ಬೆಂಗಳೂರು, ಏ.30 : ರಾಜಕೀಯ ಉದ್ದೇಶಗಳಿಗೆ ಧಾರ್ಮಿಕ ಸ್ಥಳಗಳನ್ನು ಬಳಸುವುದು ಸರಿಯಲ್ಲ ಎಂದು ಕಠಿಣವಾಗಿ ಸೂಚಿಸಿರುವ ಹೈಕೋರ್ಟ, ಕಳೆದ ಲೋಕಸಭೆ ಚುನಾವಣೆಯ ವೇಳೆ ದೇವಸ್ಥಾನದಲ್ಲಿ ರಾಜಕೀಯ ಸಭೆ ನಡೆಸಿದ ಆರೋಪದಡಿ ಕೆ.ಎಸ್. ಈಶ್ವರಪ್ಪ ಹಾಗೂ ಇತರರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಲು ನಿರಾಕರಿಸಿ ವಿಚಾರಣೆಯನ್ನು ಮುಂದೂಡಿದೆ.
ಶಿವಮೊಗ್ಗದ ತುಂಗಾನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಅದಕ್ಕೆ ಸಂಬಂಧಿಸಿದ ಆರೋಪ ಪಟ್ಟಿಯನ್ನು ರದ್ದುಪಡಿಸುವಂತೆ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸೇರಿದಂತೆ 9 ಮಂದಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಸುನೀಲ ದತ್ ಯಾದವ್ ಅವರ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲ ಲೀಲೇಶ ಕೃಷ್ಣ ವಾದಿಸಿ, ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಯಾವುದೇ ರಾಜಕೀಯ ಭಾಷಣ ನಡೆದಿಲ್ಲ. ದೂರಿನಲ್ಲಿ ಸ್ಪಷ್ಟ ವಿವರಗಳಿಲ್ಲ. ಧಾರ್ಮಿಕ ಸ್ಥಳಗಳ ದುರ್ಬಳಕೆ ತಡೆ ಕಾಯ್ದೆಯಡಿ ಅಪರಾಧವಾಗುವಂತಹ ಕೃತ್ಯ ನಡೆದಿಲ್ಲ. 14 ಸಾಕ್ಷಿಗಳಲ್ಲಿ 13 ಮಂದಿ ಸರ್ಕಾರಿ ಅಧಿಕಾರಿಗಳಾಗಿದ್ದು, ಒಬ್ಬ ಮಾತ್ರ ಪ್ರತ್ಯಕ್ಷ ಸಾಕ್ಷಿ ಎಂದು ತಿಳಿಸಿದರು.
ಇದಕ್ಕೆ ಪ್ರತಿಯಾಗಿ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ವಾದಿಸಿ, ದೇವಸ್ಥಾನದಲ್ಲಿ ಸಭೆ ನಡೆಸಿ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಚರ್ಚೆ ನಡೆದಿರುವುದರಿಂದ ಸಂಬಂಧಿತ ಕಾಯ್ದೆಯಡಿ ಪ್ರಕರಣ ದಾಖಲಿಸಿರುವುದು ಸಮರ್ಥನೀಯ ಎಂದು ತಿಳಿಸಿದರು.
ಎರಡೂ ಪಕ್ಷಗಳ ವಾದಗಳನ್ನು ಆಲಿಸಿದ ನ್ಯಾಯಪೀಠ, ವಿಚಾರದಲ್ಲಿ ಭಿನ್ನ ಅಭಿಪ್ರಾಯಗಳಿರುವುದರಿಂದ ವಿಸ್ತೃತ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ಅರ್ಜಿಯನ್ನು ಜೂನ್ 15 ನಂತರಕ್ಕೆ ಪಟ್ಟಿ ಮಾಡಲು ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.
ಈ ವೇಳೆ ಕನಿಷ್ಠ ದೇವಸ್ಥಾನದ ಅರ್ಚಕ ಹಾಗೂ ಮತ್ತೊಬ್ಬ ಅರ್ಜಿದಾರರ ವಿರುದ್ಧದ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಮನವಿ ಮಾಡಲಾಯಿತು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಧಾರ್ಮಿಕ ಸ್ಥಳಗಳನ್ನು ರಾಜಕೀಯ ಉದ್ದೇಶಗಳಿಗೆ ಬಳಸುವುದು ಅನುಮತಿಸಲಾಗುವುದಿಲ್ಲ. ಇದಕ್ಕೆ ಅಂತ್ಯ ಇರಬೇಕು ಎಂದು ಮೌಖಿಕವಾಗಿ ತೀಕ್ಷ್ಣವಾಗಿ ಅಭಿಪ್ರಾಯ ವ್ಯಕ್ತಪಡಿಸಿತು.
ಪ್ರಕರಣದ ವಿವರ
2024ರ ಲೋಕಸಭೆ ಚುನಾವಣೆಯ ಸಮಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದಾಗ ಶಿವಮೊಗ್ಗದ ಆದಿ ರಂಗನಾಥ ದೇವಾಲಯದಲ್ಲಿ ಈಶ್ವರಪ್ಪ ಹಾಗೂ ಇತರರು ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸಭೆ ನಡೆಸಿದ್ದರು ಎನ್ನಲಾಗಿದೆ. ಈ ಕುರಿತು ಚುನಾವಣಾ ವೀಕ್ಷಕರ ದೂರು ಆಧಾರವಾಗಿ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈಶ್ವರಪ್ಪ ಸೇರಿದಂತೆ 9 ಮಂದಿಯ ವಿರುದ್ಧ ಧಾರ್ಮಿಕ ಸಂಸ್ಥೆಗಳ ದುರ್ಬಳಕೆ ತಡೆ ಕಾಯ್ದೆಯ ಸೆಕ್ಷನ್ 3, 6 ಮತ್ತು 7ರಡಿ ಪ್ರಕರಣ ದಾಖಲಿಸಲಾಗಿದೆ.