ ಮೌಲ್ಯ ಎಂದು ಮಾಜಿ ಮಹಾಪೌರ ಈರೇಶ ಅಂಚಟಗೇರಿ ಹೇಳಿದರು.
ಪ್ರತಿಭಟನೆಯಲ್ಲಿ ಜಯತೀರ್ಥ ಕಟ್ಟಿ, ಸೀಮಾ ಮಸೂತಿ, ನಿಂಗಪ್ಪ ಸುತಗಟ್ಟಿ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.