ಹೊಸದಿಲ್ಲಿ, ಆಗಸ್ಟ್ 19: ದೇಶದ ಗ್ರಾಮೀಣ ಭಾಗಗಳ ಸರ್ಕಾರಿ ಶಾಲೆಗಳ ಮೂಲಸೌಕರ್ಯವನ್ನು ಸುಧಾರಿಸಲು ಹಾಗೂ 1,000ಕ್ಕೂ ಹೆಚ್ಚು ಅತ್ಯಾಧುನಿಕ ಮಾದರಿ ಶಾಲೆಗಳನ್ನು ನಿರ್ಮಿಸಲು ಪಿಎಂ ಕೇರ್ಸ್ ನಿಧಿಯನ್ನು ಬಳಸಬೇಕು ಎಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ ದೀಪ್ಕೆ ಆಗ್ರಹಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳ ಮೂಲಸೌಕರ್ಯ ಕೊರತೆಗಳನ್ನು ಎತ್ತಿ ತೋರಿಸುವ ಉದ್ದೇಶದಿಂದ ಸಿಜೆಪಿ ಕೈಗೊಂಡಿರುವ ‘ಸ್ಕೂಲ್ ಥಿಕ್ ಕರೋ’ ಅಭಿಯಾನದಡಿ ಅವರು ಈ ವಿಚಾರ ಪ್ರಸ್ತಾಪಿಸಿದ್ದಾರೆ. ದೇಶದ ಹಲವು ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳು ಶಾಲೆಗೆ ತೆರಳಲು ಉತ್ತಮ ರಸ್ತೆ, ಶಾಲೆಯಲ್ಲಿ ಕುಳಿತುಕೊಳ್ಳಲು ಸೂಕ್ತ ಬೆಂಚುಗಳು ಹಾಗೂ ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳಿಗಾಗಿ ಪರದಾಡುತ್ತಿರುವ ಪರಿಸ್ಥಿತಿ ಇದೆ ಎಂದು ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ವಿಡಿಯೋ ಸಂದೇಶದಲ್ಲಿ, ಒಂದೆಡೆ ಸಾವಿರಾರು ಕೋಟಿ ರೂಪಾಯಿ ನಿಧಿ ಬಳಕೆಯಾಗದೆ ಉಳಿದಿದ್ದರೆ, ಮತ್ತೊಂದೆಡೆ ದೇಶದ ಮಕ್ಕಳು ಶಾಲೆಗೆ ತೆರಳಲು ಅಗತ್ಯವಿರುವ ಮೂಲಸೌಕರ್ಯಗಳ ಕೊರತೆಯಿಂದ ಸಂಕಷ್ಟಪಡುತ್ತಿದ್ದಾರೆ ಎಂದು ಅವರು ಗಮನ ಸೆಳೆದಿದ್ದಾರೆ.
“ಶಾಲೆಗಳ ಮೂಲಸೌಕರ್ಯ ಸುಧಾರಣೆಗಾಗಿ ಈ ಹಣವನ್ನು ಏಕೆ ಬಳಸಬಾರದು? ಹೊಸ ಶಾಲೆಗಳನ್ನು ನಿರ್ಮಿಸಲು ಈ ನಿಧಿಯನ್ನು ಏಕೆ ವಿನಿಯೋಗಿಸಬಾರದು?” ಎಂದು ಪ್ರಶ್ನಿಸಿರುವ ಅವರು, ಉತ್ತಮ ಮೂಲಸೌಕರ್ಯ ಹೊಂದಿರುವ ಒಂದು ಮಾದರಿ ಶಾಲೆ ನಿರ್ಮಾಣಕ್ಕೆ ಸುಮಾರು ₹8 ಕೋಟಿ ವೆಚ್ಚವಾಗುತ್ತದೆ ಎಂದು ಅಂದಾಜಿಸಿದರೆ, ₹8,500 ಕೋಟಿಯಲ್ಲಿ 1,000ಕ್ಕೂ ಹೆಚ್ಚು ಅತ್ಯಾಧುನಿಕ ಮಾದರಿ ಶಾಲೆಗಳನ್ನು ನಿರ್ಮಿಸಬಹುದಾಗಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದ ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆಗಳಿಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಪರಿಸ್ಥಿತಿ ಅತ್ಯಂತ ಹದಗೆಟ್ಟಿರುವುದು ಕಂಡುಬಂದಿದೆ. ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಏಕೆ ಇದೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದಾಗ, ನಿಧಿಯ ಕೊರತೆಯಿದೆ ಎಂಬ ಉತ್ತರ ದೊರೆತಿತ್ತು ಎಂದು ಅವರು ತಿಳಿಸಿದ್ದಾರೆ.
ಒಂದೆಡೆ ಶಾಲೆಗಳ ಅಭಿವೃದ್ಧಿಗೆ ಹಣದ ಕೊರತೆಯಿದೆ ಎಂದು ಹೇಳಲಾಗುತ್ತಿದ್ದರೆ, ಮತ್ತೊಂದೆಡೆ ಪಿಎಂ ಕೇರ್ಸ್ ನಿಧಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಉಳಿದಿವೆ. ಈ ಹಣವನ್ನು ಮಕ್ಕಳ ಶಿಕ್ಷಣ ಹಾಗೂ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸಬಾರದೇ ಎಂದು ಅವರು ಪ್ರಶ್ನಿಸಿದ್ದಾರೆ.
