ಬೆಂಗಳೂರು, ಜೂ. 4 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಲಪಡಿಸುವ ಜೊತೆಗೆ ರೌಡಿಸಂ ಮತ್ತು ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆ ರಚಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಹಳೆಯ ರೌಡಿಗಳು ಮಾತ್ರವಲ್ಲದೆ ಹೊಸದಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗುವವರ ಮೇಲೂ ಕಟ್ಟುನಿಟ್ಟಿನ ನಿಗಾ ಇಡಬೇಕು. ಅವರು ಮತ್ತೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ರಾಜ್ಯದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಹಾಗೂ ಅದಕ್ಕಿಂತ ಮೇಲಿನ ಹಂತದ ಹಿರಿಯ ಪೊಲೀಸ್ ಅಧಿಕಾರಿಗಳು, ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಮೊದಲ ಸಮನ್ವಯ ಸಭೆ ನಡೆಸಿದರು. ಸಭೆಯಲ್ಲಿ ಆಡಳಿತದ ಆದ್ಯತೆಗಳು, ಜನಪರ ಕಾರ್ಯಕ್ರಮಗಳು ಹಾಗೂ ಅಧಿಕಾರಿಗಳ ಜವಾಬ್ದಾರಿಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹೊಸ ಸರಕಾರ ಯಾವ ದಿಕ್ಕಿನಲ್ಲಿ ಸಾಗಲು ಬಯಸುತ್ತಿದೆ ಎಂಬ ಸ್ಪಷ್ಟ ಸಂದೇಶವನ್ನು ಅಧಿಕಾರಿಗಳಿಗೆ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದ ಆಡಳಿತ ವ್ಯವಸ್ಥೆ ಜನರ ವಿಶ್ವಾಸಕ್ಕೆ ತಕ್ಕಂತೆ ಕಾರ್ಯನಿರ್ವಹಿಸಬೇಕು. ಸರಕಾರ ಯಾವುದೇ ಜಾತಿ, ಧರ್ಮ, ಪ್ರಭಾವ ಅಥವಾ ಒತ್ತಡಕ್ಕೆ ಮಣಿಯುವುದಿಲ್ಲ. ಅಧಿಕಾರಿಗಳೂ ಸಹ ಅಂತಹ ಒತ್ತಡಗಳಿಗೆ ಮಣಿಯದೆ ಕಾನೂನು ಮತ್ತು ನಿಯಮಗಳ ಚೌಕಟ್ಟಿನೊಳಗೆ ಕೆಲಸ ಮಾಡಬೇಕು ಎಂದು ಸೂಚಿಸಲಾಗಿದೆ ಎಂದರು.
ಪಾರದರ್ಶಕತೆ, ಹೊಣೆಗಾರಿಕೆ ಹಾಗೂ ಭ್ರಷ್ಟಾಚಾರರಹಿತ ಆಡಳಿತವೇ ಹೊಸ ಸರಕಾರದ ಪ್ರಮುಖ ಗುರಿಯಾಗಿದೆ. ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಪ್ರಾಮಾಣಿಕತೆ ಹಾಗೂ ಸಾರ್ವಜನಿಕ ಹಿತಾಸಕ್ತಿಗೆ ಆದ್ಯತೆ ನೀಡಬೇಕು. ಜನರ ಸಮಸ್ಯೆಗಳನ್ನು ಕೇವಲ ದಾಖಲಿಸಿಕೊಳ್ಳುವ ಬದಲು ಅವುಗಳಿಗೆ ಶೀಘ್ರ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ರಾಜ್ಯದ ಪ್ರತಿಯೊಂದು ಇಲಾಖೆಯೂ ಮುಂದಿನ 15 ದಿನಗಳೊಳಗೆ ಸಮಗ್ರ ಕಾರ್ಯಯೋಜನೆ ರೂಪಿಸಬೇಕು. ಯಾವ ಇಲಾಖೆಯಲ್ಲಿ ಯಾವ ಯೋಜನೆಗಳು ಜಾರಿಯಲ್ಲಿವೆ, ಮುಂದಿನ ದಿನಗಳಲ್ಲಿ ಯಾವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಹಾಗೂ ಜನರಿಗೆ ತಲುಪಿಸಬೇಕಾದ ಸೇವೆಗಳ ಕುರಿತು ಸ್ಪಷ್ಟ ರೂಪುರೇಷೆ ಸಿದ್ಧಪಡಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.
ಆಡಳಿತದಲ್ಲಿ ವಿಳಂಬ, ನಿರ್ಲಕ್ಷ್ಯ ಹಾಗೂ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವ ಮನೋಭಾವಕ್ಕೆ ಅವಕಾಶವಿಲ್ಲ. ಪ್ರತಿಯೊಬ್ಬ ಅಧಿಕಾರಿಯೂ ತಮ್ಮ ಕರ್ತವ್ಯದ ಬಗ್ಗೆ ಹೊಣೆಗಾರಿಕೆಯಿಂದ ನಡೆದುಕೊಳ್ಳಬೇಕು. ಜನರ ನಿರೀಕ್ಷೆಗಳಿಗೆ ಸ್ಪಂದಿಸುವ ಆಡಳಿತವೇ ಉತ್ತಮ ಆಡಳಿತವಾಗಿದ್ದು, ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆ ರೂಪಿಸುವುದು ಸರಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.
ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಸಮಾಜಘಾತುಕ ಚಟುವಟಿಕೆಗಳು, ರೌಡಿಸಂ, ಅಕ್ರಮ ಚಟುವಟಿಕೆಗಳು ಹಾಗೂ ಸಾರ್ವಜನಿಕ ಶಾಂತಿ ಭಂಗ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಪ್ರತಿ ತಾಲ್ಲೂಕಿನಲ್ಲಿ ವಿಶೇಷ ಪಡೆ ರಚನೆಯ ಮೂಲಕ ರೌಡಿಗಳ ಚಲನವಲನಗಳ ಮೇಲೆ ನಿಗಾ ಇಡಲಾಗುವುದು. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುವ ಪ್ರವೃತ್ತಿಯನ್ನು ಆರಂಭದಲ್ಲಿಯೇ ತಡೆಯುವ ಕೆಲಸ ಮಾಡಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ದೇಶದಲ್ಲಿ ಕೇವಲ ವಿದ್ಯಾವಂತರಿದ್ದರೆ ಸಾಲದು, ಪ್ರಜ್ಞಾವಂತರೂ ಇರಬೇಕು. ಆಡಳಿತದಲ್ಲಿ ಸಾಮಾನ್ಯ ಪ್ರಜ್ಞೆ ಮತ್ತು ಮಾನವೀಯ ದೃಷ್ಟಿಕೋನ ಅತ್ಯಂತ ಮುಖ್ಯ. ಯಾವುದೇ ಸಮಸ್ಯೆಯನ್ನು ನಕಾರಾತ್ಮಕವಾಗಿ ನೋಡುವ ಬದಲು ಅದಕ್ಕೆ ಪರಿಹಾರ ಕಂಡುಕೊಳ್ಳುವ ಮನೋಭಾವ ಅಧಿಕಾರಿಗಳಲ್ಲಿ ಇರಬೇಕು. ಪ್ರತಿಯೊಂದು ಸಮಸ್ಯೆಗೂ ಒಂದು ಪರಿಹಾರವಿದ್ದು, ಸಕಾರಾತ್ಮಕ ಚಿಂತನೆಯೊಂದಿಗೆ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಸಾಧಿಸಬಹುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದರು.