ಬೆಂಗಳೂರು, ಮೇ 28 : ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಾಗಿದ್ದು, ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮೊದಲಿನಿಂದಲೂ ಹೇಳಿದ್ದೆ. ಅದರಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಲೋಕಭವನದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಭಾವುಕರಾದರು.
ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದಿರುವ ಕಾರಣ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ್ದೇನೆ. ರಾಜ್ಯಪಾಲರು ಮರಳಿದ ಬಳಿಕ ರಾಜೀನಾಮೆ ಅಂಗೀಕರಿಸುವ ವಿಶ್ವಾಸವಿದೆ ಎಂದು ಹೇಳಿದರು.
ಮುಂದಿನ ಮುಖ್ಯಮಂತ್ರಿ ಅವರಿಗೆ ಅವಕಾಶ ಕಲ್ಪಿಸುವುದು ರಾಜ್ಯಪಾಲರ ಜವಾಬ್ದಾರಿ. ಕಾಂಗ್ರೆಸ್ ಪಕ್ಷ 135 ಸ್ಥಾನಗಳನ್ನು ಗೆದ್ದಿದ್ದು, ಇಬ್ಬರು ಪಕ್ಷೇತರ ಶಾಸಕರು ಬೆಂಬಲ ನೀಡಿದ್ದಾರೆ. ಸರ್ಕಾರಕ್ಕೆ ಸ್ಪಷ್ಟ ಬಹುಮತವಿದೆ ಎಂದು ತಿಳಿಸಿದರು.
ತಮ್ಮ ರಾಜಕೀಯ ಜೀವನವನ್ನು ಸ್ಮರಿಸಿದ ಸಿದ್ದರಾಮಯ್ಯ, ಸಂವಿಧಾನವೇ ನಮ್ಮ ಪರಮ ಧ್ಯೇಯ. ಮತದಾರರೇ ನಮ್ಮ ಅಭಿಮಾನಿ ದೇವರುಗಳು. ರಾಜ್ಯದ 7 ಕೋಟಿ ಜನರ ಸೇವೆ ಮಾಡುವ ಅವಕಾಶ ದೊರೆತಿತ್ತು ಎಂದರು.
ತಮ್ಮ ರಾಜಕೀಯ ಪಯಣದಲ್ಲಿ ಅವಕಾಶ ನೀಡಿದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ಸಲ್ಲಿಸಿದರು.
2006ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಪಕ್ಷದ ಕಾರ್ಯಕರ್ತರು, ಮುಖಂಡರು, ಶಾಸಕರು ಹಾಗೂ ಸಂಸದರು ಅಪಾರ ಪ್ರೀತಿ ಮತ್ತು ಬೆಂಬಲ ನೀಡಿದ್ದಾರೆ. ಅವರಿಗೆ ನಾನು ಚಿರಋಣಿ ಎಂದು ಹೇಳಿದರು.
2013ರಿಂದ 2018ರವರೆಗೆ ಹಾಗೂ 2023ರಿಂದ 2026ರವರೆಗೆ ತಮ್ಮೊಂದಿಗೆ ಕೆಲಸ ಮಾಡಿದ ಸಂಪುಟದ ಎಲ್ಲ ಸಹೋದ್ಯೋಗಿಗಳಿಗೆ ಧನ್ಯವಾದ ಅರ್ಪಿಸಿದರು.
ಈ ವೇಳೆ ಭಾವುಕರಾದ ಸಿದ್ದರಾಮಯ್ಯ, ನಾನು ಹಳ್ಳಿಯಿಂದ ಬಂದ ವ್ಯಕ್ತಿ. ಶಾಸಕ, ಸಚಿವ ಅಥವಾ ಮುಖ್ಯಮಂತ್ರಿ ಆಗುವ ಕನಸನ್ನೂ ಕಂಡಿರಲಿಲ್ಲ. ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದೆ. ನಮ್ಮ ಕುಟುಂಬದಲ್ಲಿ ಯಾರೂ ರಾಜಕಾರಣದಲ್ಲಿ ಇರಲಿಲ್ಲ ಎಂದು ಹೇಳಿದರು.