ಬೆಂಗಳೂರು, ಸೆ 3 : (ಸಮದರ್ಶಿ ಸುದ್ದಿ) - ರಾಜ್ಯದ ಗಂಭೀರ ಬರ ಪರಿಸ್ಥಿತಿ ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಸಮಗ್ರ ಚರ್ಚೆ ನಡೆಸಲು ಸೆ.21, 23 ಮತ್ತು 24ರಂದು ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.
ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಈ ವಿಷಯವನ್ನು ತಿಳಿಸಿದರು.
ರಾಜ್ಯದಲ್ಲಿ ತೀವ್ರ ಬರಗಾಲ ಎದುರಾಗಿದ್ದು, ಆರ್ಥಿಕತೆ, ಆಹಾರ ಉತ್ಪಾದನೆ ಹಾಗೂ ರೈತ ಸಮುದಾಯದ ಮೇಲೆ ಪರಿಣಾಮ ಬೀರಿದೆ. ರೈತರ ಸಮಸ್ಯೆಗಳು ಮತ್ತು ಬರ ಪರಿಸ್ಥಿತಿಯ ಕುರಿತು ವಿಧಾನಮಂಡಲದಲ್ಲಿ ವಿಸ್ತೃತ ಚರ್ಚೆ ನಡೆಸುವ ಅಗತ್ಯವಿರುವ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಪರಮೇಶ್ವರ್ ಹೇಳಿದರು.
ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈಗಾಗಲೇ ಹಲವು ಬಾರಿ ತಿರಸ್ಕರಿಸಿದ್ದು, ಈ ವಿಷಯದ ಬಗ್ಗೆಯೂ ಅಧಿವೇಶನದಲ್ಲಿ ಸಮಗ್ರವಾಗಿ ಚರ್ಚಿಸಲಾಗುವುದು ಎಂದರು.
ಬರಗಾಲದ ಹಿನ್ನೆಲೆಯಲ್ಲಿ ಜಾನುವಾರುಗಳ ಮೇವು ಖರೀದಿಗಾಗಿ ತಕ್ಷಣವೇ ₹25 ಕೋಟಿ ಅನುದಾನ ಬಿಡುಗಡೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ನೈಸ್ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ
ನೈಸ್ ಕಾರಿಡಾರ್ ಯೋಜನೆಗಾಗಿ ಭೂಮಿ ನೀಡಿ ಪರಿಹಾರದಿಂದ ವಂಚಿತರಾಗಿರುವ ರೈತರ ಬಹುದಿನಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಸಾಧಕ-ಬಾಧಕಗಳನ್ನು ಪರಿಶೀಲಿಸಿ, ಮೂಲ ಒಪ್ಪಂದದ ಪ್ರಕಾರ ಒಂದು ಎಕರೆ ಒಳಗಿನ ಭೂಮಾಲೀಕರಿಗೆ 30x40 ಅಡಿ ಹಾಗೂ ಒಂದು ಎಕರೆಗಿಂತ ಹೆಚ್ಚು ಭೂಮಿ ಕಳೆದುಕೊಂಡವರಿಗೆ 60x40 ಅಡಿ ನಿವೇಶನ ನೀಡಲು ತೀರ್ಮಾನಿಸಲಾಗಿದೆ.
ಒಟ್ಟು 1,453 ರೈತರಿಗೆ ನಾಲ್ಕು ಕಡೆಗಳಲ್ಲಿ ನಿವೇಶನ ನೀಡಲಾಗುತ್ತದೆ. ನೈಸ್ ಸಂಸ್ಥೆಯಿಂದ ಈಗಾಗಲೇ 574 ನಿವೇಶನಗಳು ಲಭ್ಯವಿದ್ದು, ಉಳಿದ ರೈತರಿಗೆ ವರಾಹಸಂದ್ರ, ಶ್ರೀಕಂಠಪುರ ಹಾಗೂ ಮಾದಾವರ ವ್ಯಾಪ್ತಿಯಲ್ಲಿ ಲಭ್ಯವಿರುವ ಭೂಮಿಯಲ್ಲಿ ಹೊಸದಾಗಿ ನಿವೇಶನ ನಿರ್ಮಿಸಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಹೂಡಿಕೆ, ವಿದ್ಯುತ್ ಬಸ್ಗಳಿಗೆ ಒತ್ತು
ರಾಜ್ಯಕ್ಕೆ ಹೊಸ ಜಾಗತಿಕ ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಅನಿವಾಸಿ ಭಾರತೀಯರ ವ್ಯವಹಾರ ಮತ್ತು ಕಲ್ಯಾಣ ನೀತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿದೇಶಿ ಬಂಡವಾಳ ಹೂಡಿಕೆ, ಸಂಶೋಧನೆ, ಅಭಿವೃದ್ಧಿ ಮತ್ತು ನಾವೀನ್ಯತೆ ಕ್ಷೇತ್ರಗಳ ಪ್ರಸ್ತಾವನೆಗಳನ್ನು ತ್ವರಿತವಾಗಿ ಸ್ವೀಕರಿಸುವುದು, ವಿದೇಶಿ ನಿಯೋಗಗಳ ಸತ್ಕಾರ ಹಾಗೂ ಅನಿವಾಸಿ ಭಾರತೀಯರ ಕಾರ್ಡ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಈ ಉದ್ದೇಶಕ್ಕಾಗಿ ರಾಜ್ಯ ಸೌಲಭ್ಯ ಮಂಡಳಿ ರಚಿಸಲು ನಿರ್ಧರಿಸಲಾಗಿದೆ.
ಹೂಡಿಕೆ ಆಕರ್ಷಿಸುವ ಉದ್ದೇಶದಿಂದ ಏಪ್ರಿಲ್ 20ರಿಂದ 23ರವರೆಗೆ ಬೆಂಗಳೂರಿನಲ್ಲಿ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ.
ಸಾರಿಗೆ ಕ್ಷೇತ್ರದಲ್ಲಿ ಪರಿಸರ ಸ್ನೇಹಿ ವ್ಯವಸ್ಥೆ ಜಾರಿಗೆ ತರಲು ಕೇಂದ್ರದ ‘ಪಿಎಂ ಇ-ಡ್ರೈವ್’ ಯೋಜನೆಯಡಿ ಸುಮಾರು 1.20 ಕೋಟಿಯಿಂದ 1.50 ಕೋಟಿ ರೂಪಾಯಿ ಮೌಲ್ಯದ 4,500 ವಿದ್ಯುತ್ ಬಸ್ಗಳ ಕಾರ್ಯಾಚರಣೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಆರು ಕಂಪನಿಗಳಿಗೆ ಟೆಂಡರ್ ನೀಡಲಾಗಿದೆ.
ದ್ವಿತೀಯ ಮತ್ತು ತೃತೀಯ ಹಂತದ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸುವ ಕೇಂದ್ರ ಸರ್ಕಾರದ ಪರಿಷ್ಕೃತ ಪ್ರಾದೇಶಿಕ ಸಂಪರ್ಕ ಯೋಜನೆಯಡಿ ಒಪ್ಪಂದ ಮಾಡಿಕೊಳ್ಳಲು ತಾತ್ವಿಕ ಅನುಮೋದನೆಯನ್ನೂ ನೀಡಲಾಗಿದೆ ಎಂದು ಪರಮೇಶ್ವರ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.