ಬೆಂಗಳೂರು, ಮೇ 20 : ಕಳೆದ ಒಂದು ವಾರದಿಂದ ರಾಜ್ಯದ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ಒಂದು ವಾರ ಕಾಲ ಮಳೆ ಮುಂದುವರಿಯುವ ಮುನ್ಸೂಚನೆಗಳಿವೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಈ ಬಾರಿ ಅವಧಿಗೂ ಮುನ್ನ ಮುಂಗಾರು ಆಗಮಿಸುವ ಲಕ್ಷಣಗಳು ಕಂಡುಬರುತ್ತಿದ್ದು, ಅದಕ್ಕೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಇದರಿಂದ ಪೂರ್ವ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಹಲವೆಡೆ ಮಳೆಯಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಒಳನಾಡಿನಲ್ಲಿ ನಿರ್ಮಾಣವಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಮೇ 23ರವರೆಗೆ ಯೆಲ್ಲೊ ಅಲರ್ಟ್ ಮುಂದುವರಿಯಲಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಒಣ ಹವೆ ಮುಂದುವರಿದರೂ ಮಧ್ಯಾಹ್ನದ ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದೆ. ಮಧ್ಯಾಹ್ನ ಹಾಗೂ ರಾತ್ರಿ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಪೂರ್ವ ಮುಂಗಾರು ಮಳೆಯ ಪರಿಣಾಮ ರಾಜ್ಯದ ಹಲವೆಡೆ ಮಿಂಚು, ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಈ ಬಾರಿ ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗಿದೆ. ಮಾರ್ಚ್ ತಿಂಗಳು ಹೊರತುಪಡಿಸಿದರೆ ಜನವರಿಯಿಂದ ಇದುವರೆಗೆ ರಾಜ್ಯದಲ್ಲಿ ವಾಡಿಕೆ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗಿದೆ. ಏಪ್ರಿಲ್ ಬಳಿಕ ಮೇ ತಿಂಗಳಲ್ಲಿಯೂ ಹಲವೆಡೆ ಮಳೆ ಕೊರತೆ ಕಂಡು ಬಂದಿದೆ.
ಕಳೆದ ಒಂದು ವಾರದಿಂದ ಮಳೆ ಪ್ರಮಾಣ ಹೆಚ್ಚಾದರೂ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿಲ್ಲ. ಹಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದೆ. ಆದರೆ, ಸದ್ಯ ಮಳೆಗೆ ಪೂರಕ ವಾತಾವರಣ ಇರುವುದರಿಂದ ಈ ವಾರ ಹೆಚ್ಚು ಮಳೆಯಾಗಿ ಮಳೆ ಕೊರತೆ ನೀಗುವ ಸಾಧ್ಯತೆಗಳಿವೆ.