ಬೆಂಗಳೂರು, ಮೇ 30 : ಸಿದ್ದರಾಮಯ್ಯರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಮೂಲಕ ಕೋಮುವಾದಿ ಶಕ್ತಿಗಳಿಂದ ರಾಜ್ಯವನ್ನು ರಕ್ಷಿಸುವ ಅಗತ್ಯವಿದೆ. ಸಿದ್ದರಾಮನ ಹುಂಡಿಯಿಂದ ವಿಧಾನಸೌಧದವರೆಗೆ ಅವರ ರಾಜಕೀಯ ಜೀವನ ಮುಂದಿನ ಪೀಳಿಗೆಗೂ ಸ್ಫೂರ್ತಿಯ ಚಿಲುಮೆಯಾಗಿರಲಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಶುಕ್ರವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಕರ್ನಾಟಕದ ಮುಖ್ಯಮಂತ್ರಿಯಾಗಿ ಸುದೀರ್ಘ ಅವಧಿ ಸೇವೆ ಸಲ್ಲಿಸಿದ ದಾಖಲೆ ಹೊಂದಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಜನಪರ ಯೋಜನೆಗಳು, ಸೈದ್ಧಾಂತಿಕ ನಿಲುವುಗಳು ಹಾಗೂ ರಾಜಕೀಯ ಹೋರಾಟಗಳ ಮೂಲಕ ರಾಜ್ಯದ ಜನರ ಅಪಾರ ಪ್ರೀತಿ ಗಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತಮ್ಮ ರಾಜಕೀಯ ಜೀವನದ ಆರಂಭದಿಂದಲೂ ಸಂವಿಧಾನದ ಮೌಲ್ಯಗಳು ಮತ್ತು ಜಾತ್ಯತೀತ ತತ್ವಗಳಿಗೆ ಬದ್ಧರಾಗಿದ್ದ ಸಿದ್ದರಾಮಯ್ಯ ಅವರು ಪ್ರಬುದ್ಧ ರಾಜಕಾರಣಕ್ಕೆ ಹೊಸ ದಿಕ್ಕು ತೋರಿಸಿದ್ದಾರೆ. ನಮ್ಮ ತಲೆಮಾರಿನ ರಾಜಕಾರಣಿಗಳು ಹಾಗೂ ಯುವ ನಾಯಕರಿಗೆ ಅವರು ಸ್ಫೂರ್ತಿಯಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ತಮ್ಮ ವೈಯಕ್ತಿಕ ರಾಜಕೀಯ ಬೆಳವಣಿಗೆಯಲ್ಲಿ ಸಿದ್ದರಾಮಯ್ಯರ ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ಪ್ರವಾಸೋದ್ಯಮದಂತಹ ಪ್ರಮುಖ ಖಾತೆಗಳ ಜವಾಬ್ದಾರಿ ನಿರ್ವಹಿಸುವ ವೇಳೆ ಸಂಪುಟದಲ್ಲಿನ ಕಿರಿಯ ಸಚಿವ ಎಂಬ ಹಿಂಜರಿಕೆ ಉಂಟಾಗದಂತೆ ಆತ್ಮವಿಶ್ವಾಸ ತುಂಬಿದ್ದರು ಎಂದು ಅವರು ಸ್ಮರಿಸಿದ್ದಾರೆ.
ಜನಪರ ಯೋಜನೆಗಳನ್ನು ರೂಪಿಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರು. ಪ್ರಸಕ್ತ ಅವಧಿಯಲ್ಲಿಯೂ ಎರಡು ಪ್ರಮುಖ ಖಾತೆಗಳ ಜವಾಬ್ದಾರಿ ನಿರ್ವಹಿಸುವ ಸಂದರ್ಭದಲ್ಲಿ ಅವರ ಮಾರ್ಗದರ್ಶನ ಅತ್ಯಂತ ಮೌಲ್ಯಯುತವಾಗಿತ್ತು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯರ ನಾಯಕತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಮುಕ್ತ ಆಡಳಿತ ಹಾಗೂ ಅಭಿವೃದ್ಧಿಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಆರ್ಥಿಕ ಶಕ್ತಿ ತುಂಬಿವೆ. ಇಂತಹ ಅನುಭವಿ ನಾಯಕರ ಸಂಪುಟದಲ್ಲಿ ಸಚಿವನಾಗಿ ಕಾರ್ಯನಿರ್ವಹಿಸಿರುವುದು ಹೆಮ್ಮೆಯ ಸಂಗತಿ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿರುವುದು ಭಾವನಾತ್ಮಕ ಸಂಗತಿಯಾಗಿದೆ. ತಮ್ಮ ಮೌಲ್ಯಗಳಿಗೆ ಬದ್ಧರಾಗಿ ಸಮಾಜಮುಖಿ ಕಾರ್ಯಗಳ ಮೂಲಕ ಜನರ ಹತ್ತಿರವಾಗಿದ್ದ ಅವರ ಕೊಡುಗೆಗಳನ್ನು ಸದಾ ನೆನಪಿಸಿಕೊಳ್ಳುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.