ಪಿಎಂ ಕೇರ್ಸ್ ನಿಧಿಯನ್ನು ಜನರ ಕಲ್ಯಾಣ, ಶಿಕ್ಷಣ ಮತ್ತು ಬಡ ಮಕ್ಕಳ ಶಾಲೆಗಳ ಅಭಿವೃದ್ಧಿಗೆ ಬಳಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡುವಂತೆ ಸಾರ್ವಜನಿಕರಿಗೆ ಕರೆ ನೀಡಿರುವ ದೀಪ್ಕೆ, ಪ್ರಧಾನಿಗೆ ನಿಜವಾಗಿಯೂ ಮಕ್ಕಳ ಶಿಕ್ಷಣದ ಬಗ್ಗೆ ಕಾಳಜಿ ಇದ್ದರೆ ಈ ನಿಧಿಯನ್ನು ಸರ್ಕಾರಿ ಶಾಲೆಗಳ ಸುಧಾರಣೆಗೆ ಬಳಸುವ ಮೂಲಕ ಅದನ್ನು ತೋರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ, ಸಿಜೆಪಿ ಸಂಸ್ಥಾಪಕರು ‘ಎಕ್ಸ್’ನಲ್ಲಿ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದು, ಅದರಲ್ಲಿ ಸ್ವಚ್ಛತೆ ಇಲ್ಲದ ಶೌಚಾಲಯ ಹಾಗೂ ಶಿಥಿಲಗೊಂಡಿರುವ ಶಾಲಾ ಕಟ್ಟಡದ ಚಿತ್ರಗಳನ್ನು ಪ್ರಕಟಿಸಿದ್ದಾರೆ. ಪಿಎಂ ಕೇರ್ಸ್ ನಿಧಿಯನ್ನು ಇಂತಹ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಸದುಪಯೋಗಪಡಿಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.
ಇತ್ತೀಚಿನ ಲೆಕ್ಕಪರಿಶೋಧನಾ ವರದಿ ಪ್ರಕಾರ, ಪ್ರಧಾನ ಮಂತ್ರಿಯವರ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ಪರಿಹಾರ ನಿಧಿ ಎಂದು ಕರೆಯಲಾಗುವ ಪಿಎಂ ಕೇರ್ಸ್ ನಿಧಿಯ ಒಟ್ಟು ಮೊತ್ತವು 2025ರ ಮಾರ್ಚ್ 31ಕ್ಕೆ ₹8,452 ಕೋಟಿಗೆ ತಲುಪಿದೆ. ಹಿಂದಿನ ವರ್ಷ ಇದೇ ಅವಧಿಯಲ್ಲಿ ನಿಧಿಯಲ್ಲಿದ್ದ ಮೊತ್ತ ₹7,173 ಕೋಟಿಯಾಗಿತ್ತು. ಪ್ರಸ್ತುತ ಒಟ್ಟು ಮೊತ್ತದಲ್ಲಿ ₹7,846 ಕೋಟಿಯನ್ನು ಸ್ಥಿರ ಠೇವಣಿಗಳಲ್ಲಿ ಹಾಗೂ ₹605 ಕೋಟಿಯನ್ನು ಬ್ಯಾಂಕ್ ಉಳಿತಾಯ ಖಾತೆಗಳಲ್ಲಿ ಇರಿಸಲಾಗಿದೆ ಎಂದು ವರದಿ ತಿಳಿಸಿದೆ.
ಕೋವಿಡ್-19 ಸಾಂಕ್ರಾಮಿಕದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ನೆರವು ನೀಡುವ ಉದ್ದೇಶದ ‘ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್’ ಯೋಜನೆಗಾಗಿ ನಿಧಿಯಿಂದ ₹87.8 ಲಕ್ಷ ವೆಚ್ಚ ಮಾಡಲಾಗಿದೆ. ಹಿಂದಿನ ವರ್ಷ ಈ ಯೋಜನೆಗಾಗಿ ₹15.37 ಕೋಟಿ ವೆಚ್ಚ ಮಾಡಲಾಗಿತ್ತು. ಇದಕ್ಕೆ ಹೋಲಿಸಿದರೆ ಪ್ರಸಕ್ತ ವೆಚ್ಚದಲ್ಲಿ ಗಣನೀಯ ಇಳಿಕೆಯಾಗಿದೆ ಎಂದು ವರದಿ ಉಲ್ಲೇಖಿಸಿದೆ.
ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕ ಕಾಣಿಸಿಕೊಂಡ ಕೆಲವೇ ದಿನಗಳ ಬಳಿಕ, 2020ರ ಮಾರ್ಚ್ 27ರಂದು ಕೇಂದ್ರ ಸರ್ಕಾರ ಪಿಎಂ ಕೇರ್ಸ್ ನಿಧಿಯನ್ನು ಸ್ಥಾಪಿಸಿತ್ತು. ಪ್ರಧಾನಮಂತ್ರಿ ಈ ನಿಧಿಯ ಅಧ್ಯಕ್ಷರಾಗಿದ್ದು, ಕೇಂದ್ರ ಸಚಿವ ಸಂಪುಟದ ಹಿರಿಯ ಸಚಿವರು ಟ್ರಸ್ಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿಧಿಯ ಆಡಳಿತವನ್ನು ಪ್ರಧಾನಮಂತ್ರಿ ಕಾರ್ಯಾಲಯ ನಿರ್ವಹಿಸುತ್ತಿದೆ.