LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಲೋಕಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ

ಬೆಂಗಳೂರು, ಮೇ 28 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಮಧ್ಯಾಹ್ನ ಲೋಕಭವನಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ ಅವರಿಗೆ ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಅವರು ನೇರವಾಗಿ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ಹಸ್ತಾಂತರಿಸಿದರು ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಬೆಳಿಗ್ಗೆ ನಡೆದ ಮಹತ್ವದ ಉಪಾಹಾರ ಸಭೆಯ ಬಳಿಕ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲಕ್ಕೆ ಕಾರಣವಾಗಿದ್ದವು. ಸಭೆಯಲ್ಲಿ ಸಚಿವರು ಹಾಗೂ ಆಪ್ತರು ಭಾಗವಹಿಸಿದ್ದರೆಂದು ಹೇಳಲಾಗಿದ್ದು, ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ ಲೋಕಭವನದತ್ತ ಪ್ರಯಾಣ ಬೆಳೆಸಿದರು.

ಸಚಿವ ಬೈರತಿ ಸುರೇಶ್ ಚಾಲನೆ ಮಾಡುತ್ತಿದ್ದ ಕಪ್ಪು ಬಣ್ಣದ ಕಾರಿನಲ್ಲಿ ಮುಖ್ಯಮಂತ್ರಿ ಅವರು ಲೋಕಭವನಕ್ಕೆ ತೆರಳಿದರು. ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ಲೋಕಭವನ ಸುತ್ತಮುತ್ತ ಭಾರೀ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಭದ್ರತಾ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದ್ದು, ಪ್ರವೇಶ ದ್ವಾರಗಳಲ್ಲಿ ತಪಾಸಣೆ ಕಟ್ಟು ನಿಟ್ಟಾಗಿತ್ತು.

ಮುಖ್ಯಮಂತ್ರಿ ಲೋಕಭವನಕ್ಕೆ ಆಗಮಿಸಿದ ವಿಚಾರ ತಿಳಿಯುತ್ತಿದ್ದಂತೆಯೇ ಮಾಧ್ಯಮ ಪ್ರತಿನಿಧಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಅಲ್ಲಿಗೆ ಜಮಾಯಿಸಿದರು. ಕೆಲಕಾಲ ಲೋಕಭವನದ ಆವರಣದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಈ ನಡುವೆ ಮುಖ್ಯಮಂತ್ರಿ ಸಲ್ಲಿಸಿದ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗಳು ಸ್ವೀಕರಿಸಲು ನಿರಾಕರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದ ಕಾರಣ ಹಾಗೂ ಕೆಲವು ಆಡಳಿತಾತ್ಮಕ ಕಾರಣಗಳನ್ನು ಉಲ್ಲೇಖಿಸಿ ಪತ್ರವನ್ನು ಸ್ವೀಕರಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ರಾಜಕೀಯ ವಲಯದಲ್ಲಿ ಈ ಬೆಳವಣಿಗೆ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ರಾಜಕೀಯ ನಡೆಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ. ಕಾಂಗ್ರೆಸ್ ವಲಯದಲ್ಲೂ ತೀವ್ರ ಚಟುವಟಿಕೆಗಳು ಆರಂಭವಾಗಿವೆ ಎಂದು ತಿಳಿದು ಬಂದಿದೆ

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST