ePaper
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರೆ ಹೇಗೆ ರೈತ ಮುಖಂಡರಿಗೆ ಸಿಎಂ ಪ್ರಶ್ನೆ

ಬೆಂಗಳೂರು : ಸಕ್ಕರೆಗೆ ಎಂಎಸ್ಪಿ ನಿಗದಿಪಡಿಸುವುದು ಕೇಂದ್ರ ಸರ್ಕಾರ. ಇದೇ ರೀತಿ ಕಬ್ಬಿಗೆ ಎಫ್ಆರ್ ಪಿ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಎಥೆನಾಲ್ ಹಂಚಿಕೆ ನಿಗದಿಪಡಿಸುವವರು ಕೇಂದ್ರ ಸರ್ಕಾರ. ಸಕ್ಕರೆ ರಫ್ತು ಮಿತಿ ನಿಗದಿಪಡಿಸುವವರು ಸಹ ಕೇಂದ್ರ ಸರ್ಕಾರ ಅಂತ ನೀವೇ ಹೇಳ್ತೀರಿ. ಅವರಿಂದ ಆಗಿರುವ ಸಮಸ್ಯೆಗೆ ರಾಜ್ಯ ಸರ್ಕಾರದಿಂದ ಪರಿಹಾರ ಕೇಳಿದರೆ ಹೇಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಮುಖಂಡರಿಗೆ ಪ್ರಶ್ನಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಕ್ಕರೆ ಕಾರ್ಖಾನೆಯ ಮಾಲೀಕರ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ತೂಕದಲ್ಲಿ ಮೋಸ, ರಿಕವರಿ ಕಡಿಮೆ ತೋರಿಸುವುದು ಸೇರಿದಂತೆ ಸಕ್ಕರೆ ಕಾರ್ಖಾನೆಗಳ ಕುರಿತು ಕಬ್ಬು ಬೆಳೆಗಾರರಿಗೆ ಇರುವ ಎಲ್ಲಾ ಅಹವಾಲುಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೇಂದ್ರ ಸರ್ಕಾರ ಕಬ್ಬಿಗೆ ನಿಗದಿಪಡಿಸಿರುವ ಎಫ್ಆರ್ ಪಿ ವೈಜ್ಞಾನಿಕವಾಗಿಲ್ಲ. ಸಕ್ಕರೆ ಕಾರ್ಖಾನೆಗಳು ಇಳುವರಿ ರಿಕವರಿ ಕಡಿಮೆ ತೋರಿಸುತ್ತಿವೆ. ಇದನ್ನು ತಪ್ಪಿಸಲು ಪ್ರತಿ ಕಾರ್ಖಾನೆ ಎದುರು ಸರ್ಕಾರದ ವತಿಯಿಂದ ಪ್ರಯೋಗಾಲಯ ತೆರೆಯಬೇಕು. ಕೆಲವು ಕಾರ್ಖಾನೆಗಳು ಹಳೆಯ ಬಾಕಿಯನ್ನು ಉಳಿಸಿಕೊಂಡಿದ್ದು, ಇದರ ಪಾವತಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಮನವಿ ಮಾಡಿದರು.

ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಸಮಸ್ಯೆ ಬಗೆಹರಿಸಲು ನಾವು ಸಿದ್ದರಿದ್ದೇವೆ. ಕೇಂದ್ರ ಸರ್ಕಾರ ಪರಿಹರಿಸಬೇಕಾದ ಸಮಸ್ಯೆಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ ಎಂದು ರೈತ ಮುಖಂಡರಿಗೆ ಸಿಎಂ ಪ್ರಶ್ನೆ ಮಾಡಿದರು.

ನೀವು ಕೇಂದ್ರದ ಮೇಲೆ ಒತ್ತಡ ಹೇರಿ ಸಮಸ್ಯೆ ಬಗೆಹರಿಸಬೇಕು ಎಂದು ರೈತ ಮುಖಂಡರು ಆಗ್ರಹ ಮಾಡಿದರು.

ಕಾರ್ಖಾನೆಗಳು ತೂಕದಲ್ಲಿ ಮೋಸ ಮಾಡುತ್ತಿವೆ. ಇಳುವರಿ ಕಡಿಮೆ ತೋರಿಸುತ್ತಿವೆ ಎಂದು ರೈತ ಮುಖಂಡರ ಆಕ್ರೋಶ ವ್ಯಕ್ತಪಡಿಸಿದರು.

ಎಫ್ ಆರ್ ಪಿ ದರ ನಿಗದಿ ಮಾಡುವಾಗ ಕೇಂದ್ರ ಅವೈಜ್ಞಾನಿಕ ಕ್ರಮ ಅನುಸರಿಸಿದೆ. ಉತ್ಪಾದನಾ ವೆಚ್ಚ ಹಿಂದಿನ ವರ್ಷಗಳಿಗಿಂತ 4 ಸಾವಿರ ಕಡಿಮೆ ತೋರಿಸಿದ್ದಾರೆ. ಇದ್ಯಾವ ಲೆಕ್ಕಾಚಾರ ಎನ್ನುವುದು ರೈತ ಮುಖಂಡರ ಪ್ರಶ್ನೆ.

ಬಾಗಲಕೋಟೆಯಲ್ಲಿ ಕಾರ್ಖಾನೆಯೊಂದು ಹಿಂದಿನ ವರ್ಷದ ಬಾಕಿ ಉಳಿಸಿಕೊಂಡಿದೆ ಎಂದು ರೈತ ಮುಖಂಡರು ದೂರಿದರು. ಇದಕ್ಕೆ ಸಚಿವ ಶಿವಾನಂದ ಪಾಟೀಲ್ ಅವರು ಬಾಕಿ ತೀರಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.