ಅಹ್ಮದಾಬಾದ, ಜೂ. 1 : ಐಪಿಎಲ್ ಫೈನಲ್ನಲ್ಲಿ ಸೋಲು ಕಂಡ ಬಳಿಕ ಹೋಟೆಲ್ಗೆ ಮರಳುತ್ತಿದ್ದ ವೇಳೆ ಗುಜರಾತ್ ಟೈಟಾನ್ಸ್ ಆಟಗಾರರು ಹಾಗೂ ಸಹಾಯಕ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಘಟನೆ ವರದಿಯಾಗಿದೆ.
ಮಾಧ್ಯಮ ವರದಿಗಳ ಪ್ರಕಾರ, ಬಸ್ನಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಒಳಭಾಗದಲ್ಲಿ ಹೊಗೆ ಆವರಿಸಿತ್ತು. ಇದರಿಂದ ಆಟಗಾರರು ಹಾಗೂ ಸಿಬ್ಬಂದಿಯ ಸುರಕ್ಷತೆ ಕುರಿತು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿಯನ್ನು ಗಮನಿಸಿದ ಸಿಬ್ಬಂದಿ ತಕ್ಷಣವೇ ಎಲ್ಲ ಆಟಗಾರರನ್ನು ಸುರಕ್ಷಿತವಾಗಿ ಬಸ್ನಿಂದ ಕೆಳಗಿಳಿಸಿದ್ದಾರೆ.
ಬಳಿಕ ತಂಡದ ಸದಸ್ಯರು ಸುಮಾರು ಒಂದು ಗಂಟೆಯ ಕಾಲ ರಸ್ತೆ ಬದಿಯಲ್ಲೇ ಕಾಯಬೇಕಾದ ಪರಿಸ್ಥಿತಿ ಎದುರಾಯಿತು. ಹೋಟೆಲ್ಗೆ ಕರೆದೊಯ್ಯಲು ಮತ್ತೊಂದು ಬಸ್ ವ್ಯವಸ್ಥೆ ಮಾಡಿದ ನಂತರ ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವರದಿಗಳು ತಿಳಿಸಿವೆ. ಶಾರ್ಟ್ ಸರ್ಕ್ಯೂಟ್ಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದಕ್ಕೂ ಮುನ್ನ ರವಿವಾರ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ ತಂಡ 5 ವಿಕೆಟ್ಗಳ ಸೋಲು ಅನುಭವಿಸಿತ್ತು. ಪ್ರಶಸ್ತಿ ಗೆಲ್ಲುವ ಕನಸು ಭಗ್ನಗೊಂಡ ಬೆನ್ನಲ್ಲೇ ತಂಡಕ್ಕೆ ಈ ಅನಿರೀಕ್ಷಿತ ಘಟನೆ ಮತ್ತೊಂದು ಆತಂಕವನ್ನುಂಟು ಮಾಡಿದೆ.