ಬೆಂಗಳೂರು, ಏಪ್ರಿ. 17 : ಧಾರವಾಡ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಬುಧವಾರವೇ ಶಾಸಕ ಸೇರಿ 16 ಮಂದಿಯನ್ನು ದೋಷಿ ಎಂದು ಘೋಷಿಸಿದ್ದ ನ್ಯಾಯಾಲಯವು ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಕಾಯ್ದೆ ಪ್ರಕಾರ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ತಕ್ಷಣದಿಂದಲೇ ರದ್ದಾಗಿದೆ.
ಜನಪ್ರತಿನಿಧಿ ಕಾಯ್ದೆ 1951 ಅನ್ವಯ, ಯಾವುದೇ ಜನಪ್ರತಿನಿಧಿ ಕ್ರಿಮಿನಲ್ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿ ಕನಿಷ್ಠ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಶಿಕ್ಷೆಗೆ ಗುರಿಯಾದರೆ ಅವರು ತಕ್ಷಣವೇ ತಮ್ಮ ಸ್ಥಾನ ಕಳೆದುಕೊಳ್ಳುತ್ತಾರೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿರುವುದರಿಂದ ಈ ನಿಯಮ ಅನ್ವಯವಾಗಿದೆ.
ಐಪಿಸಿ ಕಲಂ 302 ಪ್ರಕಾರ ಕೊಲೆ ಅಪರಾಧಕ್ಕೆ ಜೀವಾವಧಿ ಕಾರಾಗೃಹ ವಾಸ ಅಥವಾ ಮರಣದಂಡನೆ ಶಿಕ್ಷೆ ವಿಧಿಸುವ ಅವಕಾಶವಿದ್ದು, ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ನೀಡಲಾಗಿದೆ. ಶಿಕ್ಷೆ ಅನುಭವಿಸಿದ ನಂತರವೂ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಇರುವುದಿಲ್ಲ ಎಂಬ ನಿಯಮವೂ ಅನ್ವಯವಾಗುತ್ತದೆ.
ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದು, ಕರ್ನಾಟಕ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಬಹುದು. ಮೇಲ್ಮನವಿ ನ್ಯಾಯಾಲಯವು ಅಪರಾಧ ನಿರ್ಣಯದ ಮೇಲೂ ತಡೆಯಾಜ್ಞೆ ನೀಡಿದರೆ ಮಾತ್ರ ಶಾಸಕ ಸ್ಥಾನ ಮರುಸ್ಥಾಪನೆ ಸಾಧ್ಯವಾಗುತ್ತದೆ ಎಂದು ಕಾನೂನು ತಜ್ಞರು ತಿಳಿಸಿದ್ದಾರೆ.