ಹೊಸದಿಲ್ಲಿ, ಜುಲೈ 23: ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಹೋರಾಟಕ್ಕೆ ಬೆಂಬಲ ಸೂಚಿಸಿ ಸುಪ್ರೀಂ ಕೋರ್ಟ್ನ ವಕೀಲರು ಗುರುವಾರ ಸಂವಿಧಾನದ ಪ್ರಸ್ತಾವನೆಯನ್ನು ಓದಿ ಪ್ರತಿಭಟನೆ ನಡೆಸಿದರು.
‘ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ’ ಎಂಬ ಘೋಷವಾಕ್ಯದಡಿ ಸುಪ್ರೀಂ ಕೋರ್ಟ್ ಆವರಣದ ಉದ್ಯಾನದ ಬಳಿ ಸೇರಿದ್ದ ವಕೀಲರು ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ಓದಿದ ಬಳಿಕ ರಾಷ್ಟ್ರಗೀತೆ ಹಾಡಿದರು. ವಿದ್ಯಾರ್ಥಿಗಳ ಬೇಡಿಕೆಗಳಿಗೆ ನ್ಯಾಯ ದೊರಕಬೇಕು ಎಂಬ ಆಗ್ರಹವನ್ನು ಅವರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ವಕೀಲೆ ಇಂದಿರಾ ಜಯಸಿಂಗ್, ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತುವುದು ವಕೀಲರ ನೈತಿಕ ಹಾಗೂ ಸಾಂವಿಧಾನಿಕ ಹೊಣೆಗಾರಿಕೆ ಎಂದು ಹೇಳಿದರು. ವಿದ್ಯಾರ್ಥಿಗಳಿಗೆ ನ್ಯಾಯ ದೊರಕಬೇಕೆಂಬ ಉದ್ದೇಶದಿಂದಲೇ ತಾವು ನ್ಯಾಯಾಲಯದ ಮುಂದೆ ನಿಂತಿದ್ದು, ಇದು ವಕೀಲರ ಹಕ್ಕಿನ ಹೋರಾಟವಲ್ಲ; ವಿದ್ಯಾರ್ಥಿಗಳ ಹಕ್ಕುಗಳಿಗಾಗಿ ನಡೆಸುತ್ತಿರುವ ಬೆಂಬಲದ ಅಭಿಯಾನವಾಗಿದೆ ಎಂದು ತಿಳಿಸಿದರು.
ಮೇ 3ರಂದು ನಡೆದ ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ದೇಶಾದ್ಯಂತ ಭಾರಿ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಜೂನ್ 21ರಂದು ಮರುಪರೀಕ್ಷೆ ನಡೆಸಿತ್ತು. ಆದರೆ ಮರುಪರೀಕ್ಷೆಯ ಕೀ ಉತ್ತರಗಳು ಮತ್ತು ಫಲಿತಾಂಶದಲ್ಲಿ ಪ್ರಕಟವಾದ ಅಂಕಗಳ ನಡುವೆ ವ್ಯತ್ಯಾಸವಿದೆ ಎಂಬ ಆರೋಪಗಳು ವಿದ್ಯಾರ್ಥಿಗಳಿಂದ ಕೇಳಿಬಂದಿವೆ.
ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡಬೇಕು, ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ ನೀಡಬೇಕು ಹಾಗೂ ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಿಜೆಪಿ ಜೂನ್ 20ರಿಂದ ಜಂತರ್ ಮಂತರ್ನಲ್ಲಿ ನಿರಂತರ ಪ್ರತಿಭಟನೆ ನಡೆಸುತ್ತಿದೆ.